ಹುಬ್ಬಳ್ಳಿ: ಪಾಕ್ ಪರ ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾಗಿ, ನ್ಯಾಯಾಂಗ ವಶದಲ್ಲಿರುವ ಮೂವರು ವಿದ್ಯಾರ್ಥಿಗಳನ್ನು ಹುಬ್ಬಳ್ಳಿಯಿಂದ ಬೆಳಗಾವಿಗೆ ಸ್ಥಳಾಂತರ ಮಾಡಲಾಗಿದೆ.
'ಆರೋಪಿಗಳನ್ನು ನಗರದ ಉಪಕಾರಾಗೃಹದಲ್ಲಿ ಇಡಲಾಗಿತ್ತು. ಮುಂಜಾಗ್ರತಾ ಕ್ರಮವಾಗಿ ಬೆಳಗಾವಿಯ ಹಿಂಡಲಗಾ ಜೈಲಿಗೆ ಇಂದು ಬೆಳಿಗ್ಗೆ ಸ್ಥಳಾಂತರಿಸಲಾಗಿದೆ' ಎಂದು ಉಪಕಾರಾಗೃಹದ ಅಧೀಕ್ಷಕ ಅಶೋಕ ಭಜಂತ್ರಿ ತಿಳಿಸಿದ್ದಾರೆ.
ಮೂವರನ್ನೂ ಅಂದೇರಿ ಸೆಲ್ನಲ್ಲಿ ಇರಿಸಲಾಗಿದೆ. ಇತರ ಕೈದಿಗಳಿಂದ ಹಲ್ಲೆ ಭೀತಿ ಇರುವುದರಿಂದ ಹೆಚ್ಚಿನ ನಿಗಾ ವಹಿಸಲಾಗಿದೆ ಎಂದು ಹಿಂಡಲಗಾ ಕಾರಾಗೃಹದ ಮುಖ್ಯ ಸೂಪರಿಂಟೆಂಡೆಂಟ್ ಕೃಷ್ಣಕುಮಾರ್ ತಿಳಿಸಿದ್ದಾರೆ.
ನಮ್ಮ ಹುಡುಗರು ದೇಶದ್ರೋಹಿಗಳಲ್ಲ
ಪಾಕ್ ಪರ ಘೋಷಣೆ ಕೂಗಿದವರ ಕುಟುಂಬದವರು ಹಾಗೂ ಸ್ನೇಹಿತರು ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಕಮಿಷನರ್ ಕಚೇರಿಗೆ ಭೇಟಿ ನೀಡಿ, ಮಾಹಿತಿ ಹಂಚಿಕೊಂಡಿದ್ದಾರೆ. ನಮ್ಮ ಹುಡುಗರು ದೇಶದ್ರೋಹಿಗಳಲ್ಲ. ಹುಬ್ಬಳ್ಳಿಯಲ್ಲಿ ಉತ್ತಮ ಶಿಕ್ಷಣ ದೊರೆಯುತ್ತದೆ ಎಂದು ಕಳಿಸಿದ್ದೆವು. ಅವರು ಯಾಕೆ ಹೀಗೆ ಮಾಡಿದ್ದಾರೆ ಎಂಬುದು ಅಚ್ಚರಿ ತಂದಿದೆ ಎಂದು ಸ್ನೇಹಿತರೊಬ್ಬರು ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.