ADVERTISEMENT

ಮಳೆ ನಿಂತ ಬಳಿಕ ಹಾಸನ–ಹೆಗ್ಗದ್ದೆ ರಸ್ತೆ ಡಾಂಬರೀಕರಣ: ಸಚಿವರ ಭರವಸೆ

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2019, 19:45 IST
Last Updated 26 ಅಕ್ಟೋಬರ್ 2019, 19:45 IST
ರಾಷ್ಟ್ರೀಯ ಹೆದ್ದಾರಿ 75ರ ಸ್ಥಿತಿ
ರಾಷ್ಟ್ರೀಯ ಹೆದ್ದಾರಿ 75ರ ಸ್ಥಿತಿ   

ಸಕಲೇಶಪುರ (ಹಾಸನ): ಬೆಂಗಳೂರಿನಿಂದ ಕರಾವಳಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75ರ, ಹಾಸನ–ಹೆಗ್ಗದ್ದೆವರೆಗಿನ 45 ಕಿ.ಮೀ. ರಸ್ತೆ ದುರಸ್ತಿ ಕಾಮಗಾರಿಯನ್ನು ನ. 2ರ ನಂತರ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಭರವಸೆ ನೀಡಿದ್ದಾರೆ.

ರಸ್ತೆ ಡಾಂಬರೀಕರಣಕ್ಕೆ ಆಗ್ರಹಿಸಿ ಬಾಳ್ಳುಪೇಟೆಯಲ್ಲಿ ವಿವಿಧ ಸಂಘಟನೆಗಳು ಮೂರು ದಿನಗಳಿಂದ ನಿರಂತರ ಪ್ರತಿಭಟನೆ ನಡೆಸಿದ್ದವು. ಇದರಿಂದ ಶುಕ್ರವಾರ ರಾತ್ರಿ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದ ಅವರು,ಸ್ಥಳೀಯರ ಅಹವಾಲು ಆಲಿಸಿದರು.

‘ರಾಷ್ಟ್ರೀಯ ಹೆದ್ದಾರಿ ಮರು ಡಾಂಬರೀಕರಣ ಸಂಬಂಧ ಸೋಮವಾರ ಬೆಂಗಳೂರಿನಲ್ಲಿ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು. ನವೆಂಬರ್‌ ಮೊದಲ ವಾರದಿಂದ ಮಳೆ, ಬಿಡುವು ನೀಡುವ ಮುನ್ಸೂಚನೆ ಇದೆ. ಆದ್ದರಿಂದ ನ. 2ರಿಂದ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಆರಂಭಿಸಲಾಗುವುದು’ ಎಂದು ಭರವಸೆ ನೀಡಿದರು.

ADVERTISEMENT

ಹಾಸನ–ಸಕಲೇಶಪುರ ಮಾರ್ಗವಾಗಿ ಮಂಗಳೂರು, ಧರ್ಮಸ್ಥಳ, ಸುಬ್ರಹ್ಮಣ್ಯಕ್ಕೆ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆ ತುಂಬ ಗುಂಡಿಗಳು ಬಿದ್ದಿದ್ದು, ಡಾಂಬರು ಕಿತ್ತು ಬಂದಿದೆ. ಇಂಥ ಮಾರ್ಗದಲ್ಲಿ ಸಂಚರಿಸಬೇಕಿದೆ. ಹದಗೆಟ್ಟ ರಸ್ತೆಯಿಂದಾಗಿ ವಾರದ ಹಿಂದೆಯಷ್ಟೇ ನಾಲ್ಕು ವಾಹನಗಳು ಕೆಟ್ಟು ನಿಂತಿದ್ದರಿಂದ, ಎಂಟು ತಾಸು ಹೆದ್ದಾರಿ ಬಂದ್‌ ಆಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.