ಬೆಂಗಳೂರು: ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚಲನಕ್ಕೆ ಹೈಕೋರ್ಟ್ ಅನುಮತಿ ನೀಡಿರುವುದು ಜನತಂತ್ರಕ್ಕೆ ಸಿಕ್ಕ ಗೆಲುವು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಪ್ರಜಾತಂತ್ರದ ಹಕ್ಕನ್ನು ಕಸಿದುಕೊಳ್ಳಲು ಹೊರಟಿದ್ದ ಕಾಂಗ್ರೆಸ್ ಸರ್ಕಾರಕ್ಕೆ ಹೈಕೋರ್ಟ್ ಚಾಟಿ ಬೀಸಿದೆ. ಸಂವಿಧಾನದ ಘನತೆಯನ್ನು ಎತ್ತಿಹಿಡಿದಿದೆ. ಪ್ರಜಾಪ್ರಭುತ್ವದಲ್ಲಿ ಸರ್ವಾಧಿಕಾರಕ್ಕೆ ಅವಕಾಶವಿಲ್ಲ ಎಂದು ಹೈಕೋರ್ಟ್ ಸ್ಪಷ್ಟ ಸಂದೇಶ ನೀಡಿದೆ. ದಿನಬೆಳಗಾದರೆ ಸಂವಿಧಾನದ ಬಗ್ಗೆ ಬೊಗಳೆ ಬಿಡುವವರಿಗೆ, ತಕ್ಕ ಪಾಠ ಮಾಡಿದೆ’ ಎಂದಿದ್ದಾರೆ.
‘ಸಾಂಸ್ಕೃತಿಕ ಮತ್ತು ಸಾರ್ವಜನಿಕ ಜಾಗೃತಿ ಕಾರ್ಯಕ್ರಮಗಳಿಗೆ ಕಾನೂನು ಸುವ್ಯವಸ್ಥೆಯ ಷರತ್ತು ವಿಧಿಸಿ, ಅನುಮತಿ ನೀಡಬೇಕಾಗಿರುವುದು ಸರ್ಕಾರದ ಕರ್ತವ್ಯ. ಕಾನೂನು ಮತ್ತು ಸುವ್ಯವಸ್ಥೆ ಹೆಸರಿನಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯ ಉಸಿರುಗಟ್ಟಿಸಲು ಮುಂದಾದ ಕಾಂಗ್ರೆಸ್ನ ಕುಟಿಲ ತಂತ್ರವು, ನ್ಯಾಯಾಲಯದ ತೀರ್ಪಿನಿಂದ ನಿಷ್ಕ್ರಿಯವಾಗಿದೆ’ ಎಂದು ಹೇಳಿದ್ದಾರೆ.
ಇದಕ್ಕೂ ಮುನ್ನ, ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚಲನಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿದೆ ತಹಶೀಲ್ದಾರ್ ಅವರು ನೀಡಿದ್ದ ಹಿಂಬರಹವನ್ನು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದರು. ತಹಶೀಲ್ದಾರ್ ಅವರ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರಿಯಾಂಕ್ ಖರ್ಗೆ ಅವರನ್ನು ಟೀಕಿಸಿದ್ದರು.
ನನ್ನ ತಂದೆ ವಸುದೇವ ಅವರು ಸ್ವಯಂಸೇವಕರಾಗಿದ್ದರು ನನಗೆ ಆರ್ಎಸ್ಎಸ್ ಪರಿಚಯಿಸಿದವರೇ ಅವರು. ನಾನು ನನ್ನ ಮಗನನ್ನೂ ಸ್ವಯಂಸೇವಕ ಮಾಡಿದ್ದೇನೆ. ವಂಶಪಾರಂಪರ್ಯವಾಗಿ ಅಧಿಕಾರ ಪಡೆದುಕೊಳ್ಳುವ ಪರಂಪರೆ ನಮ್ಮದಲ್ಲವಿ.ಸುನಿಲ್ ಕುಮಾರ್ ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ
ಮುಖ್ಯಮಂತ್ರಿ ಅಥವಾ ಉಪ ಮುಖ್ಯಮಂತ್ರಿ ಹುದ್ದೆ ಮೇಲೆ ಕಣ್ಣಿರಿಸಿ, ಪ್ರಿಯಾಂಕ್ ಖರ್ಗೆ ಅವರು ಆರ್ಎಸ್ಎಸ್ನ ಮೇಲೆ ಮುಗಿಬಿದ್ದಿದ್ದಾರೆಲಹರ್ ಸಿಂಗ್ ಸಿರೋಯಾ,ರಾಜ್ಯಸಭಾ ಸದಸ್ಯ, ಬಿಜೆಪಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.