ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿ ಹುದ್ದೆಯಿಂದ ಶನಿವಾರ ರಾತ್ರಿ ವರ್ಗಾವಣೆಗೊಂಡಿರುವ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಭಾನುವಾರ ಬೆಳಿಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.
ಮುಖ್ಯಮಂತ್ರಿ ನಿವಾಸ 'ಕಾವೇರಿ'ಗೆ ಬಂದ ಸಿಂಧೂರಿ, ತಮ್ಮವರ್ಗಾವಣೆಯನ್ನು ರದ್ದುಪಡಿಸುವಂತೆ ಮನವಿ ಮಾಡಿದ್ದಾರೆ ಎಂದು ಗೊತ್ತಾಗಿದೆ. ಸುಮಾರು ಅರ್ಧ ಗಂಟೆ ಸಿಂಧೂರಿ ಅವರು ಮುಖ್ಯಮಂತ್ರಿಯ ನಿವಾಸದಲ್ಲಿದ್ದರು.
'ಪಾಲಿಕೆ ಅಯುಕ್ತೆ ಶಿಲ್ಪನಾಗ್ ಜೊತೆಗಿನ ವಿವಾದದಲ್ಲಿ ತಮ್ಮದೇನೂ ತಪ್ಪಿಲ್ಲ'ಎಂದು ಮುಖ್ಯಮಂತ್ರಿಗೆ ಮನವರಿಕೆ ಮಾಡಲು ಬಂದಿದ್ದರು. ಆದರೆ, ವರ್ಗಾವಣೆ ರದ್ದುಪಡಿಸಲು ಮುಖ್ಯಮಂತ್ರಿ ಸ್ಪಷ್ಟವಾಗಿ ನಿರಾಕರಿಸಿದ್ದಾರೆ ಎಂದೂ ಗೊತ್ತಾಗಿದೆ.
ರೋಹಿಣಿ ಸಿಂಧೂರಿ ಮತ್ತು ಮೈಸೂರು ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಅವರನ್ನು ರಾಜ್ಯ ಸರ್ಕಾರ ಶನಿವಾರ ರಾತ್ರಿ ಎತ್ತಂಗಡಿ ಮಾಡಿದೆ. ರೋಹಿಣಿ ಅವರನ್ನು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. ಈ ಹಿಂದೆ ಅವರು ಇದೇ ಹುದ್ದೆಯಲ್ಲಿದ್ದರು. ಶಿಲ್ಪಾ ನಾಗ್ ಆವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯ ನಿರ್ದೇಶಕರಾಗಿ (ಇ– ಆಡಳಿತ) ವರ್ಗಾವಣೆ ಮಾಡಲಾಗಿದೆ.
ವಾಣಿ ತೆರಿಗೆ ಇಲಾಖೆಯ (ಜಾರಿ) ಹೆಚ್ಚುವರಿ ಆಯುಕ್ತರಾಗಿದ್ದ ಡಾ. ಬಗಾದಿ ಗೌತಮ್ ಅವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ.ಆಹಾರ ಮತ್ತುನಾಗರಿಕಸರಬರಾಜು ನಿಗಮದ ಆಡಳಿತ ವ್ಯವಸ್ಥಾಪಕ ಲಕ್ಷ್ಮೀಕಾಂತ ರೆಡ್ಡಿ ಅವರನ್ನು ಮೈಸೂರು ಪಾಲಿಕೆ ಆಯುಕ್ತರಾಗಿ ನೇಮಿಸಲಾಗಿದೆ.
ಇದನ್ನೂ ಓದಿ:ಮೈಸೂರು: ಅಧಿಕಾರಿಗಳ ಮುಂದುವರಿದ ಜಟಾಪಟಿ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.