
ಚಡಚಣ ಪಟ್ಟಣದಲ್ಲಿರುವ ಎಸ್ಬಿಐ ಬ್ಯಾಂಕ್
ವಿಜಯಪುರ: ಜಿಲ್ಲೆಯ ಚಡಚಣ ಪಟ್ಟಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ಬಿಐ) ಶಾಖೆಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೆರೆಯ ಮಹಾರಾಷ್ಟ್ರ ರಾಜ್ಯದ ಹುಲಜಂತಿಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ, ₹41.4 ಲಕ್ಷ ನಗದು, 6.55 ಕೆ.ಜಿ.ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.
‘ಮಹಾರಾಷ್ಟ್ರ ರಾಜ್ಯ ಪೊಲೀಸರ ನೆರವಿನೊಂದಿಗೆ ವಿಜಯಪುರ ಜಿಲ್ಲಾ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದು, ದರೋಡೆಕೋರರು ಪಾಳು ಬಿದ್ದ ಮನೆಯೊಂದರಲ್ಲಿ ಚೀಲವೊಂದರಲ್ಲಿ ಬಚ್ಚಿಟ್ಟಿದ್ದ ಕಳವು ಮಾಲನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ’ ಎಂದು ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದರು.
‘ದರೋಡೆ ನಡೆದ ದಿನದಂದ ಮೂವರು ಆರೋಪಿಗಳು ಚಡಚಣದಿಂದ ಪಂಢರಪುರ ಮಾರ್ಗವಾಗಿ ಕಾರಿನಲ್ಲಿ ಪರಾರಿಯಾಗುವ ವೇಳೆ ಹುಲಜಂತಿ ಬಳಿ ಬೈಕೊಂದಕ್ಕೆ ಡಿಕ್ಕಿ ಹೊಡೆಸಿದ್ದರು. ಈ ವೇಳೆ ಸ್ಥಳೀಯರು ಆರೋಪಿಗಳನ್ನು ಅಡ್ಡಗಟ್ಟಿದಾಗ ಕಾರನ್ನು ಸ್ಥಳದಲ್ಲೇ ಬಿಟ್ಟು ಕದ್ದ ಮಾಲಿನೊಂದಿಗೆ ಪರಾರಿಯಾಗಿದ್ದರು’ ಎಂದರು.
ಸೆ.17ರಂದು ಸಂಜೆ 6.30ಕ್ಕೆ ನಡೆದಿದ್ದ ಚಡಚಣ ಎಸ್ಬಿಐ ದರೋಡೆ ಪ್ರಕರಣದಲ್ಲಿ ಆರೋಪಿಗಳು ಒಟ್ಟು 20 ಕೆ.ಜಿ.ಚಿನ್ನಾಭರಣ ಹಾಗೂ 1.4 ಕೋಟಿ ನಗದನ್ನು ಆರೋಪಿಗಳು ದೋಚಿಕೊಂಡು ಪರಾರಿಯಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.