ADVERTISEMENT

ರಾಷ್ಟ್ರಭಕ್ತರ ಪ್ರತಿಮೆ ಭಗ್ನ: ದೀರ್ಘಾವಧಿ ಕ್ರಮಕ್ಕೆ ಸೂಚನೆ; ಬಸವರಾಜ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2021, 6:06 IST
Last Updated 18 ಡಿಸೆಂಬರ್ 2021, 6:06 IST
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ   

ಹುಬ್ಬಳ್ಳಿ: ರಾಷ್ಟ್ರ ಭಕ್ತರ ಪ್ರತಿಮೆಗಳನ್ನು ಭಗ್ನ ಮಾಡಿ ಸಮಾಜದಲ್ಲಿ ಕ್ಷೋಭೆ ಉಂಟುಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಶನಿವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಶುಕ್ರವಾರ ರಾತ್ರಿ ನಡೆದ ಪುಂಡಾಟ ಖಂಡನೀಯ. ಕಲ್ಲು ತೂರಾಟ ನಡೆಸಿ ಪೊಲೀಸ್ ವಾಹನಗಳನ್ನು ಹಾನಿ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಕೆಲವು ಆರೋಪಿಗಳನ್ನು ಬಂಧಿಸಲಾಗಿದೆ. ಪೊಲೀಸ್ ಇಲಾಖೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿದೆ. ಅಲ್ಲದೆ, ಮುಂಬರುವ ದಿನಗಳಲ್ಲಿ ಇಂತಹ ಪ್ರಕರಣಗಳು ಮರುಕಳಿಸದಂತೆ ಮು‌ಜಾಗ್ರತೆಯಾಗಿ ದೀರ್ಘಾವಧಿ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚಿಸಿದ್ದೇನೆ ಎಂದು ಹೇಳಿದರು.

ರಾಷ್ಟ್ರ ಭಕ್ತರ ಪ್ರತಿಮೆಗಳಿಗೆ ಅಪಮಾನ ಮಾಡುವ ಪ್ರವೃತ್ತಿ ಸಹಿಸುವುದಿಲ್ಲ. ಅವರು ಎಲ್ಲ ಸಮುದಾಯಕ್ಕೂ ಸೇರಿದವರು. ದೇಶಕ್ಕಾಗಿ ಜೀವ ತ್ಯಾಗ ಮಾಡಿದವರು. ಅವರನ್ನು ಎಲ್ಲರೂ ಗೌರವಿಸಬೇಕು ಎಂದು ಅವರ ಪ್ರತಿಮೆ, ಪುತ್ಥಳಿ ಮಾಡುತ್ತೇವೆ. ಅವುಗಳಿಗೆ ಅಪಮಾನ, ಧ್ವಂಸ ಮಾಡುವುದು ಕಾನೂನು ಪ್ರಕಾರ ಅಪರಾಧ. ಇದು ದೇಶಭಕ್ತರ ಕೆಲಸವೂ ಅಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ADVERTISEMENT

ಈ ಗಲಾಟೆ ಹಿಂದೆ ಅಧಿವೇಶನವಷ್ಟೇ ಅಲ್ಲ, ಹಲವು ಕಾರಣಗಳಿವೆ. ಅವುಗಳನ್ನೆಲ್ಲ ತನಿಖೆಗೆ ಒಳಪಡಿಸಲಾಗುವುದು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.