ಬೆಂಗಳೂರು: ಸ್ವಾತಂತ್ರ್ಯ ಯೋಧರು ಆರಂಭಿಸಿದ್ದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಆಸ್ತಿಯನ್ನು ಒಂದು ಕುಟುಂಬ ಕಬಳಿಸುತ್ತಿರುವ ಆರೋಪದ ಕುರಿತು ತನಿಖೆ ನಡೆಯುತ್ತಿದೆ. ಪಕ್ಷದ ನಾಯಕರ ಬಂಧನದ ಭೀತಿಯಿಂದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಪ್ರತಿಭಟನೆಗೆ ಇಳಿದಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ ಟೀಕಿಸಿದರು.
ಸುದ್ದಿಗಾರರ ಜತೆ ಮಂಗಳವಾರ ಮಾತನಾಡಿದ ಅವರು, ‘ಜಾರಿ ನಿರ್ದೇಶನಾಲಯ (ಇ.ಡಿ) ಕಾಂಗ್ರೆಸ್ ಪಕ್ಷದ ವಿರುದ್ಧ ತನಿಖೆ ನಡೆಸುತ್ತಿಲ್ಲ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ತನಿಖೆ ನಡೆಸುತ್ತಿದೆ. ನ್ಯಾಷನಲ್ ಹೆರಾಲ್ಡ್ ಆಸ್ತಿಯ ಮೇಲೆ ಒಂದು ಕುಟುಂಬದ ಹಿಡಿತದ ಕುರಿತು ತನಿಖೆ ನಡೆಯುತ್ತಿದೆ’ ಎಂದರು.
ಈ ಪ್ರಕರಣದಲ್ಲಿ ಸುಬ್ರಮಣಿಯನ್ ಸ್ವಾಮಿ ನೀಡಿದ್ದ ದೂರನ್ನು ಆಧರಿಸಿ ತನಿಖೆ ನಡೆಯುತ್ತಿದೆ. ಸಾಮಾನ್ಯ ವ್ಯಕ್ತಿಗಳ ಮೇಲೂ ಇದೇ ರೀತಿ ತನಿಖೆ ನಡೆಯುತ್ತದೆ. ಆರೋಪ ಸಾಬೀತಾದರೆ ಕ್ರಮವಾಗುತ್ತದೆ. ಇಲ್ಲವಾದರೆ ನಿರಪರಾಧಿಯಾಗಿ ಹೊರ ಬರುತ್ತಾರೆ. ಈ ನಿಯಮ ಎಲ್ಲರಿಗೂ ಅನ್ವಯವಾಗುತ್ತದೆ. ಇದು ಇಟಲಿಯಲ್ಲ, ಭಾರತ ಎಂದು ಹೇಳಿದರು.
ಒಂದು ಕುಟುಂಬವನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷವನ್ನೇ ಬಳಕೆ ಮಾಡಲಾಗುತ್ತಿದೆ. ಬಂಧನದಿಂದ ತಪ್ಪಿಸಿಕೊಳ್ಳಲು ಪ್ರತಿಭಟನೆ ಮಾಡಲಾಗುತ್ತಿದೆ. ಸ್ವಾತಂತ್ರ್ಯ ಹೋರಾಟಗಾರರು ಹಣ ವಿನಿಯೋಗಿಸಿ ಆರಂಭಿಸಿದ ಪತ್ರಿಕೆಯ ಆಸ್ತಿಯನ್ನು ಒಂದು ಕುಟುಂಬ ಕಬಳಿಸುತ್ತಿರುವ ಆರೋಪದ ಕುರಿತು ತನಿಖೆ ನಡೆಯುತ್ತಿದೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.