ADVERTISEMENT

ತೆರಿಗೆ ಸಂಗ್ರಹ ಕುಂಠಿತ: ಅಭಿವೃದ್ಧಿ ಕಾರ್ಯಗಳ ಹಿನ್ನಡೆ

ಶತಮಾನೋತ್ಸವ ಭವನ ಉದ್ಘಾಟಿಸಿದ ಸಿಎಂ

​ಪ್ರಜಾವಾಣಿ ವಾರ್ತೆ
Published 1 ಜುಲೈ 2021, 19:10 IST
Last Updated 1 ಜುಲೈ 2021, 19:10 IST
ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೂತನ ಶತಮಾನೋತ್ಸವ ಭವನ ಉದ್ಘಾಟಿಸಿದರು. (ಎಡದಿಂದ) ಸಂಸದ ಬಿ.ವೈ.ರಾಘವೇಂದ್ರ, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌.ಷಡಕ್ಷರಿ ಇದ್ದರು  –ಪ್ರಜಾವಾಣಿ ಚಿತ್ರ
ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೂತನ ಶತಮಾನೋತ್ಸವ ಭವನ ಉದ್ಘಾಟಿಸಿದರು. (ಎಡದಿಂದ) ಸಂಸದ ಬಿ.ವೈ.ರಾಘವೇಂದ್ರ, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌.ಷಡಕ್ಷರಿ ಇದ್ದರು  –ಪ್ರಜಾವಾಣಿ ಚಿತ್ರ   

ಬೆಂಗಳೂರು: ಕೋವಿಡ್‌ನಿಂದಾಗಿ ತೆರಿಗೆ ಸಂಗ್ರಹ ಕ್ಷೀಣಿಸಿದೆ. ಹೀಗಾಗಿ ಅಭಿವೃದ್ಧಿ ಕೆಲಸಗಳು ಕುಂಠಿತಗೊಂಡಿವೆ. ಸರ್ಕಾರಿ ನೌಕರರ ಇತರ ಬೇಡಿಕೆಗಳನ್ನು ಈಡೇರಿಸಲು ಮುಂದಿನ ದಿನಗಳಲ್ಲಿ ಪ್ರಯತ್ನಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಭರವಸೆ ನೀಡಿದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಕಬ್ಬನ್ ಉದ್ಯಾನದಲ್ಲಿ ನೂತನವಾಗಿ ನಿರ್ಮಿಸಿರುವ ಶತಮಾನೋತ್ಸವ ಭವನ ಉದ್ಘಾಟಿಸಿ ಮಾತನಾಡಿದ ಅವರು, ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನೌಕರರ ಹಲವು ಬೇಡಿಕೆಗಳನ್ನು ಈಡೇರಿಸಿದ ತೃಪ್ತಿ ಇದೆ. ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಈ ಹಿಂದೆ ₹40 ಲಕ್ಷ ಅನುದಾನ ನೀಡಲಾಗುತ್ತಿತ್ತು. ನಮ್ಮ ಸರ್ಕಾರ ₹2.5 ಕೋಟಿ ಅನುದಾನ ಕೊಟ್ಟಿದೆ’ಎಂದರು.

‘ಸರ್ಕಾರಿ ನೌಕರರು ಹಾಗೂ ಅವರ ಅವಲಂಬಿತರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಸಂಪೂರ್ಣ ನಗದು ರಹಿತ ವೈದ್ಯಕೀಯ ಸೇವೆ ಒದಗಿಸುವ ಯೋಜನೆ ಜಾರಿಗೊಳಿಸಲು ಸರ್ಕಾರ ಮುಂದಾಗಿದೆ. ನೌಕರರ ಮೇಲಿನ ಅನಾಮಧೇಯ ದೂರುಗಳಿಗೆ ಸರ್ಕಾರದ ತನಿಖೆಗೆ ಅಗತ್ಯವಿಲ್ಲ ಎಂಬ ಆದೇಶ ಹೊರಡಿಸಲಾಗಿದೆ. ಇದರಿಂದ ನೌಕರರು ಮುಕ್ತವಾಗಿ ಕಾರ್ಯನಿರ್ವಹಿಸಲು ಸಹಾಯಕವಾಗಲಿದೆ. ಜೊತೆಗೆ ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೆ ಅವರ ಸೇವಾವಧಿಯಲ್ಲಿ 180 ದಿನಗಳ ಶಿಶು ಪಾಲನಾ ರಜೆ ನೀಡುವ ಸಂಬಂಧ ಆದೇಶ ಹೊರಡಿಸಲಾಗಿದೆ. ಇದರಿಂದ ಸುಮಾರು4 ಲಕ್ಷ ಮಹಿಳೆಯರಿಗೆ ಪ್ರಯೋಜನವಾಗಲಿದೆ’ ಎಂದು ತಿಳಿಸಿದರು.

ADVERTISEMENT

‘ಸರ್ಕಾರಿ ನೌಕರರ ಕುಂದು ಕೊರತೆಗಳನ್ನು ಆಲಿಸಲು ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಸಂಘದ ಜಿಲ್ಲಾ ಮತ್ತು ತಾಲ್ಲೂಕು ಘಟಕಗಳ ಅಧ್ಯಕ್ಷರ ನೇತೃತ್ವದಲ್ಲಿ ಜಂಟಿ ಸಮಾಲೋಚನ ಸಮಿತಿ ರಚಿಸಲಾಗಿದೆ. ಕೋವಿಡ್‌ ಸಂಕಷ್ಟದ ಸಮಯದಲ್ಲೂ ನೌಕರರು ಸರ್ಕಾರಕ್ಕೆ ದೇಣಿಗೆ ನೀಡಿರುವುದು ಪ್ರಶಂಸನೀಯ. ರಾಜ್ಯದ ವಿವಿಧೆಡೆಯಿಂದ ಬರುವ ಸರ್ಕಾರಿ ನೌಕರರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ₹13 ಕೋಟಿ ವೆಚ್ಚದಲ್ಲಿ ಶತಮಾನೋತ್ಸವ ಭವನ ನಿರ್ಮಿಸಲಾಗಿದೆ’ ಎಂದು ಹೇಳಿದರು.

‘ಗ್ರಾಮೀಣ ಭಾಗದ ಎಲ್ಲರಿಗೂ ಸರ್ಕಾರದ ಯೋಜನೆಗಳನ್ನು ತಲುಪಿಸಲು ಅಧಿಕಾರಿಗಳು ಶ್ರಮಿಸುತ್ತಿದ್ದಾರೆ. ಇನ್ನಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಿ ಸರ್ಕಾರದ ಗೌರವ ಹೆಚ್ಚಿಸಬೇಕು’ ಎಂದೂ ಅವರು ಸಲಹೆ ನೀಡಿದರು.

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌.ಷಡಕ್ಷರಿ ಅವರು ಬಾಕಿ ಇರುವ ತುಟ್ಟಿಭತ್ಯೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಲೋಕೋಪಯೋಗಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.