ADVERTISEMENT

ಯತ್ನಾಳ ಸವಾಲು ಸ್ವೀಕರಿಸಿ ಶಾಸಕ ಸ್ಥಾನಕ್ಕೆ ಸಚಿವ ಶಿವಾನಂದ ಪಾಟೀಲ ರಾಜೀನಾಮೆ

ಶಾಸಕ ಯತ್ನಾಳರಿಗೆ ಮರು ಸವಾಲು ಹಾಕಿದ ಸಚಿವ

​ಪ್ರಜಾವಾಣಿ ವಾರ್ತೆ
Published 2 ಮೇ 2025, 8:29 IST
Last Updated 2 ಮೇ 2025, 8:29 IST
<div class="paragraphs"><p>ಶಿವಾನಂದ ಪಾಟೀಲ</p></div>

ಶಿವಾನಂದ ಪಾಟೀಲ

   

ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು, ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೂ ರಾಜೀನಾಮೆ ನೀಡುವಂತೆ ಸವಾಲು ಹಾಕಿದ್ದಾರೆ.

ಸಭಾಧ್ಯಕ್ಷ ಯು.ಟಿ.ಖಾದರ್ ಅವರನ್ನು ಶುಕ್ರವಾರ ಭೇಟಿ ಮಾಡಿದ ಶಿವಾನಂದ ಪಾಟೀಲ ಅವರು ರಾಜೀನಾಮೆ ಪತ್ರ ಸಲ್ಲಿಸಿದರು. 

ADVERTISEMENT

‘ಬಸನಗೌಡ ಪಾಟೀಲ ಯತ್ನಾಳ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ನನ್ನ ವಿರುದ್ಧ ಬಸವನ ಬಾಗೇವಾಡಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಸವಾಲು ಹಾಕಿದ್ದಾರೆ. ನಾನು ಆ ಸವಾಲನ್ನು ಸ್ವೀಕರಿಸಿ, ಅವರ ವಿರುದ್ಧ ಸ್ಪರ್ಧಿಸಲು ತೀರ್ಮಾನಿಸಿದ್ದೇನೆ. ಆದ ಕಾರಣ ನಾನು ಬಸವನ ಬಾಗೇವಾಡಿ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ.  ಅದೇ ರೀತಿ ಬಸನಗೌಡ ಪಾಟೀಲ ಯತ್ನಾಳ ಅವರೂ ವಿಜಯಪುರ ನಗರ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕು. ಅವರ ರಾಜೀನಾಮೆ ಅಂಗೀಕಾರವಾದರೆ ಮಾತ್ರ ನನ್ನ ರಾಜೀನಾಮೆಯನ್ನು ಅಂಗೀಕರಿಸಬೇಕು’ ಎಂದು ಶಿವಾನಂದ ಪಾಟೀಲ ಅವರು ತಮ್ಮ ರಾಜೀನಾಮೆಗೆ ಕಾರಣ ನೀಡಿದ್ದಾರೆ.

ಸಭಾಧ್ಯಕ್ಷರ ಭೇಟಿಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಶಿವಾನಂದ ಪಾಟೀಲ ಅವರು, ‘ಯತ್ನಾಳ ಅವರು ನನ್ನ ಬಗ್ಗೆ ಮತ್ತು ನನ್ನ ತಂದೆಯವರ ಬಗ್ಗೆ ವೈಯಕ್ತಿಕವಾಗಿ ನಿಂದನೆ ಮಾಡಿದ್ದಾರೆ. ಇಂತಹ ಮಾತುಗಳನ್ನು ಸಹಿಸುವುದಕ್ಕೆ ಆಗುವುದಿಲ್ಲ. ಆದ್ದರಿಂದ ರಾಜೀನಾಮೆ ನೀಡುವ ಮೂಲಕ ಅವರ ಸವಾಲು ಸ್ವೀಕರಿಸಿದ್ದೇನೆ. ಯತ್ನಾಳ ಅವರೂ ರಾಜೀನಾಮೆ ನೀಡಲಿ. ನಾನು ವಿಜಯಪುರದಿಂದ ಚುನಾವಣೆ ಎದುರಿಸಲು ಸಿದ್ಧನಿದ್ದೇನೆ. ಇಲ್ಲವೇ ಅವರೇ ಬಸವನ ಬಾಗೇವಾಡಿಯಿಂದ ಸ್ಪರ್ಧಿಸಲಿ ಎಂದು ಸವಾಲು ಹಾಕಿದರು.

‘ರಾಜೀನಾಮೆ ನೀಡುವಂತೆ ಶುಕ್ರವಾರದವರೆಗೆ ಗಡುವು ನೀಡಿದ್ದರು. ಅದರಂತೆ ನಾನು ಸಭಾಧ್ಯಕ್ಷರಿಗೆ ರಾಜೀನಾಮೆ ನೀಡಿದ್ದೇನೆ. ಅವರು ರಾಜೀನಾಮೆ ನೀಡುವುದಿದ್ದರೆ, ಅವರಿಗಿಂತ ಒಂದು ದಿನ ಮೊದಲೇ ನನ್ನ ರಾಜೀನಾಮೆ ಸ್ವೀಕರಿಸುವಂತೆ ಸಭಾಧ್ಯಕ್ಷರಿಗೆ ಮನವಿ ಮಾಡಿದ್ದೇನೆ’ ಎಂದು ಶಿವಾನಂದ ಪಾಟೀಲ ಹೇಳಿದರು.

‘ರಾಜೀನಾಮೆ ನೀಡುವುದು ನನ್ನ ವೈಯಕ್ತಿಕ ನಿರ್ಧಾರ. ಈ ಬಗ್ಗೆ ಮುಖ್ಯಮಂತ್ರಿ ಆಗಲಿ, ಪಕ್ಷದ ಜತೆಗಾಗಲಿ ಚರ್ಚಿಸಿಲ್ಲ. ಯತ್ನಾಳ ಅವರಿಗೆ ರಾಜೀನಾಮೆಗೆ ಗಡುವು ನೀಡುವುದಿಲ್ಲ’ ಎಂದರು.

ಅಂಗೀಕಾರ ಅಸಾಧ್ಯ: ಖಾದರ್‌

‘ಶಿವಾನಂದ ಪಾಟೀಲರು ತಮ್ಮ ಶಾಸಕ ಸ್ಥಾನಕ್ಕೆ ನೀಡಿರುವ ಷರತ್ತುಬದ್ಧ ರಾಜೀನಾಮೆಯನ್ನು ಅಂಗೀಕರಿಸಲು ಸಾಧ್ಯವಿಲ್ಲ ಎಂಬುದನ್ನು ಅವರಿಗೆ ಮನವರಿಕೆ ಮಾಡಿಕೊಡಲಾಗಿದೆ. ಅವರ ರಾಜೀನಾಮೆಯನ್ನು ಅಂಗೀಕರಿಸಿಲ್ಲ’ ಎಂದು ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನನ್ನನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ್ದ ಶಿವಾನಂದ ಪಾಟೀಲರು, ಯತ್ನಾಳ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ಮಾತ್ರ, ತಮ್ಮ ರಾಜೀನಾಮೆಯನ್ನು ಅಂಗೀಕರಿಸುವಂತೆ ಕೋರಿದ್ದರು. ಆದರೆ ಯತ್ನಾಳ ಅವರು ರಾಜೀನಾಮೆ ಸಲ್ಲಿಸುವ ಸಂಬಂಧ ನನ್ನನ್ನು ಭೇಟಿಯಾಗಿಲ್ಲ ಹಾಗೂ ವಿಧಾನಸಭಾ ಸಚಿವಾಲಯಕ್ಕೂ ಅವರು ರಾಜೀನಾಮೆ ಪತ್ರ ಸಲ್ಲಿಸಿಲ್ಲ’ ಎಂದರು.

‘ವಿಧಾನಸಭೆಯ ನಿಯಮಗಳ ಪ್ರಕಾರ ಶಿವಾನಂದ ಪಾಟೀಲ ಅವರ ಷರತ್ತುಬದ್ಧ ರಾಜೀನಾಮೆಯನ್ನು ಅಂಗೀಕರಿಸಲು ಸಾಧ್ಯವಿಲ್ಲ. ಹೀಗಾಗಿ ಅದನ್ನು ಅಂಗೀಕರಿಸಿಲ್ಲ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.