ಬೆಂಗಳೂರು: ‘ರಾಜ್ಯ ಸರ್ಕಾರ ಮಕ್ಕಳ ಹಿತದೃಷ್ಟಿಯಿಂದ ಶಾಲೆಗಳನ್ನು ಕೂಡಲೇ ಆರಂಭಿಸಬೇಕು’ ಎಂದು ಮಾನ್ಯತೆ ಪಡೆದ ಅನುದಾನರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ ಕರ್ನಾಟಕ) ಆಗ್ರಹಿಸಿದೆ.
ಸುದ್ದಿಗೋಷ್ಠಿಯಲ್ಲಿ ಭಾನುವಾರ ಮಾತನಾಡಿದ ಸಂಘದ ರಾಜ್ಯ ಘಟಕದ ಅಧ್ಯಕ್ಷ ಹಾಲನೂರ್ ಎಸ್. ಲೇಪಾಕ್ಷ್, ‘ಶಾಲೆಗಳನ್ನು ಆರಂಂಭಿಸುವಂತೆ ನಾವು ಮಾಡಿದ್ದ ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಮ್ಮನ್ನು ಮಾತುಕತೆಗೆ ಆಹ್ವಾನಿಸಿದ್ದಾರೆ. ಶಾಲೆಗಳನ್ನು ಯಾವುದೇ ವಿಳಂಬ ಮಾಡದೆ ಆರಂಭಿಸುವಂತೆ ಈಗಾಗಲೇ ನಾವು ಬೇಡಿಕೆ ಇಟ್ಟಿದ್ದೇವೆ’ ಎಂದರು.
‘ಶಾಲೆಗಳನ್ನು ಆರಂಭಿಸುವಂತೆ ಐಸಿಎಂಆರ್, ರಾಜ್ಯ ಸರ್ಕಾರ ರಚಿಸಿದ್ದ ಕಾರ್ಯಪಡೆ ಮತ್ತು ಡಾ. ದೇವಿಶೆಟ್ಟಿ ನೇತೃತ್ವದ ತಜ್ಞರ ಸಮಿತಿ ಈಗಾಗಲೇ ಹೇಳಿದೆ. ಶಾಲೆ ಆರಂಭಿಸಲು ಜುಲೈ 30 ಕೊನೆಯ ಗಡುವನ್ನು 10 ದಿನಗಳ ಮೊದಲೇ ಸರ್ಕಾರ ಮತ್ತು ಇಲಾಖೆಯ ಗಮನಕ್ಕೆ ಸಂಘ ನೀಡಿದ್ದರೂ ಯಾವುದೇ ಕ್ರಮ ವಹಿಸಿಲ್ಲ’ ಎಂದು ಅವರು ದೂರಿದರು.
‘ಖಾಸಗಿ ಶಾಲೆಗಳ ಮೇಲಿನ ಮಲತಾಯಿ ಧೋರಣೆಯನ್ನು ಬಿಡಬೇಕು. ಶಾಲೆಗಳ ಎಲ್ಲ ಸಮಸ್ಯೆಗಳನ್ನು ಬಗೆಹರಿಸಬೇಕು. ಜೊತೆಗೆ, ನಮ್ಮ ಕೆಲವು ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು ಎಂದು ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದೇವೆ’ ಎಂದೂ ಅವರು ತಿಳಿಸಿದರು.
‘ಮಾನ್ಯತೆ ನವೀಕರಣಕ್ಕೆ ಅರ್ಜಿ ಸಲ್ಲಿಸಿದ ಶಾಲೆಗಳ ವಸ್ತುಸ್ಥಿತಿ ಪರಿಗಣಿಸಿ ಯಾವುದೇ ಹೊಸ ನಿಯಮ ವಿಧಿಸದೆ ಮತ್ತು ಶುಲ್ಕ ಇಲ್ಲದೆ ಕೇಂದ್ರ ಸರ್ಕಾರದ ಮಾದರಿಯಲ್ಲಿ ಸಾಮಾನ್ಯ ಕಡತದೊಂದಿಗೆ ಅನುಮತಿ ನೀಡಬೇಕು. 2019–20ನೇ ಸಾಲಿನ ಆರ್ಟಿಇ ಹಣ ಸರ್ಕಾರ ಬಿಡುಗಡೆ ಮಾಡಿದ್ದರೂ ಶಾಲೆಗಳ ಖಾತೆಗೆ ಜಮೆ ಆಗಿಲ್ಲ. ಈ ಬಗ್ಗೆ ಅಧಿಕಾರಿಗಳಿಗೆ ಆದೇಶ ನೀಡಿ, ಖಾತೆಗೆ ಹಣ ವರ್ಗಾಯಿಸಲು ಕ್ರಮ ತೆಗೆದುಕೊಳ್ಳಬೇಕು. ಅಲ್ಲದೆ, 2020–21ನೇ ಸಾಲಿನ ಆರ್ಟಿಇ ಹಣವನ್ನು ಬಿಡುಗಡೆ ಮಾಡಬೇಕು. ಖಾಸಗಿ ಶಾಲೆಗಳ ಶಿಕ್ಷಕರಿಗೆ ಸರ್ಕಾರ ಘೋಷಿಸಿರುವ ₹ 5,000 ಪ್ಯಾಕೇಜ್ ಕೂಡಲೇ ಖಾತೆಗೆ ಜಮೆ ಮಾಡಬೇಕು. 2000 ಇಸವಿಯ ಒಳಗೆ ಆರಂಭವಾಗಿರುವ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸಲಾಗುವುದು ಎಂದು ಸರ್ಕಾರ ಈಗಾಗಲೇ ಹೇಳಿದೆ. ಈ ಭರವಸೆಯನ್ನೂ ಈಡೇರಿಸಬೇಕು’ ಎಂದೂ ಅವರು ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.