ADVERTISEMENT

ಮೂವರು ಆರೋಪಿಗಳ ಬಂಧನ: 25 ಗ್ರಾಂ ಚಿನ್ನಾಭರಣ ಜಪ್ತಿ

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2021, 21:16 IST
Last Updated 16 ನವೆಂಬರ್ 2021, 21:16 IST

ಬೆಂಗಳೂರು: ರಸ್ತೆಯಲ್ಲಿ ಒಂಟಿಯಾಗಿ ಓಡಾಡುವ ನಾಗರಿಕರನ್ನು ಮಾರಕಾಸ್ತ್ರಗಳಿಂದ ಬೆದರಿಸಿ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾಗುತ್ತಿದ್ದ ಆರೋಪಿ ಉದಯ್‌ ಹಾಗೂ ಆತನ ಇಬ್ಬರು ಸಹಚರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಅವರಿಂದ 25 ಗ್ರಾಂ ಚಿನ್ನಾಭರಣ ಹಾಗೂ ₹1 ಲಕ್ಷ ನಗದು ಜಪ್ತಿ ಮಾಡಲಾಗಿದೆ.

‘ನಾಯಂಡಹಳ್ಳಿ ವರ್ತುಲ ರಸ್ತೆಯ ಕೈಲಾಸೇಶ್ವರ ದೇವಸ್ಥಾನದ ಬಳಿ ಒಂಟಿಯಾಗಿ ಓಡಾಡುವವರನ್ನು ಗುರಿಯಾಗಿಸಿಕೊಂಡು ಚಿನ್ನಾಭರಣ ಲೂಟಿ ಮಾಡಲು ಗುಂಪೊಂದು ಹೊಂಚು ಹಾಕುತ್ತಿರುವ ಬಗ್ಗೆ ಮಾಹಿತಿ ಲಭಿಸಿತ್ತು. ಸ್ಥಳಕ್ಕೆ ತೆರಳಿ ಮೂವರನ್ನು ವಶಕ್ಕೆ ಪಡೆಯಲಾಗಿತ್ತು. ಆರೋಪಿಗಳಿಂದ ಮಾರಕಾಸ್ತ್ರಗಳನ್ನೂ ಜಪ್ತಿ ಮಾಡಲಾಗಿತ್ತು’ ಎಂದು ಪೊಲೀಸರು ತಿಳಿಸಿದ್ದಾರೆ.

‘ಜೂನ್‌ 5 ರಂದು ಮೂಡಲಪಾಳ್ಯದ ಪ್ರಿಯದರ್ಶಿನಿ ಲೇಔಟ್‌ ಬಳಿ ಮದುವೆ ಮನೆಯೊಂದರಲ್ಲಿ ಸೇರಿದ್ದ ಜನರನ್ನು ಮಾರಕಾಸ್ತ್ರಗಳಿಂದ ಬೆದರಿಸಿ ಅವರ ಬಳಿ ಇದ್ದ ಚಿನ್ನಾಭರಣಗಳನ್ನು ದೋಚಲಾಗಿತ್ತು. ಅದನ್ನು ತಾವೇ ಮಾಡಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ. ಅವರು ನೀಡಿದ ಮಾಹಿತಿ ಮೇರೆಗೆ ₹1 ಲಕ್ಷ ನಗದು ಹಾಗೂ25 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ. ನಾಲ್ವರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಪತ್ತೆಗೆ ವಿಶೇಷ ತಂಡ ನಿಯೋಜಿಸಲಾಗಿದೆ’ ಎಂದು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.