ADVERTISEMENT

ನಾಪೋಕ್ಲು ಬಳಿ ‘ಕಾವೇರಿ’ ಇಂದು ಅಪಾಯದ ಮಟ್ಟ ಮೀರುವ ಸಾಧ್ಯತೆ: ಜಲ ಆಯೋಗದ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2020, 11:38 IST
Last Updated 7 ಆಗಸ್ಟ್ 2020, 11:38 IST
ನಾಪೋಕ್ಲು ಸಮೀಪದ ಕೊಟ್ಟಮುಡಿಯಲ್ಲಿ ಹರಿಯುತ್ತಿರುವ ಕಾವೇರಿ ನದಿಯ ದೃಶ್ಯ
ನಾಪೋಕ್ಲು ಸಮೀಪದ ಕೊಟ್ಟಮುಡಿಯಲ್ಲಿ ಹರಿಯುತ್ತಿರುವ ಕಾವೇರಿ ನದಿಯ ದೃಶ್ಯ   

ದೆಹಲಿ: ಕೊಡಗು ಜಿಲ್ಲೆಯಾದ್ಯಂತ ಹಲವು ದಿನಗಳಿಂದ ಭಾರಿ ಪ್ರಮಾಣದಲ್ಲಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಮೈತುಂಬಿ ಹರಿಯುತ್ತಿದೆ.

ಇಂದು ಸಂಜೆ ಹೊತ್ತಿಗೆ ಕಾವೇರಿ ನದಿಯು ನಾಪೋಕ್ಲು ಸಮೀಪ ಅಪಾಯದ ಮಟ್ಟ ಮೀರಿ ಹರಿಯುವ ಸಾಧ್ಯತೆಗಳಿವೆ ಎಂದು ಕೇಂದ್ರ ಜಲ ಆಯೋಗದ ಪ್ರವಾಹ ಮನ್ಸೂಚನೆ ವಿಭಾಗವು ಶುಕ್ರವಾರ ಎಚ್ಚರಿಕೆ ನೀಡಿದೆ.

ಈ ಕುರಿತು ಜಲ ಆಯೋಗವು ಟ್ವೀಟ್‌ ಮಾಡಿದ್ದು, ಇದಕ್ಕೆ ಸಂಬಂಧಿಸಿದಂತೆ ಹೈಡ್ರೋಗ್ರಾಫ್‌ (ರೇಖಾ ನಕ್ಷೆ)ಯನ್ನೂ ಆಯೋಗ ಬಿಡುಗಡೆ ‌ಮಾಡಿದೆ.

ADVERTISEMENT

ಕೊಡಗು ವರದಿ: ನಾಪೋಕ್ಲು ವ್ಯಾಪ್ತಿಯಲ್ಲಿ ಮೂರು ದಿನಗಳಿಂದ ಬಿರುಸಿನ ಮಳೆಯಾಗುತ್ತಿದ್ದು, ಪಟ್ಟಣವನ್ನು ಸಂಪರ್ಕಿಸುವ ವಿವಿಧ ರಸ್ತೆಗಳ ಸಂಪರ್ಕ ಕಡಿತಗೊಂಡಿದೆ. ಕಾವೇರಿ ನದಿ ಹರಿವಿನ ವಿವಿಧ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು ಸಂಪರ್ಕ ಕಡಿತಗೊಂಡಿದೆ.

ಭಾಗಮಂಡಲ ತಲಕಾವೇರಿ ವ್ಯಾಪ್ತಿಯಲ್ಲಿ ಬಿರುಸಿನ ಮಳೆಯಾಗುತ್ತಿರುವ ಪರಿಣಾಮ ಕಾವೇರಿ ನದಿಯಲ್ಲಿ ನೀರು ತುಂಬಿ ಹರಿಯುತ್ತಿದೆ. ಭಾಗಮಂಡಲ ನಾಪೋಕ್ಲು ರಸ್ತೆ ಜಲಾವೃತವಾಗಿದ್ದು ಸಂಪರ್ಕ ಕಡಿತಗೊಂಡಿದೆ. ನಾಪೋಕ್ಲು - ಮೂರ್ನಾಡು ಸಂಪರ್ಕ ರಸ್ತೆಯ ಬೊಳಿಬಾಣೆಯಲ್ಲಿ ರಸ್ತೆ ಸಂಪರ್ಕವೇ ಇಲ್ಲದಾಗಿದೆ. ಸಮೀಪದ ಬಲಮುರಿಯಲ್ಲಿ ಸೇತುವೆ, ಚೆರಿಯಪರಂಬು ವ್ಯಾಪ್ತಿಯಲ್ಲಿ ರಸ್ತೆ ಜಲಾವೃತವಾಗಿದೆ. ಕಕ್ಕಬ್ಬೆ ನಾಲಡಿ, ಯವಕಪಾಡಿ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ಧಾರಾಕಾರ ಮಳೆಯಾಗಿದೆ. ಕೊಟ್ಟಮುಡಿಯಲ್ಲಿ ಕಾವೇರಿ ನದಿಯು ರಸ್ತೆ ಮಟ್ಟದಲ್ಲಿ ಉಕ್ಕಿ ಹರಿಯುತ್ತಿದ್ದು ನಾಪೋಕ್ಲು- ಮಡಿಕೇರಿ ಸಂಪರ್ಕ ಕಡಿತಗೊಂಡಿದ್ದು ನಾಪೋಕ್ಲು ದ್ವೀಪವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.