ADVERTISEMENT

‘ತಿಲಕ’ ಹೇಳಿಕೆ: ಸಿದ್ದರಾಮಯ್ಯ ಮೇಲೆ ಮುಗಿಬಿದ್ದ ನೆಟ್ಟಿಗರು

#SelfieWithTilak ಹ್ಯಾಶ್‍ಟ್ಯಾಗ್ ಅಭಿಯಾನ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2019, 6:28 IST
Last Updated 7 ಮಾರ್ಚ್ 2019, 6:28 IST
ಟ್ವಿಟರ್‌ನಲ್ಲಿ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ
ಟ್ವಿಟರ್‌ನಲ್ಲಿ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ   

ಬೆಂಗಳೂರು: ‘ತಿಲಕ ಇಟ್ಟುಕೊಂಡವರನ್ನು ನೋಡಿದರೆ ಭಯವಾಗುತ್ತದೆ’ ಎಂಬ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆ ಖಂಡಿಸಿ ಟ್ವಿಟರ್‌ನಲ್ಲಿ ‘#SelfieWithTilak ಹ್ಯಾಶ್‍ಟ್ಯಾಗ್ ಬಳಸಿ ಅಭಿಯಾನ ಶುರುವಾಗಿದೆ. ದೇಶದಾದ್ಯಂತ ಬುಧವಾರ ಒಂದೇ ದಿನ ಸಾವಿರಾರು ಜನರು ತಿಲಕ ಧರಿಸಿದ ಫೋಟೊ ಶೇರ್‌ ಮಾಡಿದ್ದಾರೆ.

ಬಾದಾಮಿಯ ಕೆಂದೂರ ಕೆರೆಗೆ ನೀರು ತುಂಬಿಸುವ ಕಾಮಗಾರಿಗೆ ಚಾಲನೆ ನೀಡುವ ವೇಳೆ ಮಂಗಳವಾರ ಮಾತನಾಡಿದ್ದ ಸಿದ್ದರಾಮಯ್ಯ, ‘ನನಗೆ ತಿಲಕ ಇಟ್ಟುಕೊಂಡವರನ್ನು ಕಂಡರೆ ಭಯವಾಗುತ್ತದೆ’ ಎಂದು ಹೇಳಿದ್ದರು.

ಈ ಬಗ್ಗೆ ಬುಧವಾರ ಟ್ವೀಟ್‌ ಮಾಡಿರುವ ಸಂಸದೆ ಶೋಭಾ ಕರಂದ್ಲಾಜೆ, ‘ತಿಲಕ ನಮ್ಮ ಭಾರತೀಯ ಸಂಸ್ಕೃತಿಯ ಪ್ರತೀಕ. ಈ ಬಗ್ಗೆ ನಾನು ಹೆಮ್ಮೆ ಪಡುತ್ತೇನೆ’ ಎಂದಿದ್ದಾರೆ. ಸಿದ್ದರಾಮಯ್ಯ ಅವರು ತಿಲಕ ಇಟ್ಟುಕೊಂಡಿರುವ ಫೋಟೊ ಶೇರ್ ಮಾಡಿರುವ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ‘ಸಿದ್ದರಾಮಯ್ಯನರೇ ನೀವು ಹಿಂದೂಗಳನ್ನು ಇಷ್ಟೊಂದು ದ್ವೇಷಿಸುತ್ತಿದ್ದೀರಾ?’ ಎಂದು ಪ್ರಶ್ನಿಸಿದ್ದಾರೆ.

ಟೀಕೆಗಳು ವ್ಯಕ್ತವಾಗುತ್ತಿದ್ದಂತೆ ಸರಣಿ ಟ್ವೀಟ್‌ಗಳನ್ನು ಮಾಡಿರುವ ಸಿದ್ದರಾಮಯ್ಯ, ‘ತಿಲಕ ಇಟ್ಟುಕೊಂಡವರನ್ನು ನೋಡಿದರೆ ಭಯವಾಗುತ್ತೆ ಎಂದು ಹೇಳಿರುವುದು ನಿಜ. ಬಹಳಷ್ಟು ಕ್ರಿಮಿನಲ್‌ಗಳು ತಮ್ಮ ರಕ್ಷಣೆಗಾಗಿ ತಿಲಕ ಧರಿಸಿ ಮೆರೆದಾಡುತ್ತಿದ್ದಾರೆ. ಇವರು ಧರ್ಮ ದ್ರೋಹಿಗಳು ಮಾತ್ರವಲ್ಲ, ಸಮಾಜದ್ರೋಹಿಗಳು ಕೂಡಾ. ಅವರನ್ನು ದೃಷ್ಟಿಯಲ್ಲಿಟ್ಟುಕೊಂಡೇ ಹೇಳಿದ್ದು. ಏನಿವಾಗ?’ ಎಂದೂ ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.