ಬೆಂಗಳೂರು: ರಾಜ್ಯ ಸರ್ಕಾರ ಆಗಸ್ಟ್ 1ರಿಂದ ಅಕ್ಟೋಬರ್ 31ರವರೆಗೆ ಸರ್ಕಾರಿ ಶಾಲೆ ಮತ್ತು ಕಾಲೇಜುಗಳ ಆಸ್ತಿ ಸಂರಕ್ಷಣಾ ಅಭಿಯಾನ ಹಮ್ಮಿಕೊಂಡಿದೆ.
ಸರ್ಕಾರ ಹಾಗೂ ದಾನಿಗಳು ನೀಡಿದ ಜಾಗದಲ್ಲಿ ಸರ್ಕಾರಿ ಶಾಲಾ, ಕಾಲೇಜುಗಳು ಕಾರ್ಯನಿರ್ವಹಿಸುತ್ತಿದ್ದು, ಹಲವೆಡೆ ಭೂ ದಾಖಲೆಗಳು ಶಾಲೆಯ ಹೆಸರಿನಲ್ಲಿ ಇಲ್ಲ. ಆಯಾ ಭೂಮಿಯನ್ನು ಶಾಲೆಗಳ ಹೆಸರಿಗೆ ಖಾತೆ ಮಾಡಿಸಲು, ನಿರುಪಯುಕ್ತ ಕಟ್ಟಡಗಳನ್ನು ಶೈಕ್ಷಣಿಕ ಚಟುವಟಿಕೆಗಳಿಗೆ ಬಳಸಿಕೊಳ್ಳಲು, ಅಪಾಯದ ಸ್ಥಿತಿಯಲ್ಲಿರುವ ಕಟ್ಟಡಗಳನ್ನು ತೆರವುಗೊಳಿಸಿ, ಹೊಸ ಕಟ್ಟಡ ನಿರ್ಮಿಸಲು ಅಗತ್ಯ ದಾಖಲೆಗಳನ್ನು ಕ್ರೋಡೀಕರಿಸುವುದು ಸೇರಿದಂತೆ ಒಟ್ಟಾರೆ ಆಸ್ತಿಯ ಸಂರಕ್ಷಣೆ ಈ ಅಭಿಯಾನದ ಉದ್ದೇಶ ಎಂದು ಶಿಕ್ಷಣ ಇಲಾಖೆ ಆಯುಕ್ತರು ಮಾಹಿತಿ ನೀಡಿದ್ದಾರೆ.
ನಿಗದಿತ ಅವಧಿಯ ಒಳಗೆ ಅಭಿಯಾನ ಪೂರ್ಣಗೊಳಿಸಲು ಆಯಾ ಶಾಲೆಯ ಮುಖ್ಯಶಿಕ್ಷಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಉಪ ನಿರ್ದೇಶಕರು ಕ್ರಮ ವಹಿಸಬೇಕು. ಅಭಿಯಾನದ ನಂತರ ಸಂಪೂರ್ಣ ವರದಿಯನ್ನು ಆಯಾ ಜಿಲ್ಲಾಧಿಕಾರಿಗಳು ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.