ಬೆಳಗಾವಿ: ಹಳಿಯಾಳ ಕ್ಷೇತ್ರದ ಕಾಂಗ್ರೆಸ್ ಶಾಸಕ ಆರ್.ವಿ. ದೇಶಪಾಂಡೆ ಅವರಿಗೆ ವಿಧಾನಸಭೆಯಲ್ಲಿ ಬುಧವಾರ 2022ನೇ ಸಾಲಿನ ‘ಅತ್ಯುತ್ತಮ ಶಾಸಕ’ ಪ್ರಶಸ್ತಿ ಪ್ರದಾನಮಾಡಲಾಯಿತು.
ಕಲಾಪ ಆರಂಭವಾಗುತ್ತಿದ್ದಂತೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಪ್ರಶಸ್ತಿಗೆ ದೇಶಪಾಂಡೆ ಅವರನ್ನು ಆಯ್ಕೆ ಮಾಡಿರುವುದಾಗಿ ಪ್ರಕಟಿಸಿದರು. ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಜತೆ ಪ್ರಶಸ್ತಿ ಪ್ರದಾನ ಮಾಡಿದರು.
‘ಎಂಟು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ದೇಶಪಾಂಡೆ, ಸಚಿವರಾಗಿ ಸಣ್ಣ ಕೈಗಾರಿಕೆ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸೇರಿದಂತೆ ಅನೇಕ ಖಾತೆಗಳನ್ನು ನಿರ್ವಹಿಸಿದ್ದಾರೆ.ಸದನದ ಚೌಕಟ್ಟು ಮೀರದಂತೆ ಮಾತನಾಡುವ ಅನುಭವ ಅವರದ್ದು’ಎಂದರು.
‘ದೇಶಪಾಂಡೆ ಅವರನ್ನು ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಪ್ರಶಸ್ತಿಯ ಗೌರವ ಹಾಗೂ ಮೌಲ್ಯ ಹೆಚ್ಚಿಸಿದೆ’ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದರು.
‘ಅತ್ಯುತ್ತಮ ಸಂಸದೀಯ ಪಟುವಾಗಿರುವ ಆರ್.ವಿ. ದೇಶಪಾಂಡೆ ಅವರು ಪ್ರಶಸ್ತಿಗೆ ಆಯ್ಕೆಯಾಗಿರುವುದು ಸಂತಸದ ವಿಷಯ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ದೇಶಪಾಂಡೆ, ‘ರಾಜಕಾರಣಿಗಳ ಬಗ್ಗೆ ಜನಾಭಿಪ್ರಾಯ ಬದಲಾಗಿರುವುದು ಕಳವಳದ ಸಂಗತಿ. ಸಾರ್ವಜನಿಕ ಜೀವನದಲ್ಲಿ ರಾಜಕಾರಣಿ ಎಂದು ಪರಿಚಯಿಸಿಕೊಳ್ಳಲು ಹಿಂದೇಟು ಹಾಕುವಂತಾಗಿದೆ. ಶಾಸಕರಾದವರು ಶಾಸನ ಸಭೆಯ ಗೌರವ, ಶಿಸ್ತು ಕಾಪಾಡಿಕೊಳ್ಳಬೇಕು’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.