ಶಬರಿಮಲೆ: ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ಭಾನುವಾರ ರಾತ್ರಿ ಮಿಂಚಿನ ಮುಷ್ಕರ ನಡೆಸಿದ 80ಕ್ಕೂ ಹೆಚ್ಚು ಭಕ್ತರನ್ನು ಪೊಲೀಸರು ವಶಕ್ಕೆ ಪಡೆದ ನಂತರ ಕೇರಳದಲ್ಲಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ.
ರಾತ್ರಿ ದೇಗುಲದ ಬಾಗಿಲು ಮುಚ್ಚಿದ ನಂತರ ಆವರಣದಲ್ಲಿ ಬಿಡಾರ ಹೂಡಿದ್ದ ಭಕ್ತರನ್ನು ಹೊರ ಹೋಗುವಂತೆ ಪೊಲೀಸರು ಸೂಚಿಸಿದರು. ಇದರಿಂದ ಕೆರಳಿದ ಭಕ್ತರು ಆವರಣದಲ್ಲಿಯೇ ಅಯ್ಯಪ್ಪ ನಾಮಜಪ ಪ್ರತಿಭಟನೆ ಆರಂಭಿಸಿದರು. 80ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪೊಲೀಸರ ಕ್ರಮವನ್ನು ಖಂಡಿಸಿ ಬಿಜೆಪಿ ಮತ್ತು ಆರ್ಎಸ್ಎಸ್ ಕಾರ್ಯಕರ್ತರು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ತಿರುವನಂತಪುರ ನಿವಾಸದ ಎದುರು ಪ್ರತಿಭಟನೆ ನಡೆಸಿದರು. ರಾಜ್ಯದ ಹಲವೆಡೆ ಪ್ರತಿಭಟನೆ ನಡೆಸಲಾಗಿದೆ.
ಮುಖ್ಯಮಂತ್ರಿ ಸಮರ್ಥನೆ:ಪೊಲೀಸರ ಕ್ರಮವನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸಮರ್ಥಿಸಿಕೊಂಡಿದ್ದಾರೆ. ಕೇರಳ ಸರ್ಕಾರ ಅಯ್ಯಪ್ಪ ಭಕ್ತರ ವಿರೋಧಿ ಎಂದು ಬಿಂಬಿಸುವ ಷಡ್ಯಂತ್ರ ನಡೆಯುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸರ್ಕಾರ ಶಬರಿಮಲೆಯಲ್ಲಿ 15 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಿದೆ. ಪೊಲೀಸರು ಈ ಪ್ರದೇಶದ ಮೇಲೆ ಹತೋಟಿ ಸಾಧಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.