ಬೆಂಗಳೂರು: ಕೋವಿಡ್ ಪರೀಕ್ಷೆ ಸಂದರ್ಭದಲ್ಲಿ ಹಿರಿಯ ನಾಗರಿಕರ ಜೀವನ ಮತ್ತು ಘನತೆ ರಕ್ಷಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.
ಅಖಿಲ ಕರ್ನಾಟಕ ವಯೋವೃದ್ಧ ಒಕ್ಕೂಟ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠವು ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ನೋಟಿಸ್ ನೀಡಲು ಆದೇಶಿಸಿತು.
‘ಸಾಂಕ್ರಾಮಿಕ ರೋಗವು ಹಿರಿಯ ನಾಗರಿಕರ ಮೇಲೆ ತೀವ್ರ ರೀತಿಯ ಪರಿಣಾಮ ಬೀರಿದೆ. 65 ವರ್ಷ ಮೇಲ್ಪಟ್ಟವರನ್ನು ಮನೆಯಲ್ಲೇ ಇರಲು ಎಲ್ಲ ಮಾರ್ಗಸೂಚಿಗಳಲ್ಲೂ ಸೂಚಿಸಲಾಗಿದೆ. ಬೆಂಗಳೂರಿನಲ್ಲಿ ಹಿರಿಯ ನಾಗರಿಕರಿಗೆ ಮಧ್ಯಾಹ್ನದ ಬಿಸಿಯೂಟ ಪುನರ್ ಆರಂಭಿಸುವ ಬಗ್ಗೆಯೂ ಬಿಬಿಎಂಪಿ ನಿರ್ಲಕ್ಷ್ಯ ವಹಿಸಿದೆ’ ಎಂದು ಅರ್ಜಿದಾರರು ದೂರಿದ್ದಾರೆ.
‘ಪಿಂಚಣಿ ಸಂಬಂಧ 2018ರ ಸೆಪ್ಟೆಂಬರ್ನಲ್ಲಿ ಸರ್ಕಾರವೇ ಆದೇಶ ಹೊರಡಿಸಿದೆ. ಆದರೆ, ಅದನ್ನು ಪಾಲಿಸಿಲ್ಲ. ಸಂಧ್ಯಾ ಸುರಕ್ಷಾ ಯೋಜನೆ ಮತ್ತು ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ಪಿಂಚಣಿ ಯೋಜನೆಯಡಿ 65 ವರ್ಷಕ್ಕಿಂತ ಮೇಲ್ಪಟ್ಟವರಿಗೆ ತಿಂಗಳಿಗೆ ₹1 ಸಾವಿರ, 60ರಿಂದ 64 ವರ್ಷದೊಳಗಿನವರಿಗೆ ₹600 ಪಿಂಚಣಿ ನಿಗದಿ ಮಾಡಿದೆ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಪಿಂಚಣಿ ಹೆಚ್ಚಿಸುವಲ್ಲಿಯೂ ಸರ್ಕಾರ ವಿಫಲವಾಗಿದೆ. 2020ರ ಜನವರಿಯಿಂದ ಪಿಂಚಣಿಯನ್ನೇ ವಿತರಿಸಿಲ್ಲ’ ಎಂದು ವಿವರಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.