ADVERTISEMENT

ಮತಾಂತರ ನಿಷೇಧ ಕಾಯ್ದೆಗೆ ಮಠಾಧೀಶರಿಂದಲೂ ಒತ್ತಾಯ: ಸಚಿವ ಅಶೋಕ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2021, 11:01 IST
Last Updated 10 ಡಿಸೆಂಬರ್ 2021, 11:01 IST
ಸಚಿವ ಆರ್‌.ಅಶೋಕ
ಸಚಿವ ಆರ್‌.ಅಶೋಕ   

ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟರು, ಹಿಂದುಳಿದವರು ಮಾತ್ರವಲ್ಲ ಲಿಂಗಾಯತರನ್ನೂ ಮತಾಂತರಿಸಲಾಗುತ್ತಿದೆ. ಇದರಿಂದ ಆಯಾ ಸಮುದಾಯಗಳ ಮಠಾಧೀಶರು ಮತಾಂತರ ನಿಷೇಧ ಕಾಯ್ದೆಯನ್ನು ಜಾರಿ ತರಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ ಎಂದು ಕಂದಾಯ ಸಚಿವ ಆರ್‌.ಅಶೋಕ ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಸ್‌.ನಿಜಲಿಂಗಪ್ಪ ಅವರ ಜನ್ಮದಿನದ ಅಂಗವಾಗಿ ಶುಕ್ರವಾರ ವಿಧಾನಸೌಧ ಪಶ್ಚಿಮ ದ್ವಾರದಲ್ಲಿ ಇರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸುದ್ದಿಗಾರರ ಜತೆ ಮಾತನಾಡಿ, ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವುದರಲ್ಲಿ ತಪ್ಪೇನು ಇಲ್ಲ. ಈ ಅಧಿವೇಶನದಲ್ಲಿ ಮಂಡಿಸುವ ಬಗ್ಗೆ ನಿರ್ಧಾರ ಆಗಿಲ್ಲ ಎಂದರು.

ಲಿಂಗಾಯತ, ಬೋವಿ ಸಮಾಜದ ಸ್ವಾಮೀಜಿಗಳು ಧ್ವನಿ ಎತ್ತಿದ್ದಾರೆ. ವಿವಿಧ ರೀತಿಯ ಆಮಿಷಗಳನ್ನು ಒಡ್ಡಿ ಮತಾಂತರ ಮಾಡಲಾಗುತ್ತಿದೆ. ಇದು ಕಾನೂನಿನ ಪ್ರಕಾರ ಅಪರಾಧ. ಯಾವುದೇ ಒಂದು ಧರ್ಮದ ತತ್ವಗಳನ್ನು ಆಳವಾಗಿ ತಿಳಿದು ಮತಾಂತರ ಆಗುವವವರ ಸಂಖ್ಯೆ ತೀರಾ ಕಡಿಮೆ. ಅದಕ್ಕೆ ನಮ್ಮ ಅಭ್ಯಂತರ ಇಲ್ಲ. ಆಮಿಷ ಒಡ್ಡಿ ಮತಾಂತರ ಮಾಡುವವರನ್ನು ಗುರುತಿಸಿ ಮಟ್ಟ ಹಾಕಬೇಕು. ಸಮಾಜದ ವಿವಿಧ ಜಾತಿ ಸಮೀಕರಣದ ಚೌಕಟ್ಟನ್ನು ಒಡಯುವ ಕೆಲಸ ಆಗುತ್ತಿದೆ ಎಂದರು.

ADVERTISEMENT

ಮತಾಂತರ ನಿಷೇಧ ಕಾಯ್ದೆಯ ಬಗ್ಗೆ ತಪ್ಪು ಮಾಡುತ್ತಿರುವವರು ಮಾತ್ರ ಹೆದರಬೇಕು. ತಪ್ಪು ಮಾಡದವರಿಗೆ ಭಯ ಏಕೆ? ಮತಾಂತರ ನಿಷೇಧ ಕಾಯ್ದೆಯನ್ನು ಕಾಂಗ್ರೆಸ್‌ ವಿರೋಧ ಮಾಡುತ್ತಿದೆ. ಇದರಲ್ಲಿ ವಿಶೇಷವೇನೂ ಇಲ್ಲ. ಇವರಿಗೆ ದೇಶ ಮತ್ತು ರಾಜ್ಯದ ಬಗ್ಗೆ ಪ್ರೀತಿ ಇಲ್ಲ. ಅಲ್ಪಸಂಖ್ಯಾತರ ಮತಗಳಿಗಾಗಿ ಮತಾಂತರ ನಿಷೇಧ ಕಾಯ್ದೆಯನ್ನು ವಿರೋಧಿಸುತ್ತಿದೆ ಎಂದು ಅಶೋಕ ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.