ನವದೆಹಲಿ: ಕರ್ನಾಟಕದ ರಾಜ್ಯ ವಿಪತ್ತು ಸ್ಪಂದನೆ ನಿಧಿಗೆ (ಎಸ್ಡಿಆರ್ಎಫ್) ಈ ವರ್ಷ ₹929 ಕೋಟಿ ಹಂಚಿಕೆ ಮಾಡಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯವು ಲೋಕಸಭೆಗೆ ಮಂಗಳವಾರ ತಿಳಿಸಿದೆ.
ಸದಸ್ಯರ ಪ್ರಶ್ನೆಗೆ ಉತ್ತರಿಸಿರುವ ಗೃಹ ಖಾತೆಯ ರಾಜ್ಯ ಸಚಿವ ನಿತ್ಯಾನಂದ ರಾಯ್, ‘ಇದರಲ್ಲಿ ಕೇಂದ್ರ ಸರ್ಕಾರದ ಪಾಲು ₹697 ಕೋಟಿ ಹಾಗೂ ರಾಜ್ಯ ಸರ್ಕಾರದ ಪಾಲು ₹232 ಕೋಟಿ. ಕೇಂದ್ರ ಸರ್ಕಾರವು ಈಗಾಗಲೇ ₹348 ಕೋಟಿ ಬಿಡುಗಡೆ ಮಾಡಿದೆ’ ಎಂದು ತಿಳಿಸಿದರು. ಮಳೆ ಹಾಗೂ ಪ್ರವಾಹದಿಂದ ರಾಜ್ಯದಲ್ಲಿ ಈ ವರ್ಷ 80 ಮಂದಿ ಮೃತಪಟ್ಟಿದ್ದಾರೆ ಎಂದೂ ಮಾಹಿತಿ ನೀಡಿದರು.
15ನೇ ಹಣಕಾಸು ಆಯೋಗದ ಶಿಫಾರಸಿನ ಪ್ರಕಾರ, ಕೇಂದ್ರ ಸರ್ಕಾರವು ಎಲ್ಲ ರಾಜ್ಯಗಳ ಎಸ್ಡಿಆರ್ಎಫ್ಗೆ 2021–22ರಿಂದ 2025–26ರ ಅವಧಿಗೆ ₹1,28,122 ಕೋಟಿ ಹಂಚಿಕೆ ಮಾಡಿದೆ. ಇದರಲ್ಲಿ ಕೇಂದ್ರ ಸರ್ಕಾರದ ಪಾಲು ₹98,080 ಕೋಟಿ. ಕೇಂದ್ರ ಸರ್ಕಾರ ಈವರೆಗೆ ರಾಜ್ಯಗಳಿಗೆ ₹42,366 ಕೋಟಿ ಬಿಡುಗಡೆ ಮಾಡಿದೆ ಎಂದೂ ಅವರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.