ADVERTISEMENT

ಆರ್‌.ಆರ್‌.ನಗರ ಉಪಚುನಾವಣೆ: ಮುನಿರತ್ನ ವಿರುದ್ಧ ಸಿದ್ದರಾಮಯ್ಯ ಸರಣಿ ಟ್ವೀಟ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 30 ಅಕ್ಟೋಬರ್ 2020, 10:09 IST
Last Updated 30 ಅಕ್ಟೋಬರ್ 2020, 10:09 IST
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ   

ಬೆಂಗಳೂರು: ಮುನಿರತ್ನ ಅವರು ಎರಡು ಬಾರಿ ಗೆದ್ದು ಶಾಸಕನಾಗಲು ಕಾರಣ ಕಾಂಗ್ರೆಸ್ ಪಕ್ಷವೇ ಹೊರತು ಅವರ ವೈಯಕ್ತಿಕ ವರ್ಚಸ್ಸಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ವಿಚಾರವಾಗಿ ಸರಣಿ ಟ್ವೀಟ್‌ ಮಾಡಿರುವ ಅವರು ಆರ್‌.ಆರ್‌. ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

'ಮುನಿರತ್ನ ಅವರು ಎರಡು ಬಾರಿ ಗೆದ್ದು ಶಾಸಕನಾಗಲು ಕಾರಣ ಕಾಂಗ್ರೆಸ್ ಪಕ್ಷವೇ ಹೊರತು ಅವರ ವೈಯಕ್ತಿಕ ವರ್ಚಸ್ಸಲ್ಲ. ನಾನು ಮುಖ್ಯಮಂತ್ರಿಯಾಗಿದ್ದಾಗ ಆರ್.ಆರ್ ನಗರ ಕ್ಷೇತ್ರದ ಅಭಿವೃದ್ಧಿಗೆ ರೂ.2,000 ಕೋಟಿ ಅನುದಾನ ನೀಡಿದ್ದೆ, ಆದರೂ ನಮಗೆ ದ್ರೋಹ ಮಾಡಿದ್ರಲ್ಲ ಮುನಿರತ್ನ ಅವರೇ, ಅಂಥಾ ಅನ್ಯಾಯ ನಾವೇನು ಮಾಡಿದ್ವಿ ನಿಮ್ಗೆ?' ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ADVERTISEMENT

'ತನ್ನ ವಿರೋಧಿಗಳನ್ನು ಹೆದರಿಸಿ, ಬೆದರಿಸಿ ತಾನು ಶಾಸಕನಾಗಬಹುದು ಅಂತ ಮುನಿರತ್ನ ಭಾವಿಸಿದ್ದರೆ, ಅವರಂಥ ಮೂರ್ಖ ಬೇರೊಬ್ಬರಿಲ್ಲ. ಪೊಲೀಸ್ ಇಲಾಖೆ ನಿಷ್ಪಕ್ಷಪಾತವಾಗಿರಬೇಕು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದೆ ಎಂಬ ಕಾರಣಕ್ಕೆ ಅವರ ಪರ ಕೆಲಸ ಮಾಡಿದರೆ ಭವಿಷ್ಯದಲ್ಲಿ ಕಷ್ಟದ ದಿನಗಳನ್ನು ಎದುರಿಸಬೇಕಾಗುತ್ತೆ' ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಒಂದು ಕಾಲದಲ್ಲಿ ಕಾಂಗ್ರೆಸ್ ಪಕ್ಷವನ್ನು ತನ್ನ ತಾಯಿ ಅಂತ ಹೇಳ್ತಿದ್ದ ಮುನಿರತ್ನ ಅದೇ ತಾಯಿಗೆ ದ್ರೋಹ ಬಗೆದು ಬಿಜೆಪಿ ಸೇರಿದ್ರು ಎಂದು ಅವರು ಹೇಳಿದ್ದಾರೆ.

'ರಾಜ್ಯ ಸರ್ಕಾರ ಅನ್ನಭಾಗ್ಯದ ಅಕ್ಕಿ ಪ್ರಮಾಣವನ್ನು ಕಡಿತ ಮಾಡಿದೆ, ಅದರ ಜೊತೆಗೆ ವಿತರಣೆ ಆಗುತ್ತಿರುವ ಆಹಾರ ಪದಾರ್ಥಗಳು ಕಲಬೆರಕೆ ಬೇರೆ. ನಾನು ಶಿರಾಕ್ಕೆ ಹೋದಾಗ ಸರ್ಕಾರ ಕೊಡ್ತಿರುವ ರಾಗಿನ ಕೋಳಿ ಸಹಾ ತಿನ್ನಲ್ಲ ಅಷ್ಟು ಕಲ್ಲು, ಕಡ್ಡಿಗಳಿವೆ ಅಂತ ಜನ ಹಿಡಿಹಿಡಿ ಶಾಪ ಹಾಕ್ತಿದ್ರು. ನಾಚಿಕೆಯಾಗ್ಬೇಕು ಈ ಸರ್ಕಾರಕ್ಕೆ' ಎಂದು ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.