ಬೆಂಗಳೂರು: ಪೊಲೀಸರ ವೇತನ ಪರಿಷ್ಕರಣೆ ಹಾಗೂ ಸೌಲಭ್ಯ ಹೆಚ್ಚಳ ಸಂಬಂಧ ಸರ್ಕಾರಕ್ಕೆ ಸಲ್ಲಿಕೆಯಾಗಿದ್ದ ರಾಘವೇಂದ್ರ ಔರಾದಕರವರದಿಗೆ ಒಪ್ಪಿಗೆ ನೀಡಲು ಸರ್ಕಾರ ಮುಂದಾಗಿದೆ.
ಈ ವರದಿ ಜಾರಿಯಾದರೆ ಸರ್ಕಾರದ ಮೇಲೆ ಸುಮಾರು ₹630 ಕೋಟಿ ಹೆಚ್ಚುವರಿ ಹೊರೆ ಬೀಳಲಿದೆ. ವರದಿ ಜಾರಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಾತ್ವಿಕವಾಗಿ ಒಪ್ಪಿಗೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಔರಾದಕರವರದಿ ಜಾರಿ ಸಂಬಂಧ ಗೃಹ ಇಲಾಖೆ ವರದಿಯೊಂದನ್ನು ಸಿದ್ಧಪಡಿಸಿ ಆರ್ಥಿಕ ಇಲಾಖೆಗೆ ನೀಡಿದೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
ಈ ವರದಿ ಜಾರಿಗೆ ಸಚಿವ ಸಂಪುಟ ಸಭೆ ಒಪ್ಪಿಗೆ ಕೊಡುವ ಅಗತ್ಯವಿಲ್ಲ. ಮುಖ್ಯಮಂತ್ರಿ ಸಹಿ ಮಾಡಿದರೆ ಸಾಕು. ಮುಂದಿನ ಸೋಮವಾರ ಆರ್ಥಿಕ ಇಲಾಖೆ ಒಪ್ಪಿಗೆ ನೀಡಲಿದ್ದು, ಅಂದೇ ಮುಖ್ಯಮಂತ್ರಿ ಸಹ ಸಹಿ ಮಾಡಲಿದ್ದಾರೆಎಂದು ಅವರು ಹೇಳಿದರು.
ಸರ್ಕಾರ2016ರ ಜೂನ್ನಲ್ಲಿ ಎಡಿಜಿಪಿ ರಾಘವೇಂದ್ರ ಔರಾದಕರ ಸಮಿತಿ ರಚಿಸಿತ್ತು. ಈ ಸಮಿತಿ ರಚನೆಯಾದ ಮೂರೇ ತಿಂಗಳಿನಲ್ಲಿ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ವರದಿ ಸಲ್ಲಿಸಿ ಮೂರು ವರ್ಷಗಳು ಕಳೆದರೂ ಈವರೆಗೂ ಜಾರಿಯ ಪ್ರಯತ್ನ ನಡೆದಿರಲಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.