ADVERTISEMENT

ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ?: ಬಿ.ವೈ.ವಿಜಯೇಂದ್ರ

​ಪ್ರಜಾವಾಣಿ ವಾರ್ತೆ
Published 19 ಮೇ 2025, 15:27 IST
Last Updated 19 ಮೇ 2025, 15:27 IST
ಬಿ.ವೈ ವಿಜಯೇಂದ್ರ 
ಬಿ.ವೈ ವಿಜಯೇಂದ್ರ    

ಬೆಂಗಳೂರು: ‘ಯಾವ ಪುರುಷಾರ್ಥಕ್ಕೆ ನೀವು ಸಾಧನಾ ಸಮಾವೇಶ ಮಾಡುತ್ತಿದ್ದೀರಿ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಬೆಲೆ ಏರಿಕೆ, ಭ್ರಷ್ಟಾಚಾರ, ದುರಾಡಳಿತ ತಾಂಡವವಾಡುತ್ತಿದ್ದು, ಹಿಂದೂ ಕಾರ್ಯಕರ್ತರ ಹತ್ಯೆಗಳು ನಡೆಯುತ್ತಿದ್ದು,  ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ. ಇದು ನಿಮ್ಮ ಸಾಧನೆಯೇ’ ಎಂದು ಅವರು ಪ್ರಶ್ನಿಸಿದರು.

‘ರೈತರಿಗಾಗಿ ಯಾವುದೇ ಹೊಸ ಯೋಜನೆಯನ್ನು ನೀಡಲು ಸಾಧ್ಯವಾಗಿಲ್ಲ. ಮಹಿಳೆಯರು ಮತ್ತು ಯುವಕರಿಗೆ ಸ್ವಾಭಿಮಾನದ ಬದುಕು ನೀಡುವ ಉದ್ದೇಶದ ಯಾವುದೇ ಹೊಸ ಕಾರ್ಯಕ್ರಮವನ್ನೂ ಜಾರಿ ಮಾಡಲಿಲ್ಲ’ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ADVERTISEMENT

‘ಸಿದ್ದರಾಮಯ್ಯ ಅಧಿಕಾರ ವಹಿಸಿಕೊಂಡ ಬಳಿಕ ಅಭಿವೃದ್ಧಿ ಕೆಲಸಗಳು ಸಂಪೂರ್ಣವಾಗಿ ನಿಂತು ಹೋಗಿವೆ.  ಆಡಳಿತ ಪಕ್ಷದ ಶಾಸಕರೂ ಅಭಿವೃದ್ಧಿಗೆ ಹಣ ಸಿಗುತ್ತಿಲ್ಲ ಎಂದು ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಮೊದಲ ಬಾರಿ ಗೆದ್ದು ಬಂದ ಶಾಸಕರಿಗೆ ತಮ್ಮ ಕ್ಷೇತ್ರಗಳಲ್ಲಿ ಶಾಲಾ ಕೊಠಡಿ ರಿಪೇರಿ ಮಾಡಿಸಲು ಹಣ ಸಿಗುತ್ತಿಲ್ಲ’ ಎಂದು ದೂರಿದರು.

‘ತಮ್ಮ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ರಂಗು– ರಂಗಿನ ಜಾಹೀರಾತು ನೀಡುತ್ತಿದ್ದಾರೆ. ಇದು ಜಾಹೀರಾತಿನ ಸರ್ಕಾರವೇ ಹೊರತು, ಜನರ ಸಂಕಷ್ಟಗಳಿಗೆ ಸ್ಪಂದಿಸುವ ಸರ್ಕಾರವಲ್ಲ. ರಾಜ್ಯದ ಜನರು ಸರ್ಕಾರದ ಬಗ್ಗೆ ಬೇಸತ್ತು ಹೋಗಿದ್ದಾರೆ. ಜನರ ಅಸಮಾಧಾನದ ಮಧ್ಯೆಯೇ ಶೂನ್ಯ ಸಾಧನೆಯ ಸಮಾವೇಶ ಮಾಡಲು ಮುಂದಾಗಿದ್ದಾರೆ’ ಎಂದು ವಿಜಯೇಂದ್ರ ಹೇಳಿದರು.

ಬಸವರಾಜ ಬೊಮ್ಮಾಯಿ

‘₹2.5 ಲಕ್ಷ ಕೋಟಿ ಸಾಲ ಪಡೆದಿರುವುದೇ ಸಾಧನೆ’

ಕರ್ನಾಟಕದ ಇತಿಹಾಸದಲ್ಲಿ ಕಳೆದ ಎರಡೂವರೆ ವರ್ಷ ಆರ್ಥಿಕವಾಗಿ ಕರಾಳ ದಿನಗಳು. ₹2.5 ಲಕ್ಷ ಕೋಟಿ ಸಾಲ ಪಡೆದಿರುವುದೇ ರಾಜ್ಯ ಸರ್ಕಾರದ ಸಾಧನೆ ಎಂದು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ. ರಾಜ್ಯದ ಇತಿಹಾಸದಲ್ಲಿ ಅತಿ ಹೆಚ್ಚು ಸಾಲ ಪಡೆದ ಖ್ಯಾತಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ ಎಂದು ಅವರು ಆರೋಪಿಸಿದ್ದಾರೆ. ರಾಜ್ಯ ಸರ್ಕಾರ ಸಂಪೂರ್ಣ ಸಾಲದ ಮೇಲೆ ಅವಲಂಬನೆಯಾಗಿದೆ. ಅದರ ಜತೆಗೆ ಪೆಟ್ರೋಲ್ ಡೀಸೆಲ್‌ ಅಬಕಾರಿ ಹಾಲು ನೀರು ಕಸ ಮುದ್ರಾಂಕ ಶುಲ್ಕ ಹೀಗೆ ಎಲ್ಲದರ ಮೇಲೆ ಅತಿ ಹೆಚ್ಚು ತೆರಿಗೆ ಹಾಕಿದ ಕೀರ್ತಿಯೂ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ. ಕಳೆದ ವರ್ಷ ₹40 ಸಾವಿರ ಕೋಟಿ ಹೆಚ್ಚುವರಿ ತೆರಿಗೆ ಹಾಕಿದ್ದರು. ಈ ವರ್ಷ ₹60 ಸಾವಿರ ಕೋಟಿ ಹೊಸ ತೆರಿಗೆ ಭಾರ ಜನರ ಮೇಲೆ ಹಾಕಿದ್ದಾರೆ ಎಂದು ದೂರಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಸಂಪೂರ್ಣ ನಿಂತಿದೆ. ಯಾವುದೇ ನೀರಾವರಿ ಯೋಜನೆ ರಾಜ್ಯ ಹೆದ್ದಾರಿ ಮನೆ ಕಟ್ಟಲು ಹಣ ನೀಡಿಲ್ಲ. ಕೇಂದ್ರದ ಹಣಕ್ಕೆ ಸಮನಾದ ವಂತಿಗೆಯನ್ನು ಬಿಡುಗಡೆ ಮಾಡುತ್ತಿಲ್ಲ ಎಂದು ಬೊಮ್ಮಾಯಿ ಹೇಳಿದ್ದಾರೆ.

‘ಕರ್ನಾಟಕ ಲೂಟಿ-ಕಾಂಗ್ರೆಸ್ ಡ್ಯೂಟಿ’

ಭಿತ್ತಿಚಿಪತ್ರ ಬಿಡುಗಡೆ  ರಾಜ್ಯ ಸರ್ಕಾರ ಮಂಗಳವಾರ ಹಮ್ಮಿಕೊಂಡಿರುವ ಸಾಧನಾ ಸಮಾವೇಶಕ್ಕೆ ವಿರುದ್ಧವಾಗಿ ‘ಕರ್ನಾಟಕ ಲೂಟಿ–ಕಾಂಗ್ರೆಸ್ ಡ್ಯೂಟಿ’ ಭಿತ್ತಿಪತ್ರವನ್ನು ಬಿಜೆಪಿ ಬಿಡುಗಡೆ ಮಾಡಿತು. ಭಿತ್ತಿಪತ್ರ ಬಿಡುಗಡೆ ಮಾಡಿದ ಮುಖ್ಯ ವಕ್ತಾರ ಅಶ್ವತ್ಥನಾರಾಯಣ ಅವರು ಬೆಂಗಳೂರು ಮಹಾನಗರದಲ್ಲಿ ಸುರಿದ ಮಳಗೆ ಆಗಿರುವ ಅನಾಹುತವೇ ಕಾಂಗ್ರೆಸ್‌ ಸರ್ಕಾರದ ಸಾಧನೆಯ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದ್ದು ಕಾಂಗ್ರೆಸ್‌ ಸರ್ಕಾರದ ಸಾಧನೆ ಚಿತ್ರ ಬಾಕಿ ಇದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.