ADVERTISEMENT

ಭ್ರಷ್ಟರಿಗೆ ಶಿಕ್ಷೆಯ ಭಯವೇ ಇಲ್ಲ: ಸಂತೋಷ್‌ ಹೆಗ್ಡೆ

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2021, 20:30 IST
Last Updated 22 ಆಗಸ್ಟ್ 2021, 20:30 IST
ಎನ್‌.ಸಂತೋಷ್‌ ಹೆಗ್ಡೆ
ಎನ್‌.ಸಂತೋಷ್‌ ಹೆಗ್ಡೆ   

ಬೆಂಗಳೂರು: ‘ಭ್ರಷ್ಟರಿಗೆ ಶಿಕ್ಷೆಯ ಭಯವೇ ಇಲ್ಲದಂತಾಗಿದೆ. ಹೀಗಾಗಿ ಅವರು ಅವ್ಯಾಹತವಾಗಿ ಹಗರಣಗಳನ್ನು ಮಾಡುತ್ತಿದ್ದಾರೆ. ಸ್ವಾರ್ಥ ಮತ್ತು ದುರಾಸೆಯೂ ಇದಕ್ಕೆ ಕಾರಣ. ಜೈಲಿಗೆ ಹೋಗಿ ಜಾಮೀನಿನ ಮೇಲೆ ಹೊರಬರುವವರಿಗೆ ಭವ್ಯ ಸ್ವಾಗತ ನೀಡುವ ಪರಿಪಾಠ ಹೆಚ್ಚುತ್ತಿರುವುದು ವಿಷಾದನೀಯ. ಜನರ ಈ ಮನೋಧೋರಣೆ ಬದಲಾಗಬೇಕು’ ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್‌.ಸಂತೋಷ್ ಹೆಗ್ಡೆ ತಿಳಿಸಿದರು.

ಆಲ್‌ ಇಂಡಿಯಾ ಡೆಮಾಕ್ರಟಿಕ್‌ ಯೂತ್‌ ಆರ್ಗನೈಸೇಷನ್‌ (ಎಐಡಿವೈಒ) ಹಾಗೂ ಅಖಿಲ ಭಾರತ ನಿರುದ್ಯೋಗಿ ಯುವಜನ ಹೋರಾಟ ಸಮಿತಿ (ಎಐಯುವೈಎಸ್‌ಸಿ) ರಾಜ್ಯ ಸಮಿತಿ ಹಮ್ಮಿಕೊಂಡಿದ್ದ ‘ಕೆಪಿಎಸ್‌ಸಿ ಸ್ವಚ್ಛಗೊಳಿಸಿ; ಉದ್ಯೋಗಾಕಾಂಕ್ಷಿಗಳಿಗೆ ನ್ಯಾಯ ಒದಗಿಸಿ’ ಕುರಿತ ವೆಬಿನಾರ್‌ನಲ್ಲಿ ಭಾನುವಾರ ಮಾತನಾಡಿದರು.

‘ಈಗಿನ ಕೆಪಿಎಸ್‌ಸಿ ಅಧ್ಯಕ್ಷರ ನೇಮಕವು ಕಾನೂನುಬಾಹಿರ ಎಂಬುದು ಮೇಲ್ನೋಟಕ್ಕೆ ಸಾಬೀತಾಗಿದೆ. ಇತ್ತೀಚಿನ ದಿನಗಳಲ್ಲಿ ಭ್ರಷ್ಟರಿಗೆ ಮಣೆ ಹಾಕುತ್ತಿರುವುದಕ್ಕೆ ಇದೊಂದು ನಿದರ್ಶನ. ಲಂಚಕೊಟ್ಟು ಸರ್ಕಾರಿ ಸೇವೆಗೆ ಸೇರುವವರು ಲಂಚಕೋರರಾಗುತ್ತಿದ್ದಾರೆ. ಅರ್ಹತೆಯ ಆಧಾರದಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಲು ಪ್ರಯತ್ನಿಸಬೇಕು. ಆಗ ನಾವು ಭ್ರಷ್ಟರಾಗುವುದು ತಪ್ಪುತ್ತದೆ’ ಎಂದು ತಿಳಿಸಿದರು.

ADVERTISEMENT

ಅಖಿಲ ಭಾರತ ಎಐಡಿವೈಒ ಅಧ್ಯಕ್ಷ ರಾಮಾಂಜನಪ್ಪ ಆಲ್ದಳ್ಳಿ ‘ಸರ್ಕಾರಗಳು ಉದ್ಯೋಗ ಸೃಷ್ಟಿಯತ್ತ ಗಮನ ಹರಿಸುತ್ತಿಲ್ಲ. ಹೇರಳವಾಗಿರುವ ಮಾನವ ಸಂಪನ್ಮೂಲದ ಸದ್ಬಳಕೆಯೂ ಆಗುತ್ತಿಲ್ಲ. ದಕ್ಷ ಆಡಳಿತಗಾರರನ್ನು ಸೃಷ್ಟಿಸಬೇಕಿರುವ ಕೆಪಿಎಸ್‌ಸಿ ಭ್ರಷ್ಟಾಚಾರದಲ್ಲಿ ಮುಳುಗೆದ್ದಿದೆ. ಸರ್ಕಾರದ ಮುಖ್ಯಸ್ಥರು ತಮ್ಮ ಹಿಂಬಾಲಕರನ್ನೇ ಈ ಸಂಸ್ಥೆಯ ಸದಸ್ಯರು ಮತ್ತು ಅಧ್ಯಕ್ಷರನ್ನಾಗಿ ನೇಮಿಸುತ್ತಿದ್ದಾರೆ. ಇದು ವಿಪರ್ಯಾಸ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.