ಬೆಂಗಳೂರು: ಶರಾವತಿ ಭೂಗರ್ಭ ಜಲ ವಿದ್ಯುತ್ ಯೋಜನೆಯ ಸಮೀಕ್ಷೆಗಾಗಿ ಶರಾವತಿ ಅಭಯಾರಣ್ಯದ ವ್ಯಾಪ್ತಿಯಲ್ಲಿ ರಂಧ್ರ ಕೊರೆಯದಂತೆ ಕರ್ನಾಟಕ ವಿದ್ಯುತ್ ನಿಗಮಕ್ಕೆ (ಕೆಪಿಸಿಎಲ್) ನಿರ್ಬಂಧ ವಿಧಿಸಿ ಹೈಕೋರ್ಟ್ ಶುಕ್ರವಾರ ಮಧ್ಯಂತರ ಆದೇಶ ಹೊರಡಿಸಿದೆ.
ಬಳ್ಳಾರಿಯ ಪರಿಸರ ಹೋರಾಟಗಾರ ಎಡ್ವರ್ಡ್ ಸಂತೋಷ್ ಮಾರ್ಟಿನ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ನೇತೃತ್ವದ ವಿಭಾಗೀಯ ಪೀಠ, ‘ರಾಜ್ಯ ವನ್ಯಜೀವಿ ಮಂಡಳಿ ಮತ್ತು ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿಗಳು ಸರಿಯಾಗಿ ಯೋಚಿಸದೆ ಅಭಯಾರಣ್ಯದೊಳಗೆ ರಂಧ್ರ ಕೊರೆಯಲು ಅನುಮತಿ ನೀಡಿರುವುದು ಮೇಲ್ನೋಟಕ್ಕೆ ಕಾಣಿಸುತ್ತಿದೆ’ ಎಂದು ಹೇಳಿತು.
2,000 ಮೆಗಾವಾಟ್ ಸಾಮರ್ಥ್ಯದ ಭೂಗರ್ಭ ಜಲ ವಿದ್ಯುತ್ ಯೋಜನೆಯ ಅನುಷ್ಠಾನಕ್ಕಾಗಿ ಕೆಪಿಸಿಎಲ್, ಜೋಗ ಸುತ್ತಮುತ್ತ 15 ಸ್ಥಳಗಳಲ್ಲಿ ಭೂಮಿಯಲ್ಲಿ ರಂಧ್ರ ಕೊರೆದು ಸಮೀಕ್ಷೆ ನಡೆಸುತ್ತಿದೆ. ಸಮೀಕ್ಷೆಗೆ ಅನುಮತಿ ನೀಡುವ ಸಂಬಂಧ ರಾಜ್ಯ ವನ್ಯಜೀವಿ ಮಂಡಳಿ ಮತ್ತು ಕೇಂದ್ರ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿಗಳು ಒಪ್ಪಿಗೆ ನೀಡಿರುವ ಸಭೆಯ ನಡಾವಳಿಗಳನ್ನು ಹತ್ತು ದಿನಗಳೊಳಗೆ ಸಲ್ಲಿಸುವಂತೆ ನ್ಯಾಯಾಲಯ ಪ್ರತಿವಾದಿ ವಕೀಲರಿಗೆ ಸೂಚಿಸಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.