ADVERTISEMENT

ಸೆ.15ರೊಳಗೆ ಪಠ್ಯ ಪುಸ್ತಕ ಪೂರೈಕೆ: ಸಚಿವ ಬಿ.ಸಿ. ನಾಗೇಶ್‌

​ಪ್ರಜಾವಾಣಿ ವಾರ್ತೆ
Published 25 ಆಗಸ್ಟ್ 2021, 21:45 IST
Last Updated 25 ಆಗಸ್ಟ್ 2021, 21:45 IST
ಬಿ.ಸಿ.ನಾಗೇಶ್
ಬಿ.ಸಿ.ನಾಗೇಶ್   

ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಿಗೆ ಸೆಪ್ಟೆಂಬರ್‌ 15ರೊಳಗೆ ಪಠ್ಯ ಪುಸ್ತಕ ಪೂರೈಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.

ಸುದ್ದಿಗಾರರ ಜತೆ ಬುಧವಾರ ಮಾತನಾಡಿದ ಅವರು, ‘ಕೋವಿಡ್‌ ಕಾರಣದಿಂದ ಸರ್ಕಾರಿ ಮುದ್ರಣಾಲಯಗಳಲ್ಲಿ ಪೂರ್ಣ ಪ್ರಮಾಣದ ಚಟುವಟಿಕೆ ನಡೆದಿರಲಿಲ್ಲ. ಆದರೂ, ಈಗಾಗಲೇ ಶೇಕಡ 50ಕ್ಕಿಂತ ಹೆಚ್ಚು ಶಾಲೆಗಳಿಗೆ ಪಠ್ಯ ಪುಸ್ತಕಗಳನ್ನು ಪೂರೈಸಲಾಗಿದೆ. ಈವರೆಗೆ ಶೇ 70ಕ್ಕಿಂತ ಹೆಚ್ಚು ಪುಸ್ತಕಗಳ ಮುದ್ರಣ ಮುಗಿದಿದೆ. ಸೆ.15ರೊಳಗೆ ಎಲ್ಲ ಶಾಲೆಗಳಿಗೂ ಪಠ್ಯ ಪುಸ್ತಕಗಳನ್ನು ಪೂರೈಸುವ ಗುರಿ ಹೊಂದಲಾಗಿದೆ’ ಎಂದರು.

ಉಚಿತ ವಿತರಣೆ ಮತ್ತು ಮಾರಾಟಕ್ಕಾಗಿ 5.34 ಕೋಟಿ ಪಠ್ಯ ಪುಸ್ತಕಗಳು ಬೇಕಿವೆ. ಈಗಾಗಲೇ 3.78 ಕೋಟಿ ಪುಸ್ತಕಗಳ ಮುದ್ರಣ ಮುಗಿದಿದ್ದು, 2.92 ಕೋಟಿ ಪುಸ್ತಕಗಳನ್ನು ಶಾಲೆಗಳಿಗೆ ಪೂರೈಸಲಾಗಿದೆ. ಉಳಿದ ಪುಸ್ತಕಗಳ ಮುದ್ರಣವನ್ನು ತ್ವರಿತವಾಗಿ ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದು ವಿವರಿಸಿದರು.

ADVERTISEMENT

ಆನ್‌ಲೈನ್‌ ತರಗತಿಗಳಿಗೆ ಪೂರಕವಾಗಿ ಪಠ್ಯ ಸಿದ್ಧಪಡಿಸಿ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಲಾಗಿದೆ. ಆ ಪಠ್ಯಗಳನ್ನು ಡೌನ್‌ಲೋಡ್‌ ಮಾಡಿಕೊಳ್ಳುವಂತೆ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ತಿಳಿಸಲಾಗಿತ್ತು. ಹೆಚ್ಚಿನ ವಿದ್ಯಾರ್ಥಿಗಳು ಆನ್‌ಲೈನ್‌ ಮೂಲಕ ಪಠ್ಯ ಪುಸ್ತಕ ಡೌನ್‌ಲೋಡ್‌ ಮಾಡಿಕೊಂಡಿರುವ ಮಾಹಿತಿ ಇದೆ. ಈ ವಿಷಯದಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯ ಸಹಕಾರ ನೀಡುವಂತೆ ಮುಖ್ಯ ಶಿಕ್ಷಕರು, ಶಾಲಾ ಆಡಳಿತ ಮಂಡಳಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.