ADVERTISEMENT

2ನೇ ವಿಮಾನ ನಿಲ್ದಾಣ | ತಿಂಗಳ ಒಳಗೆ ಎಎಐ ವರದಿ: ಎಂ.ಬಿ. ಪಾಟೀಲ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2025, 15:30 IST
Last Updated 10 ಏಪ್ರಿಲ್ 2025, 15:30 IST
<div class="paragraphs"><p>ಎಂ.ಬಿ. ಪಾಟೀಲ</p></div>

ಎಂ.ಬಿ. ಪಾಟೀಲ

   

ಬೆಂಗಳೂರು: ‘ಬೆಂಗಳೂರು ಸಮೀಪ ನಿರ್ಮಿಸಲು ಉದ್ದೇಶಿಸಿರುವ ಎರಡನೇ ವಿಮಾನ ನಿಲ್ದಾಣಕ್ಕಾಗಿ ಮೂರು ಸ್ಥಳಗಳನ್ನು ಪರಿಶೀಲಿಸಿರುವ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (ಎಎಐ) ಉನ್ನತ ಮಟ್ಟದ ತಂಡ ಒಂದು ತಿಂಗಳಲ್ಲಿ ಅಭಿಪ್ರಾಯ ತಿಳಿಸುವ ಸಾಧ್ಯತೆ ಇದೆ’ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ತಿಳಿಸಿದರು.

ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ಎಎಐ ತಂಡ ನೀಡುವ ಅಭಿಪ್ರಾಯವನ್ನು ವಿಸ್ತೃತ ಅಧ್ಯಯನಕ್ಕೆ ವಿಮಾನ‌ ನಿಲ್ದಾಣಗಳನ್ನು ಅಭಿವೃದ್ಧಿಪಡಿಸುವಂಥ ಪರಿಣತ ಕಂಪನಿಗಳ ಮುಂದೆ ಕೊಂಡೊಯ್ಯಲಾಗುವುದು. ನಂತರ ವಿಮಾನ‌ ನಿಲ್ದಾಣಕ್ಕೆ ಸರ್ಕಾರ ಸ್ಥಳವನ್ನು ಅಂತಿಮಗೊಳಿಸಲಿದೆ. ವಿಮಾನ‌ ನಿಲ್ದಾಣ ಎಲ್ಲಿ ಮಾಡಿದರೆ ಸೂಕ್ತ ಎನ್ನುವುದು ಪ್ರಯಾಣಿಕರು ಹಾಗೂ ಕಾರ್ಗೊ ದಟ್ಟಣೆ ಮತ್ತು ಕೈಗಾರಿಕೆಗಳ ಅಗತ್ಯ ಮತ್ತಿತರ ಅಂಶಗಳನ್ನು ಅವಲಂಬಿಸಿದೆ’ ಎಂದರು.

ADVERTISEMENT

‘ಪಕ್ಷದ ಹಿರಿಯ ನಾಯಕ ಟಿ.ಬಿ. ಜಯಚಂದ್ರ ಅವರು ತಮ್ಮ ಕ್ಷೇತ್ರವಾದ ಶಿರಾ ಸಮೀಪ ಎರಡನೇ ವಿಮಾನ ನಿಲ್ದಾಣ ಬರಲೆಂದು ಪ್ರಯತ್ನಿಸುತ್ತಿದ್ದಾರೆ. ಅಲ್ಲಿ ಜಿಲ್ಲಾ ಮಟ್ಟದ ವಿಮಾನ ನಿಲ್ದಾಣ ಮಾಡಬಹುದೇ ವಿನಾ ಅದು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಆಗುವುದಿಲ್ಲ. ಬಿಜೆಪಿಯ ಅರವಿಂದ ಬೆಲ್ಲದ ಅವರು ಕೂಡ ಉತ್ತರ ಕರ್ನಾಟಕಕ್ಕೆ ಅನುಕೂಲವಾಗುವ ಜಾಗದಲ್ಲಿ ಹೊಸ ವಿಮಾನ ನಿಲ್ದಾಣ ಬರಲಿ ಎನ್ನುತ್ತಿದ್ದಾರೆ. ಕೇವಲ ಜಾಗವನ್ನು ಕೊಟ್ಟ ಮಾತ್ರಕ್ಕೆ ಎಲ್ಲವೂ ಆಗುವುದಿಲ್ಲ’ ಎಂದು ಅವರು ಅಭಿಪ್ರಾಯಪಟ್ಟರು.

‘ವಿಜಯಪುರ ವಿಮಾನ ನಿಲ್ದಾಣ ಉದ್ಘಾಟನೆಗೆ ಸಜ್ಜಾಗಿದೆ. ಪರಿಸರ ಇಲಾಖೆಯ ಅನುಮತಿ ಸಂಬಂಧ ಸುಪ್ರೀಂ ಕೋರ್ಟಿನಲ್ಲಿ ಒಂದು ಪ್ರಕರಣವಿದೆ. ಅದು ಸದ್ಯದಲ್ಲೇ ಇತ್ಯರ್ಥಗೊಳ್ಳುವ ಲಕ್ಷಣಗಳಿವೆ’ ಎಂದರು.

ಶಿರಾದಲ್ಲಿ ವಿಮಾನ ನಿಲ್ದಾಣ: ಸಚಿವ ಜಾರಕಿಹೊಳಿ

‘ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಶಿರಾ ಬಳಿ ನಿರ್ಮಾಣ ಆಗಬೇಕು ಎಂದು ನಾನು ಆರು ತಿಂಗಳ ಹಿಂದೆಯೇ ಮುಖ್ಯಮಂತ್ರಿಗೆ ಪತ್ರ ಬರೆದಿದ್ದೇನೆ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಶಿರಾದಲ್ಲಿ ವಿಮಾನ ನಿಲ್ದಾಣ ಬಂದರೆ ಉತ್ತರ ಕರ್ನಾಟಕ ಭಾಗದ ಹುಬ್ಬಳ್ಳಿ-ಧಾರವಾಡ ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಿಗೆ ಅನುಕೂಲವಾಗುತ್ತದೆ. ಅಲ್ಲಿ ಸರ್ಕಾರದ ಭೂಮಿ ಕೂಡ ಲಭ್ಯವಿದೆ’ ಎಂದರು.

‘2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಶಿರಾದಲ್ಲಾದರೆ ಏಳೆಂಟು ಜಿಲ್ಲೆಗಳ ಜನ ಬೆಂಗಳೂರಿಗೆ ಬರುವುದು ತಪ್ಪುತ್ತದೆ. ಬೆಂಗಳೂರು ಬಳಿಯೇ ಮತ್ತೊಂದು ವಿಮಾನ ನಿಲ್ದಾಣವಾದರೆ ಮತ್ತಷ್ಟು ಸಂಚಾರ ದಟ್ಟಣೆ ಆಗಲಿದೆ’ ಎಂದರು.

‘ನಾವು ಏನೇ ಶಿಫಾರಸು ಮಾಡಿದರೂ ಅಂತಿಮ ತೀರ್ಮಾನ ವಿಮಾನ ನಿಲ್ದಾಣ ಪ್ರಾಧಿಕಾರದ್ದು. ತಾಂತ್ರಿಕ ಅಂಶಗಳನ್ನು ಪರಿಗಣಿಸಿ ತಜ್ಞರ ಸಮಿತಿ ನಿರ್ಧಾರ ತೆಗೆದುಕೊಳ್ಳುತ್ತದೆ. ನಾವು ನಮ್ಮ ಅನುಕೂಲಕ್ಕೆ ತಕ್ಕಂತೆ ಏನೇ ಹೇಳಿದರೂ ಅದು ಕಾರ್ಯಸಾಧುವಲ್ಲ’ ಎಂದೂ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.