ಸಂತೋಷ್ ಲಾಡ್
ಬೆಂಗಳೂರು: ವಲಸೆ ಕಾರ್ಮಿಕರ ಮಾಹಿತಿಯನ್ನು ಉದ್ಯೋಗದಾತರು ಸಂಗ್ರಹಿಸಬೇಕು ಮತ್ತು ಕಾರ್ಮಿಕರ ಮೇಲೆ ವಿಶೇಷ ನಿಗಾ ಇಡಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಸೂಚಿಸಿದರು.
ವಿಕಾಸಸೌಧದಲ್ಲಿ ಕಾರ್ಮಿಕರು ಹಾಗೂ ಕಾರ್ಮಿಕ ಸಂಘಟನೆಗಳು, ವಿವಿಧ ಕೈಗಾರಿಕೆಗಳ ಪ್ರತಿನಿಧಿಗಳ ಜತೆ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಅವರು ಮಾತನಾಡಿದರು.
ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿಯ ಹತ್ಯೆ ಪ್ರಕರಣ ಪ್ರಸ್ತಾಪ ಮಾಡಿದ ಅವರು, ‘ಬೇರೆ ರಾಜ್ಯಗಳಿಂದ ವಲಸೆ ಬಂದಿರುವ ಕಾರ್ಮಿಕರ ಮಾಹಿತಿ ಸಂಗ್ರಹಿಸುವುದು ತುಂಬಾ ಕಷ್ಟ. ಅದು ನಮಗೆ ಸವಾಲು ಆಗಿದ್ದರೂ, ಈ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ’ ಎಂದು ಹೇಳಿದರು.
‘ಹುಬ್ಬಳಿಯಲ್ಲಿ ನಡೆದ ಘಟನೆ ಅತ್ಯಂತ ನೋವಿನದು. ಇಂತಹ ಘಟನೆ ದೇಶದ ಯಾವುದೇ ಮೂಲೆಯಲ್ಲಿ ಯಾವಾಗ ಬೇಕಾದರೂ ನಡೆಯಬಹುದು. ಅಂತಹ ಸಂದರ್ಭದಲ್ಲಿ ಕಾರ್ಮಿಕರ ಮಾಹಿತಿ ಇದ್ದರೆ ಆರೋಪಿಗಳನ್ನು ಪತ್ತೆ ಮಾಡುವುದು ಸುಲಭವಾಗಲಿದೆ. ಈ ಬಗ್ಗೆ ಗುತ್ತಿಗೆದಾರರು ಮಾಹಿತಿ ನೀಡಬೇಕು. ಜನರಲ್ಲಿ ಅರಿವು ಮೂಡಿಸಬೇಕು. ಕಾರ್ಮಿಕರ ಮೇಲೆ ವಿಶೇಷ ನಿಗಾ ಇಡಬೇಕು’ ಎಂದರು.
‘ಸಂಘಟಿತ ವಲಯದಲ್ಲಿ ದುಡಿಯುವ ಕಾರ್ಮಿಕರ ಎಲ್ಲಾ ಮಾಹಿತಿ ಸಿಗಲಿದೆ. ಆದರೆ, ಅಸಂಘಟಿತ ವಲಯದ ಕಾರ್ಮಿಕರ ವಿವರ ಸಿಗುವುದಿಲ್ಲ. ವಿಶೇಷವಾಗಿ ಕಟ್ಟಡ ನಿರ್ಮಾಣ ಕಾರ್ಮಿಕರ ಮಾಹಿತಿ ಸಂಗ್ರಹಿಸಲು ಯಾವುದಾದರೂ ಮಾರ್ಗೋಪಾಯಗಳಿದ್ದರೆ ತಿಳಿಸಿ’ ಎಂದು ಲಾಡ್ ಮನವಿ ಮಾಡಿದರು.
‘ಗುತ್ತಿಗೆದಾರರು ನೋಂದಣಿ ಮಾಡಬೇಕು ಎಂಬ ನಿಯಮ ಇದೆ. ಆದರೆ ಮಾಡುವುದಿಲ್ಲ. ಯಾರು ಎಲ್ಲಿ ಏನು ಕೆಲಸ ಮಾಡುತ್ತಾ ಇದ್ದಾರೆ ಎಂಬುದರ ಮಾಹಿತಿ ತಿಳಿಯುವುದಿಲ್ಲ. ಕಾರ್ಮಿಕ ಇಲಾಖೆ ಮಾತ್ರವಲ್ಲ; ಎಲ್ಲಾ ಇಲಾಖೆಯ ಕಾರ್ಮಿಕರ ವಿವರ ಸಿಗುವಂತಾಗಬೇಕು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.