ಬೆಂಗಳೂರು: ಆತ್ಮಹತ್ಯೆ ಮಾಡಿಕೊಂಡ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ನಾಗೇಂದ್ರ ಕುಟುಂಬಕ್ಕೆ ₹50 ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.
ಕುಟುಂಬದ ಒಬ್ಬರು ಅವಲಂಬಿತರಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ನೌಕರಿ ನೀಡಲು ಕ್ರಮಕೈಗೊಳ್ಳುವುದಾಗಿ ಅವರು ತಿಳಿಸಿದ್ದಾರೆ.
ಆತ್ಮಹತ್ಯೆಗೆ ಮೇಲಧಿಕಾರಿಗಳ ಒತ್ತಡ ಕಾರಣ ಎಂದು ವೈದ್ಯರ ಸಂಘಟನೆಗಳು ಆಪಾದಿಸಿದ್ದವು. ಹೀಗಾಗಿ, ಆತ್ಮಹತ್ಯೆಗೆ ಕಾರಣ ತಿಳಿಯಲು ಸೂಕ್ತ ತನಿಖೆ ನಡೆಸುವ ಹೊಣೆಯನ್ನು ಮೈಸೂರಿನ ಪ್ರಾದೇಶಿಕ ಆಯುಕ್ತರಿಗೆ ವಹಿಸಲಾಗಿದೆ. ನಿಷ್ಪಕ್ಷಪಾತ ಹಾಗೂ ಸಮಗ್ರ ತನಿಖೆ ನಡೆಸಿ ಒಂದು ವಾರದೊಳಗೆ ವರದಿ ಸಲ್ಲಿಸುವಂತೆಯೂ ಸೂಚಿಸಲಾಗಿದೆ.
ಪರಿಹಾರ ಮೊತ್ತ ಹೆಚ್ಚಿಸಬೇಕು ಹಾಗೂ ಅವಲಂಬಿತರಿಗೆ ನೌಕರಿ ನೀಡಬೇಕು ಎಂದು ಸರ್ಕಾರಿ ನೌಕರರ ಸಂಘ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.