ADVERTISEMENT

ಕೇಂದ್ರ ಗೃಹ ಸಚಿವಾಲಯಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಪತ್ರ

ಬಿಜೆಪಿ ಹಿತೈಷಿಗಳ ವಿರುದ್ಧ ಪ್ರತೀಕಾರ

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2019, 19:37 IST
Last Updated 29 ಏಪ್ರಿಲ್ 2019, 19:37 IST

ಬೆಂಗಳೂರು: ‘ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ಬಿಜೆಪಿ ಬಗ್ಗೆ ಸಹಾನುಭೂತಿ ಹೊಂದಿರುವವರನ್ನು ಗುರಿಯಾಗಿಸಿಕೊಂಡು ರಾಜ್ಯಸರ್ಕಾರ ಪ್ರತೀಕಾರ ತೀರಿಸಿಕೊಳ್ಳುತ್ತಿದೆ’ ಎಂದು ಆರೋಪಿಸಿ ಕೇಂದ್ರ ಗೃಹ ಸಚಿವಾಲಯಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಅವರು ಪತ್ರಬರೆದಿದ್ದಾರೆ.

‘ಲಿಂಗಾಯತ ಪ್ರತ್ಯೇಕ ಧರ್ಮದ ಬಗ್ಗೆ ಗೃಹ ಸಚಿವ ಎಂ.ಬಿ. ಪಾಟೀಲ ಅವರು ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ’ ಎನ್ನಲಾದಪ್ರಕರಣದಲ್ಲಿ ಪೊಲೀಸರ ಒತ್ತಡಕ್ಕೆಒಳಗಾಗಿ ಕೆಲಸ ಮಾಡುತ್ತಿದ್ದಾರೆ. ‘ಪೋಸ್ಟ್‌ ಕಾರ್ಡ್‌’ ವೆಬ್‌ಸೈಟ್‌ ಮುಖ್ಯಸ್ಥ ಮಹೇಶ್ ವಿಕ್ರಮ್ ಹೆಗ್ಡೆ ಅವರನ್ನು ಬಂಧಿಸಿದ್ದರು.

‘ನಕಲಿ ಪತ್ರ ಸೃಷ್ಟಿ ಮಾಡಿರುವ ಆರೋಪದ ಮೇಲೆ ಬಿಜೆಪಿ ಬಗ್ಗೆ ಒಲವು ಹೊಂದಿರುವ ಪತ್ರಕರ್ತ ಹೇಮಂತ್ ಕುಮಾರ್ ಅವರನ್ನು ಬಂಧಿಸಿದ್ದಾರೆ. ಈ ಬಗ್ಗೆ ವಿಡಿಯೊ ಪ್ರಕಟಿಸಿದ ಕಾರಣಕ್ಕೆ ಹಿಂದೂ ಪರ ಕಾರ್ಯಕರ್ತೆ ಶ್ರುತಿ ಬೆಳ್ಳಕ್ಕಿ ಅವರನ್ನೂ ಬಂಧಿಸಲಾಗಿದೆ. ಡಿಜಿಪಿ ನೀಲಮಣಿ ರಾಜು ಅವರನ್ನು ಬಿಜೆಪಿ ನಿಯೋಗ ಭೇಟಿ ಮಾಡಿ ಈ ಬಗ್ಗೆ ಪ್ರಶ್ನಿಸಿದಾಗ, ಅವರು ಸಮರ್ಪಕವಾದ ಉತ್ತರ ನೀಡಿಲ್ಲ’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ADVERTISEMENT

‘ಗೃಹ ಸಚಿವರ ಸೂಚನೆಯಂತೆ ಹೇಮಂತ್ ಕುಮಾರ್ ಅವರನ್ನು ಬಂಧಿಸಲಾಗಿದೆ. ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ ಅವರ ಪತಿ, ಸಿಐಡಿ ಐಜಿ‍ಪಿ ಹೇಮಂತ್‌ ನಿಂಬಾಳ್ಕರ ತನಿಖೆ ನಡೆಸುತ್ತಿರುವುದನ್ನು ಗಮನಿಸಿದರೆ ಇದರ ಹಿಂದಿರುವ ಉದ್ದೇಶ ಸ್ಪಷ್ಟವಾಗುತ್ತದೆ’ಎಂದಿದ್ದಾರೆ.

ಬೀದರ್‌ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಶಾಸಕ ಬಿ. ನಾರಾಯಣ ರಾವ್ ಅವಹೇಳನಕಾರಿ ‍ಪದ ಬಳಸಿದ್ದರು. ಈಬಗ್ಗೆ ಪೊಲೀಸರಿಗೆ ಮತ್ತು ಚುನಾವಣಾ ಆಯೋಗಕ್ಕೆದೂರು ಸಲ್ಲಿಸಲಾಗಿತ್ತು. ಆದರೆ, ಯಾರೂ ಕ್ರಮ ಜರುಗಿಸಿಲ್ಲ.
ಎಂ.ಬಿ. ಪಾಟೀಲ ಅವರು ಗೃಹ ಇಲಾಖೆಯನ್ನು ತಮ್ಮ ಸ್ವಾರ್ಥಕ್ಕಾಗಿಬಳಕೆ ಮಾಡಿಕೊಳ್ಳುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರ ಬಂಧನ ನಿಲ್ಲಿಸಲು ನೀಲಮಣಿರಾಜು ಅವರಿಗೆ ಆದೇಶ ನೀಡಬೇಕು ಎಂದು ಗೃಹ ಸಚಿವರಿಗೆ ಪತ್ರದಲ್ಲಿ ಶೋಭಾ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.