ADVERTISEMENT

ಪರಿಶಿಷ್ಟರ ವಿಶೇಷ ಅನುದಾನ: ಕ್ರಿಯಾ ಯೋಜನೆಗೆ ಸೂಚನೆ

₹26,005 ಕೋಟಿ ಅನುದಾನ ಹಂಚಿಕೆ

​ಪ್ರಜಾವಾಣಿ ವಾರ್ತೆ
Published 11 ಜೂನ್ 2021, 22:16 IST
Last Updated 11 ಜೂನ್ 2021, 22:16 IST

ಬೆಂಗಳೂರು: 2021–22ನೇ ಸಾಲಿನ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಯೋಜನೆಯಡಿ ₹26,005 ಕೋಟಿ ಅನುದಾನ ಹಂಚಿಕೆ ಮಾಡಿದ್ದು, ಇದಕ್ಕೆ ಶೀಘ್ರವೇ ಕರಡು ಕ್ರಿಯಾ ಯೋಜನೆ ರೂಪಿಸುವಂತೆ ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಈ ಸಂಬಂಧ ವಿಕಾಸಸೌಧದಲ್ಲಿ ಎರಡು ದಿನಗಳ ಅವಧಿಯ ವರ್ಚುವಲ್‌ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮುಖ್ಯಮಂತ್ರಿಯವರು ಶೀಘ್ರವೇ ರಾಜ್ಯ ಪರಿಷತ್‌ ಸಭೆ ಕರೆಯಲಿದ್ದಾರೆ. ಅದಕ್ಕೆ ಮೊದಲೇ ಕ್ರಿಯಾ ಯೋಜನೆ ತಯಾರಿಸಬೇಕು ಎಂದು 35 ಇಲಾಖೆಗಳ ನೋಡಲ್‌ ಅಧಿಕಾರಿಗಳಿಗೆ ಸೂಚಿಸಿದರು.

ಎಲ್ಲ ಇಲಾಖೆಗಳ ಕ್ರೋಡೀಕೃತ ಕರಡು ಕ್ರಿಯಾ ಯೋಜನೆಯನ್ನು ಶೀಘ್ರವಾಗಿ ಸಲ್ಲಿಸಬೇಕು. ಈ ಕರಡು ಕ್ರಿಯಾ ಯೋಜನೆಯನ್ನು ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ರಾಜ್ಯ ಪರಿಷತ್‌ ಸಭೆಯಲ್ಲಿ ಮಂಡಿಸಿ ಅಂತಿಮ ಅನುಮೋದನೆ ಪಡೆಯಲಾಗುವುದು ಎಂದರು.

ADVERTISEMENT

ಕಳೆದ ಸಾಲಿನಲ್ಲಿ ಈ ಯೋಜನೆಗೆ ₹25,916 ಕೋಟಿ ಹಂಚಿಕೆ ಆಗಿತ್ತು. ಅದರಲ್ಲಿ ₹24,568 ಕೋಟಿಯನ್ನು (ಶೇ 95) ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯದ ಕಲ್ಯಾಣಕ್ಕಾಗಿ ಖರ್ಚು ಮಾಡಲಾಗಿದೆ ಎಂದು ಶ್ರೀರಾಮುಲು ಹೇಳಿದರು.

ಪರಿಶಿಷ್ಟ ಜಾತಿ ಮತ್ತು ವರ್ಗಗಳ ಕಲ್ಯಾಣಕ್ಕಾಗಿ ಹಲವು ಯೋಜನೆಗಳನ್ನು ಸರ್ಕಾರ ಹಮ್ಮಿಕೊಂಡಿದ್ದು, ಅತ್ಯಂತ ತಳಮಟ್ಟದವರೆಗೆ ಈ ಯೋಜನೆಯನ್ನು ತಲುಪಿಸಲಾಗುವುದು. ಈ ಯೋಜನೆಗಳನ್ನು ಸಮುದಾಯವು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಅಭಿವೃದ್ಧಿ ಹೊಂದಬೇಕು ಎಂದೂ ಮನವಿ ಮಾಡಿದರು.

ಸಭೆಯಲ್ಲಿ ಸಮಾಜಕಲ್ಯಾಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಾದ ಎನ್‌.ನಾಗಾಂಬಿಕಾ ದೇವಿ, ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಯೋಜನೆಯ ಸಲಹೆಗಾರ ವೆಂಕಟಯ್ಯ, ನೀರಾವರಿ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ರಾಕೇಶ್ ಸಿಂಗ್, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತ ರವಿಕುಮಾರ್ ಸುರಪುರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.