ADVERTISEMENT

ಮುನಿರತ್ನಗೆ ಟಿಕೆಟ್‌ ಕೈ ತಪ್ಪದು: ಸೋಮಶೇಖರ್‌

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2020, 19:31 IST
Last Updated 12 ಅಕ್ಟೋಬರ್ 2020, 19:31 IST
ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್
ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್   

ಬೆಂಗಳೂರು: ಆರ್‌.ಆರ್‌.ನಗರ ಕ್ಷೇತ್ರದಲ್ಲಿ ಮುನಿರತ್ನ ಅವರಿಗೆ ಬಿಜೆಪಿ ಟಿಕೆಟ್‌ ಕೈ ತಪ್ಪುವ ಪ್ರಶ್ನೆಯೇ ಇಲ್ಲ ಎಂದು ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಪಕ್ಷದ ವರಿಷ್ಠರು ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದಾರೆ. ಇದರಿಂದಾಗಿ ರಾಜ್ಯದ ಎರಡು ಕ್ಷೇತ್ರಗಳ ಟಿಕೆಟ್‌ ಪ್ರಕಟವಾಗುವುದು ತಡವಾಗಿದೆ. ಯಾವುದೇ ಕಾರಣಕ್ಕೂ ಆರ್‌.ಆರ್‌.ನಗರ ಕ್ಷೇತ್ರದಲ್ಲಿ ಮುನಿರತ್ನ ಅವರಿಗೆ ಟಿಕೆಟ್‌ ತಪ್ಪುವುದಿಲ್ಲ. ಬಿಜೆಪಿ ಸೇರಿದ ನನ್ನನ್ನೂ ಸೇರಿದಂತೆ ಎಲ್ಲರಿಗೂ ಟಿಕೆಟ್‌ ನೀಡಿರುವಾಗ, ಒಬ್ಬರಿಗೆ ಟಿಕೆಟ್‌ ಕೈ ತಪ್ಪುವುದು ಹೇಗೆ’ ಎಂದು ಸೋಮಶೇಖರ್‌ ಪ್ರಶ್ನಿಸಿದರು.

ಬಿಜೆಪಿ ಒಂದು ರಾಷ್ಟ್ರೀಯ ಪಕ್ಷವಾಗಿದ್ದು, ಎಲ್ಲವನ್ನು ಅಳೆದುತೂಗಿಯೇ ತೀರ್ಮಾನ ತೆಗೆದುಕೊಳ್ಳುತ್ತಾರೆ. ಏನೇ ಆದರೂ ಮುನಿರತ್ನ ಅವರು ಅಭ್ಯರ್ಥಿ ಆಗುವುದು ಖಚಿತ ಎಂದು ಹೇಳಿದರು. ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಅವರೂ ಸೋಮಶೇಖರ್ ಅವರ ಅಭಿಪ್ರಾಯ ಸಮರ್ಥಿಸಿಕೊಂಡರು.

ADVERTISEMENT

ಸಿ.ಎಂ. ಭೇಟಿಯಾದ ಜಾರಕಿಹೊಳಿ

ಬಿಜೆಪಿ ಟಿಕೆಟ್ ಘೋಷಣೆ ವಿಳಂಬವಾಗುತ್ತಿರುವ ಬೆನ್ನಲ್ಲೇ ಸಭೆ ನಡೆಸಿದ ಸಚಿವರಾದ ರಮೇಶ ಜಾರಕಿಹೊಳಿ, ಸೋಮಶೇಖರ್‌, ಡಾ. ಸುಧಾಕರ್‌ ಈ ಬಗ್ಗೆ ಚರ್ಚೆ ನಡೆಸಿದರು.

ಬಳಿಕ, ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಜಾರಕಿಹೊಳಿ, ‘ಮುನಿರತ್ನ ಅವರಿಗೆ ಟಿಕೆಟ್‌ ಕೊಡಿಸುವುದಲ್ಲದೇ, ಅವರ ಗೆಲುವಿಗಾಗಿ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು’ ಎಂದು ಮನವಿ ಮಾಡಿದರು.

‘ಬಿಜೆಪಿ ಸರ್ಕಾರ ರಚನೆ ಆಗಲು ಕಾರಣಕರ್ತರಾದವರಲ್ಲಿ ಮುನಿರತ್ನ ಅವರೂ ಒಬ್ಬರು. ನಗರದಲ್ಲಿ ಬಿಜೆಪಿಯನ್ನು ಬಲಪಡಿಸಲು ಇವರು ನೆರವಾಗುತ್ತಾರೆ’ ಎಂದು ಜಾರಕಿಹೊಳಿ ಅವರು, ಮುಖ್ಯಮಂತ್ರಿ ಬಳಿ ಪ್ರಸ್ತಾಪಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ಪಕ್ಷ ಅಧಿಕಾರಕ್ಕೆ ಬರಲು ಸಹಕರಿಸಿದ ಮುನಿರತ್ನ ಅವರನ್ನು ಕಡೆಗಣಿಸುವ ಪ್ರಶ್ನೆ ಇಲ್ಲ. ಒಗ್ಗಟ್ಟಿನಿಂದ ಚುನಾವಣೆಯನ್ನು ಗೆಲ್ಲೋಣ ಎಂದಿದ್ದಾರೆ’ ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.