ADVERTISEMENT

ಕೌಟುಂಬಿಕ ನ್ಯಾಯಾಲಯದ ಆದೇಶ ರದ್ದು: ಹೈಕೋರ್ಟ್‌ನಲ್ಲಿ ವಿಚ್ಛೇದನ ಮಂಜೂರು

​ಪ್ರಜಾವಾಣಿ ವಾರ್ತೆ
Published 4 ಜುಲೈ 2023, 23:30 IST
Last Updated 4 ಜುಲೈ 2023, 23:30 IST
ಹೈಕೋರ್ಟ್‌
ಹೈಕೋರ್ಟ್‌    

ಬೆಂಗಳೂರು: ಕ್ರೌರ್ಯದ ಆಧಾರದಡಿ ವಿಚ್ಛೇದನ ನೀಡುವಂತೆ ಪತ್ನಿ ಸಲ್ಲಿಸಿದ್ದ ಅರ್ಜಿಗೆ ಪತಿ ಆಕ್ಷೇಪಣೆ ಸಲ್ಲಿಸದೇ ಇದ್ದರೂ ಪತ್ನಿಯ ಅರ್ಜಿಯನ್ನು ವಜಾಗೊಳಿಸಿದ್ದ ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್‌ ರದ್ದುಪಡಿಸಿದೆ. ಅಂತೆಯೇ, ದಂಪತಿಗೆ ವಿಚ್ಛೇದನ ಮಂಜೂರು ಮಾಡಿ ಆದೇಶಿಸಿದೆ.

ವಿಚ್ಛೇದನ ಅರ್ಜಿ ವಜಾಗೊಳಿಸಿದ್ದ ಮೈಸೂರಿನ 1ನೇ ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯದ ಕ್ರಮವನ್ನು ಪ್ರಶ್ನಿಸಿ 30 ವರ್ಷದ ಮಹಿಳೆಯೊಬ್ಬರು ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ಅಲೋಕ್ ಅರಾಧೆ ಹಾಗೂ ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ವಿಭಾಗೀಯ ನ್ಯಾಯಪೀಠ ಮಾನ್ಯ ಮಾಡಿದೆ.

‘ಪತ್ನಿ ಸಲ್ಲಿಸಿದ್ದ ವಿಚ್ಛೇದನ ಅರ್ಜಿಯ ವಿಚಾರಣೆಗೆ ಪತಿ ಹಾಜರಾಗಿದ್ದರೂ, ಅದಕ್ಕೆ ಆಕ್ಷೇಪಣೆ ಸಲ್ಲಿಸಿಲ್ಲ. ಪತ್ನಿಯನ್ನು ಪಾಟಿ ಸವಾಲಿಗೆ ಒಳಪಡಿಸಿ, ಆಕೆ ಒದಗಿಸಿರುವ ಸಾಕ್ಷ್ಯಾಧಾರಗಳನ್ನೂ ಪರಿಶೀಲನೆ ಮಾಡಿಲ್ಲ. ಆದರೂ, ಪತ್ನಿಯ ಅರ್ಜಿಯನ್ನು ವಜಾಗೊಳಿಸುವ ಮೂಲಕ ಕೌಟುಂಬಿಕ ನ್ಯಾಯಾಲಯ ಲೋಪ ಎಸಗಿದೆ‘ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ADVERTISEMENT

ವಿಚ್ಛೇದನ ಅರ್ಜಿ ವಜಾಗೊಳಿಸಿ 2017ರ ಮಾರ್ಚ್ 27ರಂದು ಕೌಟುಂಬಿಕ ನ್ಯಾಯಾಲಯ ಹೊರಡಿಸಿದ್ದ ಆದೇಶವನ್ನು ರದ್ದುಪಡಿಸಿ ದಂಪತಿಯ ವಿವಾಹವನ್ನು ಅನೂರ್ಜಿತಗೊಳಿಸಿ ಆದೇಶಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.