ADVERTISEMENT

ಸರ್ಕಾರದ ವೈಫಲ್ಯವೇ ಗಲಭೆಗೆ ಕಾರಣ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಒಂದು ಗುಂಪಿನಿಂದ ಮಾತ್ರ ನಷ್ಟ ವಸೂಲಿ ಏಕೆ? 30 ವರ್ಷಗಳ ಗಲಭೆಗಳ ನಷ್ಟ ವಸೂಲಿ ಮಾಡಿ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2020, 10:17 IST
Last Updated 19 ಆಗಸ್ಟ್ 2020, 10:17 IST
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ   

ಬೆಂಗಳೂರು: ಡಿ.ಜೆ ಹಳ್ಳಿ ಮತ್ತು ಕೆ.ಜಿ.ಹಳ್ಳಿಯಲ್ಲಿ ಗಲಭೆಯ ಸಂದರ್ಭದಲ್ಲಿ ಶಾಸಕರ ಮನೆ, ಪೊಲೀಸ್‌ ಠಾಣೆ ರಕ್ಷಿಸಿಕೊಳ್ಳದ ಸರ್ಕಾರ, ಇದರ ಜವಾಬ್ದಾರಿಯನ್ನು ತಾನೇ ವಹಿಸಿಕೊಳ್ಳದೇ ‘ತಲೆ ಕೆಟ್ಟ ಹುಡುಗರ’ ಮೇಲೆ ಹೊರಿಸುವುದು ದುಷ್ಟ ಮತ್ತು ನಿರ್ಲಜ್ಜ ರಾಜಕಾರಣ ಎಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದು, ಗಲಭೆಯಲ್ಲಿ ಆದ ನಷ್ಟವನ್ನು ಗಲಭೆಕೋರರಿಂದ ವಸೂಲಿ ಮಾಡುವುದು ಕೇವಲ ಒಂದು ಗುಂಪು ಅಥವಾ ಘಟನೆಗೆ ಅನ್ವಯಿಸಬಾರದು. 30 ವರ್ಷಗಳಿಂದೀಚೆ ನಡೆದ ಎಲ್ಲ ಗಲಭೆಗಳಿಗೂ ಅನ್ವಯಿಸಿ ಹಾನಿ ಮಾಡಿದವರಿಂದಲೂ ವಸೂಲಿ ಮಾಡಬೇಕು ಎಂದು ಬೇಡಿಕೆ ಮುಂದಿಟ್ಟಿದ್ದಾರೆ.

ಪ್ರವಾದಿಯವರ ಬಗ್ಗೆ ಅವಹೇಳನ ಮಾಡಿದ ನವೀನ್ ಎಂಬ ಹುಡುಗನಿಗೆ ಆ ಮಾಹಿತಿ ಕೊಟ್ಟವರಾರು? ಆ ಚಿತ್ರಗಳು ಸೋಷಿಯಲ್ ಮೀಡಿಯಾಗಳಿಗೆ ಬಿತ್ತರಿಸಲು ಕಾರಣರಾದವರು ಯಾರು? ಇದರ ಹಿಂದೆ ದೊಡ್ಡ ಪಿತೂರಿ ಇದ್ದಂತಿದೆ. ಇದರ ಬಗ್ಗೆಯೂ ತನಿಖೆ ಆಗಬೇಕು ಎಂದು ಹೇಳಿದ್ದಾರೆ.

ADVERTISEMENT

ಪ್ರಾಮಾಣಿಕರು, ದಕ್ಷ ಪೊಲೀಸ್ ಅಧಿಕಾರಿಗಳನ್ನು ‘ನಾನ್ ಎಕ್ಸಿಕ್ಯೂಟಿವ್’ ಹುದ್ದೆಗಳಲ್ಲಿ ಕೂರಿಸಿದ್ದೀರಿ. ಭ್ರಷ್ಟರು, ಅಸೂಕ್ಷ್ಮರು ಆದ ಹಲವರಿಗೆ ಆಯಕಟ್ಟಿನ ಹುದ್ದೆಗಳನ್ನು ನೀಡಲಾಗಿದೆ. ಹೀಗಾಗಿ ಸೂಕ್ಷ್ಮವಾದ ಘಟನೆ ನಿಯಂತ್ರಿಸಲು ಅಧಿಕಾರಿಗಳಿಗೆ ಸಾಧ್ಯವಾಗಿಲ್ಲ ಎಂದಿದ್ದಾರೆ.

ಗೃಹ ಸಚಿವರನ್ನು ಭೇಟಿಯಾದ ಕರಾವಳಿಯ ಕೋಮುವಾದಿಯೊಬ್ಬನಿಗೆ, ಸಚಿವರು ನಿಮ್ಮ ಮೇಲಿನ ಎಲ್ಲಾ ಪ್ರಕರಣ ವಾಪಸ್ಸು ತೆಗೆದುಕೊಳ್ಳುತ್ತೇವೆಂದು ಹೇಳುವ ಮಾತುಕತೆಯೊಂದು ಪತ್ರಿಕೆಗಳಲ್ಲಿ ವರದಿಯಾಗಿತ್ತು. ಅದು ನಿಜವೇ ಆಗಿದ್ದರೆ ಸಮಾಜದ ಸ್ವಾಸ್ಥ್ಯವನ್ನು ನಿಮ್ಮ ಸರ್ಕಾರ ಕಾಪಾಡಲು ಸಾಧ್ಯವೆ ಎಂದೂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಧರ್ಮದ ಆಧಾರದ ಮೇಲೆ ದೊಂಬಿಯೆಬ್ಬಿಸಲು ಪ್ರಯತ್ನಿಸಿದ ಶೃಂಗೇರಿಯ ಜೀವರಾಜ್ ಅವರ ಮೇಲೂ ಪ್ರಕರಣ ದಾಖಲಿಸಬೇಕು. ಶೃಂಗೇರಿಯಲ್ಲಿ ಆರೋಪಿ ಪತ್ತೆಯಾಗುವ ಮೊದಲೇ ಅಪರಾಧಿಗಳು ಯಾರು ಎಂದು ಬಿಜೆಪಿ ತೀರ್ಮಾನಿಸಿತ್ತು. ಬಡ ತರಕಾರಿ ವ್ಯಾಪಾರಿಗಳು,ಬೀದಿ ಬದಿಯ ವ್ಯಾಪಾರಿಗಳೇ ಈ ಕೃತ್ಯ ಮಾಡಿರುವುದೆಂದು ಅವರ ತಲೆಗೆ ಅಪರಾಧವನ್ನು ಕಟ್ಟಲಾಗಿತ್ತು. ಮಸೀದಿಯಲ್ಲಿ ಸಿ.ಸಿ.ಟಿವಿಗಳು ಇರದಿದ್ದರೆ ಬಜರಂಗದಳದ ಮಾಜಿ ಕಾರ್ಯಕರ್ತನ ಬದಲಿಗೆ ಇನ್ಯಾರೋ ಇರುತ್ತಿದ್ದರು ಎಂದು ಹೇಳಿದ್ದಾರೆ.

ಈ ಘಟನೆಯ ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕಾದರೆ ಹೈಕೋರ್ಟ್‍ನ ಹಾಲಿ ನ್ಯಾಯಮೂರ್ತಿಗಳಿಂದಲೇ ತನಿಖೆ ನಡೆಸಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.