ADVERTISEMENT

ತನಿಖೆ ನಡೆಸಿ ವಿಶ್ವಾಸ ಉಳಿಸಿಕೊಳ್ಳಿ: ಹಿರೇಮಠ

ಟೆಂಡರ್‌: ಶೇ 40ರಷ್ಟು ಲಂಚದ ದೂರು

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2021, 16:08 IST
Last Updated 20 ನವೆಂಬರ್ 2021, 16:08 IST
ಎಸ್‌.ಆರ್‌. ಹಿರೇಮಠ
ಎಸ್‌.ಆರ್‌. ಹಿರೇಮಠ   

ಬೆಂಗಳೂರು: ‘ಗುತ್ತಿಗೆದಾರರೇ ಚುನಾಯಿತ ಪ್ರತಿನಿಧಿಗಳು ಮತ್ತು ಅಧಿಕಾರಿಗಳ ಭ್ರಷ್ಟಾಚಾರದ ವಿರುದ್ಧ ಪ್ರಧಾನಿಗೆ ದೂರು ನೀಡಿರುವ ವಿಷಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನುಣುಚಿಕೊಳ್ಳಬಾರದು. ಉನ್ನತ ಮಟ್ಟದ ತನಿಖೆಗೆ ಆದೇಶಿಸಿ, ವಿಶ್ವಾಸ ಉಳಿಸಿಕೊಳ್ಳಬೇಕು’ ಎಂದು ಧಾರವಾಡ ಸಮಾಜ ಪರಿವರ್ತನಾ ಸಮುದಾಯದ ಸಂಸ್ಥಾಪಕ ಎಸ್‌.ಆರ್‌. ಹಿರೇಮಠ ಆಗ್ರಹಿಸಿದರು.

ಈ ಕುರಿತು ‘ಪ್ರಜಾವಾಣಿ’ ಜತೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಸ್ಥಾನದಲ್ಲಿರುವವರು ಆ ಹುದ್ದೆಯ ಘನತೆ ಅರಿತು ಕೆಲಸ ಮಾಡಬೇಕು. ಚಾಣಾಕ್ಷ ಉತ್ತರ ನೀಡುವುದಕ್ಕೆ ಸೀಮಿತವಾಗಬಾರದು. ಸರ್ಕಾರದ ಭಾಗವಾಗಿರುವ ಚುನಾಯಿತ ಪ್ರತಿನಿಧಿಗಳು ಮತ್ತು ಅಧಿಕಾರಿಗಳ ವಿರುದ್ಧ ಗಂಭೀರವಾದ ಆರೋಪ ಕೇಳಿಬಂದಿದೆ. ಕೆಳಹಂತದವರೆಗೂ ಇಳಿದು ತನಿಖೆ ನಡೆಸಿ, ಮತ್ತೆ ಅಂತಹ ಪ್ರಕರಣಗಳು ಮರುಕಳಿಸದಂತೆ ಕ್ರಮ ಜರುಗಿಸಬೇಕು’ ಎಂದರು.

ಈ ವಿಷಯದಲ್ಲಿ ಮುಖ್ಯಮಂತ್ರಿ ಮತ್ತು ಮುಖ್ಯ ಕಾರ್ಯದರ್ಶಿ ಇಬ್ಬರೂ ಉತ್ತರದಾಯಿಗಳು. ಗುತ್ತಿಗೆದಾರರು ಮಾಡಿರುವ ಆರೋಪದಲ್ಲಿ ಎಳ್ಳಷ್ಟೂ ಸುಳ್ಳಿಲ್ಲ. ಭ್ರಷ್ಟಾಚಾರದ ಆರೋಪದ ಮೇಲೆ ಬಿ.ಎಸ್‌. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಕ್ಕೆ ಇಳಿಸಲಾಯಿತು. ಅಂತಹ ಆರೋಪ ಬರಬಾರದು ಎಂದು ಬೊಮ್ಮಾಯಿ ಅವರಿಗೆ ಅವಕಾಶ ನೀಡಿರುವುದಾಗಿ ಬಿಜೆಪಿ ನಾಯಕರು ಹೇಳಿಕೊಳ್ಳುತ್ತಾರೆ. ಈ ವಿಷಯವನ್ನು ತಾರ್ಕಿಕ ಅಂತ್ಯದವರೆಗೆ ಕೊಂಡೊಯ್ಯಲು ಮುಖ್ಯಮಂತ್ರಿ ನಿಷ್ಠೆ ಮತ್ತು ಬದ್ಧತೆ ತೋರಿದರೆ ಅದು ನಿಜ ಎಂಬಂತಾಗುತ್ತದೆ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.