ADVERTISEMENT

ಬೀದಿಯಲ್ಲಿ ಪ್ರತಿಕ್ರಿಯಿಸುವುದಿಲ್ಲ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 9 ಜನವರಿ 2019, 19:48 IST
Last Updated 9 ಜನವರಿ 2019, 19:48 IST
   

ಮೈಸೂರು: ‘ಜೆಡಿಎಸ್‌ ಮುಖಂಡರ ಹೇಳಿಕೆಗೆ ಬೀದಿಯಲ್ಲಿ ಪ್ರತಿಕ್ರಿಯಿಸುವುದಿಲ್ಲ. ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚಿಸಲಾಗುವುದು’ ಎಂದು ಕಾಂಗ್ರೆಸ್‌– ಜೆಡಿಎಸ್‌ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಇಲ್ಲಿ ಬುಧವಾರ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ‘ಮುಂಬರುವ ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆ ಸಂಬಂಧ ಜೆಡಿಎಸ್‌ ವರಿಷ್ಠರ ಜೊತೆ ಈ ತಿಂಗಳೊಳಗೆ ಮಾತನಾಡುತ್ತೇನೆ. ನಾವು ಯಾವ ಕ್ಷೇತ್ರದಲ್ಲಿ ಗೆಲ್ಲುಬಹುದು, ಅವರು ಯಾವ ಕ್ಷೇತ್ರದಲ್ಲಿ ಗೆಲ್ಲಬಹುದು ಎಂದು ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು’ ಎಂದರು.

‘ರಾಜಕೀಯದಲ್ಲಿ ಯಾವಾಗಲೂ, ಎಲ್ಲರೂ ಖುಷಿಯಾಗಿರಲು ಸಾಧ್ಯವಿಲ್ಲ. ಅಸಮಾಧಾನ ಇದ್ದೇ ಇರುತ್ತದೆ’ ಎಂದು ಹೇಳಿದರು.

ADVERTISEMENT

ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ವಿಚಾರದಲ್ಲಿ ಕಾಂಗ್ರೆಸ್‌ ಪಕ್ಷದ ವಿರುದ್ಧ ಸಚಿವ ಎಚ್‌.ಡಿ.ರೇವಣ್ಣ ಹಾಗೂ ಜೆಡಿಎಸ್‌ ಇತರ ಮುಖಂಡರು ನೀಡಿರುವ ಹೇಳಿಕೆಗೆ ಈ ರೀತಿ ಪ್ರತಿಕ್ರಿಯಿಸಿದರು.ಸಚಿವ ಪುಟ್ಟರಂಗಶೆಟ್ಟಿ ಟೈಪಿಸ್ಟ್‌ ಬಳಿ ಹಣ ಸಿಕ್ಕಿರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ‘ಪ್ರಕರಣದ ಬಗ್ಗೆ ಎಸಿಬಿ ತನಿಖೆ ನಡೆಸುತ್ತಿದೆ. ತನಿಖೆ ನಡೆಸಿ ವರದಿ ಕೊಡಲಿ ಆಮೇಲೆ ಮಾತನಾಡುತ್ತೇನೆ‌’ ಎಂದರು.

ಚುನಾವಣಾ ಗಿಮಿಕ್‌: ‘ಆರ್ಥಿಕವಾಗಿ ಹಿಂದುಳಿದ ಮೇಲ್ಜಾತಿಯವರಿಗೆ ಶೇ 10ರಷ್ಟು ಮೀಸಲಾತಿ ನೀಡಲು ಮುಂದಾಗಿರುವ ಕೇಂದ್ರ ಸರ್ಕಾರದ ಕ್ರಮ ಚುನಾವಣಾ ಗಿಮಿಕ್. ಮೀಸಲಾತಿ ನೀಡಬೇಕೆನ್ನುವುದು ಸ್ವಾಗತಾರ್ಹ. ಆದರೆ, ಮೀಸಲಾತಿ ವಿರೋಧಿಸುತ್ತಿದ್ದ ಬಿಜೆಪಿಯವರೇ ಈಗ ಲೋಕಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಮೀಸಲಾತಿ ಮಸೂದೆ ಮಂಡಿಸಿದ್ದಾರೆ’ ಎಂದು ವ್ಯಂಗ್ಯವಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.