ADVERTISEMENT

ಸಿ.ಟಿ. ರವಿಯವರದ್ದು ವಿನಾಶಕಾರಿ ಮನಸ್ಸು: ಸಲೀಂ ಟೀಕೆ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2022, 5:47 IST
Last Updated 29 ನವೆಂಬರ್ 2022, 5:47 IST
   

ಗದಗ: ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ‘ಸಿದ್ರಾಮುಲ್ಲಾ’ ಎಂದು ಟೀಕಿಸಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ವಿರುದ್ಧ ವಿಧಾನ ಪರಿಷತ್‌ ಸದಸ್ಯ ಸಲೀಂ ಅಹ್ಮದ್ ಹರಿಹಾಯ್ದರು.

ನಗರದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಸಿ.ಟಿ.ರವಿ ಅವರದ್ದು ವಿನಾಶಕಾರಿ ಮನಸ್ಸು. ಪಕ್ಷದ ಉನ್ನತ ಹುದ್ದೆಯಲ್ಲಿದ್ದಾರೆ. ಅವರ ಹೇಳಿಕೆಗಳು ಸಮಾಜವನ್ನು ಒಗ್ಗೂಡಿಸುವಂತಿರಬೇಕು. ಆದರೆ, ಈ ಹೇಳಿಕೆ ಅವರ ವ್ಯಕ್ತಿತ್ವವನ್ನು ಬಿಂಬಿಸುತ್ತದೆ’ ಎಂದು ಹೀಯಾಳಿಸಿದರು.

‘ಬಿಜೆಪಿ ಸರ್ಕಾರದ ಶೇ 40 ಕಮಿಷನ್‌ ಬಗ್ಗೆ; ಹುಬ್ಬಳ್ಳಿಯ ಗುತ್ತಿಗೆದಾರರೊಬ್ಬರು ದಯಾಮರಣಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಆ ಬಗ್ಗೆ, ಸಂತೋಷ್ ಪಾಟೀಲ ಆತ್ಮಹತ್ಯೆ ಬಗ್ಗೆ ಯಾಕೆ ಮಾತನಾಡುವುದಿಲ್ಲ’ ಎಂದು ಪ್ರಶ್ನಿಸಿದರು.

ADVERTISEMENT

‘ಬಿಜೆಪಿಯವರು ಜನಸಂಕಲ್ಪ ಯಾತ್ರೆ ಬದಲು ಕ್ಷಮೆ ಯಾತ್ರೆ ಮಾಡಬೇಕು’ ಎಂದು ಲೇವಡಿ ಮಾಡಿದ ಅವರು, ‘ಸೋಲಿನ ಭೀತಿಯಿಂದ ಬಿಜೆಪಿ ವೋಟ್‌ ಕದಿಯುವ ಕೆಲಸಕ್ಕೆ ಕೈ ಹಾಕಿದೆ. ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ತಪ್ಪಿತಸ್ಥರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಕು. ಆಯೋಗ ರಚಿಸಿ, ತನಿಖೆಗೆ ಸೂಚಿಸಬೇಕು’ ಎಂದು ಆಗ್ರಹಿಸಿದರು.

‘ಚುನಾವಣೆಯಲ್ಲಿ ಸ್ಪರ್ಧಿಸುವ ಇಚ್ಛೆಯೊಂದಿಗೆ 1,350 ಮಂದಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಗಳನ್ನು ವಿವಿಧ ಹಂತಗಳಲ್ಲಿ ಪರಿಷ್ಕರಿಸಿ, 140 ಕ್ಷೇತ್ರಗಳ ಅಭ್ಯರ್ಥಿಗಳನ್ನು ಡಿಸೆಂಬರ್‌ ಅಂತ್ಯದ ವೇಳೆಗೆ ಅಂತಿಮಗೊಳಿಸಲಾಗುವುದು. ಕಾಂಗ್ರೆಸ್‌ನ ಆಂತರಿಕ ಸಮೀಕ್ಷೆಯಂತೆ 2023ರ ಚುನಾವಣೆಯಲ್ಲಿ 130 ಕ್ಷೇತ್ರಗಳಲ್ಲಿ ಪಕ್ಷ ಗೆಲುವು ಸಾಧಿಸಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.