ಬೆಂಗಳೂರು: ‘ಆರ್ಎಸ್ಎಸ್ ಮುಖಂಡರನ್ನು ಹತ್ಯೆ ಮಾಡಲು ಹಾಗೂ ಆರ್ಎಸ್ಎಸ್ ಕಚೇರಿ ಮೇಲೆ ದಾಳಿ ನಡೆಯುವ ಬಗ್ಗೆ 'ಗ್ಲೋಬಲ್ ಟೆರರಿಸ್ಟ್ ಗ್ರೂಪ್’ನಲ್ಲಿ ಮಾಹಿತಿ ಹರಿದಾಡುತ್ತಿದೆ’ ಎಂದು ಕೇಂದ್ರ ಗುಪ್ತದಳದ ಅಧಿಕಾರಿಗಳು, ರಾಜ್ಯದ ಪೊಲೀಸರಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
ಬಸವನಗುಡಿಯಲ್ಲಿ ಭಾನುವಾರ ಸಂಜೆ 5 ಗಂಟೆಗೆ ಆರ್ಎಸ್ಎಸ್ ಕಾರ್ಯಕರ್ತರ ಬೃಹತ್ ಕಾರ್ಯಕ್ರಮ ನಡೆಯಲಿದ್ದು, ಮೋಹನ್ ಭಾಗವತ್ ಅವರು ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಸಂದೇಶವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ.
ಕಾರ್ಯಕ್ರಮಕ್ಕೆ ಬಿಗಿ ಭದ್ರತೆ ಕಲ್ಪಿಸುವಂತೆ ಹಾಗೂ ನುರಿತ ಅಧಿಕಾರಿಗಳನ್ನು ಭದ್ರತೆಗಾಗಿ ನೇಮಕ ಮಾಡುವಂತೆ ಆಂತರಿಕ ಭದ್ರತಾ ವಿಭಾಗದ (ಐಎಸ್ಡಿ) ಎಸ್ಪಿ ಜಿನೇಂದ್ರ ಕಣಗಾವಿ ಅವರು ಬೆಂಗಳೂರಿನ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಜೊತೆಗೆ ಕಾರ್ಯಕ್ರಮ ಹಾಗೂ ಮುಖಂಡರು ಓಡಾಡುವ ಸ್ಥಳಗಳಲ್ಲಿ ಯಾರಾದರೂ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದರೆ ಮಾಹಿತಿ ರವಾನಿಸುವಂತೆಯೂ ಹೇಳಿದ್ದಾರೆ.
ಇದರ ಮಧ್ಯೆಯೇ ಬಸವನಗುಡಿಯಲ್ಲಿ ಕಾರ್ಯಕ್ರಮಕ್ಕೆ ಸಿದ್ಧತೆ ಕೆಲಸ ನಡೆದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.