ಬೆಂಗಳೂರು: ‘ಧ್ವನಿವರ್ಧಕ ಬಳಕೆ ನಿರ್ಬಂಧಿಸುವ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಆದೇಶ ದೇವಸ್ಥಾನ, ಮಸೀದಿ ಎಲ್ಲವಕ್ಕೂ ಅನ್ವಯವಾಗುತ್ತದೆ. ಈ ವಿಚಾರದಲ್ಲಿ ಸಮಾಜಘಾತುಕ ಶಕ್ತಿಗಳು ರಾಜಕಾರಣ ಮಾಡಲು ಅವಕಾಶ ನೀಡುವುದಿಲ್ಲ’ ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದರು.
ಮಸೀದಿಗಳಲ್ಲಿ ಆಜಾನ್ ನಿರ್ಬಂಧಿಸದಿದ್ದರೆ ದೇವಸ್ಥಾನಗಳಲ್ಲಿ ಧ್ವನಿವರ್ಧಕಗಳ ಮೂಲಕ ಭಜನೆ ಮೊಳಗಿಸಬೇಕೆಂಬ ಹಿಂದುತ್ವ ಪರ ಸಂಘಟನೆಗಳ ಹೇಳಿಕೆ ಕುರಿತು ಸುದ್ದಿಗಾರರಿಗೆ ಭಾನುವಾರ ಪ್ರತಿಕ್ರಿಯಿಸಿದ ಅವರು, ‘ಯಾರೇ ತಪ್ಪು ಮಾಡಿದರೂ ನಾವು ಕ್ರಮ ಜರುಗಿಸುತ್ತೇವೆ. ಅವರು ಕಳ್ಳತನ ಮಾಡಿದ್ದಾರೆ, ನಾವೂ ಮಾಡುತ್ತೇವೆ ಎನ್ನುವುದು ಸರಿಯಲ್ಲ. ಸುಪ್ರೀಂಕೋರ್ಟ್ ಆದೇಶವನ್ನು ಸರ್ಕಾರ ಪಾಲನೆ ಮಾಡಲಿದೆ’ ಎಂದರು.
‘ಯಾರಾದರೂ ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘಿಸಿದರೆ ದೂರು ನೀಡಲಿ. ಅದನ್ನು ಬಿಟ್ಟು ಪ್ರಚೋದನಕಾರಿ ಹೇಳಿಕೆ ನೀಡುತ್ತಾ ರಾಜಕೀಯ ಮಾಡುವುದು ಸರಿಯಲ್ಲ. ಶಾಂತಿ, ಸೌಹಾರ್ದ ಕದಡುವ ಮತ್ತು ಕೋಮು ಸೌಹಾರ್ದಕ್ಕೆ ಯಾವುದೇ ವ್ಯಕ್ತಿ, ಸಂಘಟನೆಗಳು ಧಕ್ಕೆ ತಂದರೂ ಅವರ ವಿರುದ್ಧ ಸರ್ಕಾರ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಿದೆ’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.