ಮಡಿಕೇರಿ: ‘ಆಡಬಾರದ ಮಾತನ್ನಾಡಿದರೆ ಕೇಳಬಾರದ್ದನ್ನು ಕೇಳಬೇಕಾಗುತ್ತದೆ’ ಎಂದು ಸಚಿವ ಎಸ್.ಸುರೇಶ್ ಕುಮಾರ್ ಅವರು ಶನಿವಾರ ಹೇಳಿದರು.
ನಾಪೋಕ್ಲುವಿನಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳೊಂದಿಗೆ ನಡೆದ ಸಂವಾದಕ್ಕೂ ಮೊದಲು ಮಾಧ್ಯಮ ಪ್ರತಿನಿಧಿಗಳ ಜತೆಗೆ ಮಾತನಾಡಿದ ಅವರು, ‘ಎಚ್.ಎಸ್.ದೊರೆಸ್ವಾಮಿ ಅವರ ಬಗ್ಗೆ ನಮಗೆ ಅಪಾರ ಗೌರವವಿದೆ. ಅವರು ದೊಡ್ಡವರು, ಅನೇಕ ಹೋರಾಟಗಳಲ್ಲೂ ಪಾಲ್ಗೊಂಡಿದ್ದಾರೆ. ದೊರೆಸ್ವಾಮಿ ಅವರೂ ಪ್ರಧಾನಿ ನರೇಂದ್ರ ಮೋದಿ ಕುರಿತು ಲಘುವಾಗಿ ಮಾತನಾಡಬಾರದಿತ್ತು. ವಿವೇಚನೆಯಿಂದ ಮಾತನಾಡಬೇಕು. ಹೇಳಿಕೆ ನೀಡುವಾಗ ಎಚ್ಚರಿಕೆ ವಹಿಸಬೇಕಿತ್ತು’ ಎಂದು ಸಚಿವರು ಪ್ರತಿಕ್ರಿಯಿಸಿದರು.
‘ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೂ ಮಾತನಾಡುವ ರಭಸದಲ್ಲಿ ಅವಹೇಳನ ರೀತಿಯಲ್ಲಿ ಮಾತನಾಡಿರುವುದು ಸರಿಯಲ್ಲ. ಸಮಾಜಕ್ಕೆ ಕಹಿ ಸಂದೇಶ ಹೋಗುತ್ತಿದ್ದು, ಈ ವಿವಾದವನ್ನು ಇಲ್ಲಿಗೆ ಬಿಡುವುದು ಸೂಕ್ತ’ ಎಂದು ಹೇಳಿದರು.
ಕನ್ನಡ ಕಡ್ಡಾಯ
‘ಕುಶಾಲನಗರ ಸಮೀಪದ ಟಿಬೆಟಿಯನ್ ಶಿಬಿರದ ಶಾಲೆಯಲ್ಲಿ 6ನೇ ತರಗತಿಯಿಂದ ಕನ್ನಡ ಕಲಿಕೆಗೆ ಅವಕಾಶ ನೀಡುವಂತೆ ಮನವಿ ಬಂದಿತ್ತು. ಅವರ ಮನವಿ ತಿರಸ್ಕರಿಸಲಾಗಿದೆ. ರಾಜ್ಯದಲ್ಲಿ 1ನೇ ತರಗತಿಯಿಂದಲೇ ಕನ್ನಡವನ್ನು ಒಂದು ಭಾಷೆಯಾಗಿ ಕಲಿಸುವುದು ಕಡ್ಡಾಯ ಎಂದೂ ಟಿಬೆಟಿಯನ್ ಶಾಲೆಗೆ ಲಿಖಿತವಾಗಿಯೇ ತಿಳಿಸುತ್ತೇವೆ’ ಎಂದು ಮಾಹಿತಿ ನೀಡಿದರು.
‘ಟಿಪ್ಪು ವಿಷಯವನ್ನು ಪಠ್ಯದಿಂದ ತೆಗೆಯುವ ವಿಚಾರಕ್ಕೆ ಸಂಬಂಧಿಸಿದಂತೆ ವಿಸ್ತಾರವಾದ ಚರ್ಚೆ ಅಗತ್ಯವಿದೆ. ಮತ್ತೊಂದು ಸಮಿತಿ ರಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಸುರೇಶ್ ಕುಮಾರ್ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.