ADVERTISEMENT

ನಿಗದಿಯಂತೆ ಶಾಲೆಗಳು ಪ್ರಾರಂಭ: ಸಚಿವ ಬಿ.ಸಿ. ನಾಗೇಶ್

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2022, 10:43 IST
Last Updated 27 ಏಪ್ರಿಲ್ 2022, 10:43 IST
ಸಚಿವ ಬಿ.ಸಿ
ಸಚಿವ ಬಿ.ಸಿ   

ಮಂಗಳೂರು: ಕೋವಿಡ್ ನಿಯಂತ್ರಿಸಬಹುದಾದ ಕಾಯಿಲೆಯಾಗಿದ್ದು, ನಾಲ್ಕನೇ ಅಲೆ ಬಂದರೂ ಕೂಡ ನಿಗದಿಯಂತೆ ಶೈಕ್ಷಣಿಕ ವರ್ಷ ಆರಂಭವಾಗಿ, ತರಗತಿಗಳು ಪ್ರಾರಂಭವಾಗುತ್ತವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.

ಬುಧವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮೂರನೇ ಅಲೆ ಇರುವಾಗಲೇ ಶಾಲೆಗಳನ್ನು ನಡೆಸಿದ್ದೇವೆ. ಕೋವಿಡ್‌ನಿಂದಾಗಿ ಒಂದೂವರೆ ವರ್ಷದಲ್ಲಿ ಮಕ್ಕಳ ಶೈಕ್ಷಣಿಕ ಗುಣಮಟ್ಟ ಕಡಿಮೆಯಾಗಿರುವ ಕಾರಣ, 15 ದಿನ ಮುಂಚಿತವಾಗಿ ಶಾಲೆ ಪ್ರಾರಂಭಿಸಿ, ‘ಕಲಿಕಾ ಚೇತರಿಕೆ’ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುತ್ತಿದೆ. ತಜ್ಞರ ಪ್ರಕಾರ ಜುಲೈ ವೇಳೆಗೆ ನಾಲ್ಕನೇ ಅಲೆ ಬರುವ ಸಾಧ್ಯತೆ ಇದ್ದು, ಆ ಸಂದರ್ಭದಲ್ಲಿ ಪರಿಸ್ಥಿತಿ ಅವಲೋಕಿಸಿ, ಶಿಕ್ಷಣ ಇಲಾಖೆ ನಿರ್ಣಯ ಕೈಗೊಳ್ಳುತ್ತದೆ’ ಎಂದರು.

ಕರ್ನಾಟಕ ಪಠ್ಯಕ್ರಮದ ನಲಿಕಲಿ ಮತ್ತು ಚಿಲಿಪಿಲಿ ಕಾರ್ಯಕ್ರಮಗಳು ಎನ್‌ಇಪಿ (ರಾಷ್ಟ್ರೀಯ ಶಿಕ್ಷಣ ನೀತಿ) ಆಶಯಕ್ಕೆ ತಕ್ಕಂತೆ ಇವೆ. ಹೀಗಾಗಿ, 1 ಮತ್ತು 2ನೇ ತರಗತಿಗೆ ಈ ವರ್ಷದಿಂದ ರಾಜ್ಯದ 20 ಸಾವಿರ ಶಾಲೆಗಳಲ್ಲಿ ಎನ್‌ಇಪಿ ಜಾರಿಗೊಳಿಸಲಾಗುವುದು. ಸಂಖ್ಯಾಭ್ಯಾಸ ಮತ್ತು ಅಕ್ಷರಾಭ್ಯಾಸಕ್ಕೆ ಎನ್‌ಇಪಿಯಲ್ಲಿ ಒತ್ತು ನೀಡಲಾಗಿದೆ. ಇದು ಒತ್ತಡವಿಲ್ಲದೆ, ಮಕ್ಕಳು ಸಹಜವಾಗಿ ಕಲಿಯುವ ಪ್ರಕ್ರಿಯೆಯಾಗಿದೆ ಎಂದು ಪ್ರತಿಕ್ರಿಯಿಸಿದರು.

ADVERTISEMENT

‘ಬೆಂಗಳೂರಿನ ಶಾಲೆಯೊಂದರಲ್ಲಿ ಬೈಬಲ್‌ ಓದು ಕಡ್ಡಾಯಗೊಳಿಸಿರುವ ದೂರು ಬಂದ ಹಿನ್ನೆಲೆಯಲ್ಲಿ ಅಲ್ಲಿನ ಬಿಇಒಗೆ ಇದನ್ನು ಪರಿಶೀಲಿಸಲು ಸೂಚಿಸಲಾಗಿದೆಯೇ ವಿನಾ ಶಾಲೆಯ ಆಡಳಿತಾತ್ಮಕ ವಿಷಯದಲ್ಲಿ ಶಿಕ್ಷಣ ಇಲಾಖೆ ಹಸ್ತಕ್ಷೇಪ ಮಾಡುವುದಿಲ್ಲ’ ಎಂದು ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದರು.

‘ಕರ್ನಾಟಕ ಶಿಕ್ಷಣ ಕಾಯ್ದೆ ಅಡಿಯಲ್ಲಿ ನೋಂದಣಿಯಾದ ಶಾಲೆಗಳು ಕಾಯ್ದೆಯಲ್ಲಿರುವ ನಿಯಮ ಅನುಸರಿಸಬೇಕು. ಈ ಕಾಯ್ದೆ ಅನ್ವಯ ಯಾವುದೇ ಧಾರ್ಮಿಕ ಪುಸ್ತಕ ಅಥವಾ ಧಾರ್ಮಿಕ ಆಚರಣೆಯನ್ನು ಶಿಕ್ಷಣ ವ್ಯವಸ್ಥೆಯಲ್ಲಿ ತರಲು ಅವಕಾಶವಿಲ್ಲ. ಬೈಬಲ್‌ ಮತ್ತು ಕುರಾನ್‌ಗಳು ಧಾರ್ಮಿಕ ಪುಸ್ತಕಗಳು. ಭಗವದ್ಗೀತೆ ಧಾರ್ಮಿಕ ಪುಸ್ತಕ ಅಲ್ಲ. ಅದು ಜೀವನಕ್ಕೆ ಬೇಕಾದ ಮೌಲ್ಯಗಳನ್ನು ತಿಳಿಸುತ್ತದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.