ಬೆಂಗಳೂರು: ಲೋಕೋಪಯೋಗಿ ಇಲಾಖೆಯ ಸಹಾಯಕ ಎಂಜಿನಿಯರ್ (ಎಇ) 660 ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸಂದರ್ಶನ (ವ್ಯಕ್ತಿತ್ವ ಪರೀಕ್ಷೆ) ಮುಗಿಸಿದ 24 ಗಂಟೆಯೊಳಗೆ ಪ್ರಕಟಿಸುವ ಮೂಲಕ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ದಾಖಲೆ ಬರೆದಿದೆ.
ನೇಮಕಾತಿ ಪ್ರಕ್ರಿಯೆಯಲ್ಲಿನ ವಿಳಂಬದ ಕಾರಣಕ್ಕೆ ಅಪಖ್ಯಾತಿಗೆ ಒಳಗಾಗಿದ್ದ ಕೆಪಿಎಸ್ಸಿ, ಈ ಸಾಧನೆಯ ಮೂಲಕ ಅಚ್ಚರಿ ಮೂಡಿಸಿದೆ.
ಸಹಾಯಕ ಎಂಜಿನಿಯರ್ ಹುದ್ದೆಗಳಿಗೆ ಆಯ್ಕೆಗೆ ನಡೆದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ 1:3 ಅನುಪಾತದಲ್ಲಿ ಆಯ್ಕೆಯಾಗಿದ್ದ ಅಭ್ಯರ್ಥಿಗಳಿಗೆ ನ.7ರಂದು ಸಂದರ್ಶನ ಆರಂಭಗೊಂಡಿತ್ತು. ಈ ಪ್ರಕ್ರಿಯೆ ಶುಕ್ರವಾರ (ಜ.6) ಪೂರ್ಣಗೊಂಡಿತ್ತು. ತಕ್ಷಣವೇ ತಾತ್ಕಾಲಿಕ ಆಯ್ಕೆ ಪಟ್ಟಿ ಸಿದ್ಧಪಡಿಸಿ ಕಾರ್ಯದರ್ಶಿ ವಿಕಾಸ್ ಕಿಶೋರ್ ಸುರಳ್ಕರ್, ಅನುಮೋದನೆಗಾಗಿ ಆಯೋಗಕ್ಕೆ ಮಂಡಿಸಿದ್ದರು. ಪಟ್ಟಿ ಸಲ್ಲಿಕೆಯಾದ ಕೆಲವೇ ಗಂಟೆಗಳಲ್ಲಿ ಆಯೋಗ ಪಟ್ಟಿಗೆ ಒಪ್ಪಿಗೆ ನೀಡಿದ್ದು, ಶನಿವಾರ ರಾತ್ರಿಯೇ ಪಟ್ಟಿಯನ್ನು ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ. ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳಿದ್ದರೆ ಏಳು ದಿನಗಳ ಒಳಗೆ ಕೆಪಿಎಸ್ಸಿ ಕಾರ್ಯದರ್ಶಿಗೆ ಸಲ್ಲಿಸಬೇಕು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.