ಬೆಳಗಾವಿ: ‘ಲಕ್ಷ್ಮಣ ಸವದಿ ಅವರು ಮುಂದಿನ ಮೂರು ವರ್ಷಗಳವರೆಗೂ ಉಪಮುಖ್ಯಮಂತ್ರಿಯಾಗಿ, ಸಚಿವರಾಗಿ ಮುಂದುವರಿಯಲಿದ್ದಾರೆ. ಯಾರಿಗೂ ಅನುಮಾನ ಬೇಡ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಅಥಣಿಯಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಸವದಿಯವರಿಗೆ ತೊಂದರೆಯಾಗುತ್ತದೆ ಎಂದು ಇಲ್ಲಿನ ಮತದಾರರು ಯೋಚಿಸಿದ್ದರೆ ಅದಕ್ಕೆ ಅರ್ಥವಿಲ್ಲ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರೇ ಅವರಿಗೆ ಭರವಸೆ ನೀಡಿದ್ದಾರೆ. ಸರ್ಕಾರದ ಪೂರ್ಣಾವಧಿಯವರೆಗೂ ಅವರು ಮುಂದುವರಿಯುತ್ತಾರೆ’ ಎಂದರು.
‘ಸವದಿಯವರ ಸಹಕಾರದೊಂದಿಗೆ ಅಥಣಿ ಹಾಗೂ ಕಾಗವಾಡ ಎರಡೂ ಕ್ಷೇತ್ರಗಳಲ್ಲಿ ಪಕ್ಷ ಗೆಲ್ಲಲಿದೆ. ಸವದಿ ಅವರ ಗೌರವದ ಪ್ರಶ್ನೆಯಾಗಿದೆ. ಕ್ಷೇತ್ರದಲ್ಲಿ ಆರಂಭದಲ್ಲಿ ಸ್ವಲ್ಪ ಗೊಂದಲ ಇತ್ತು. ಅದನ್ನು ಸವದಿಯವರು ಬಗೆಹರಿಸಿದ್ದಾರೆ. ಈಗ ಯಾವುದೇ ಗೊಂದಲಗಳಿಲ್ಲ. ಪಕ್ಷದ ಎಲ್ಲ ಕಾರ್ಯಕರ್ತರು ಒಗ್ಗಟ್ಟಾಗಿ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ಒಂದೂ ಸ್ಥಾನ ಗೆಲ್ಲಲ್ಲ:‘ಕಳೆದ ಲೋಕಸಭಾ ಚುನಾವಣೆಯಲ್ಲಿ ಕೇವಲ ಒಂದೇ ಸ್ಥಾನವನ್ನು ಅದೂ ತೀರ ಕಷ್ಟದಲ್ಲಿ ಕಾಂಗ್ರೆಸ್ ಗೆದ್ದುಕೊಂಡಿತ್ತು. ಈ ಸಲ 15 ಕ್ಷೇತ್ರಗಳಲ್ಲಿ ಒಂದನ್ನೂ ಗೆಲ್ಲುವುದಿಲ್ಲ. ಬಿಜೆಪಿ ಎಲ್ಲ ಸ್ಥಾನಗಳನ್ನು ಗೆಲ್ಲಲಿದೆ. ಡಿ.9 ಫಲಿತಾಂಶ ಬಂದ ನಂತರ ಕಾಂಗ್ರೆಸ್, ಜೆಡಿಎಸ್ ನಾಯಕರಿಗೆ ಉತ್ತರ ನೀಡುತ್ತೇನೆ’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.