ಮೈಸೂರು: ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಅವರು ವಿಧಾನಸಭೆ ಚುನಾವಣೆ ಬಳಿಕ ಇದೇ ಮೊದಲ ಬಾರಿಗೆ ವೇದಿಕೆಯಲ್ಲಿ ಜತೆಯಾಗಿ ಕಾಣಿಸಿಕೊಂಡರು.
ಇಲ್ಲಿನ ಮಹಾರಾಜ ಕಾಲೇಜು ಮೈದಾನದಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್– ಜೆಡಿಎಸ್ ಜಂಟಿ ಚುನಾವಣಾ ಪ್ರಚಾರ ಸಭೆಯಲ್ಲಿ ಇಬ್ಬರೂ ಪಾಲ್ಗೊಂಡರು. ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಜೆಡಿಎಸ್ನ ಜಿ.ಟಿ.ದೇವೇಗೌಡ ಅವರು ಸಿದ್ದರಾಮಯ್ಯ ವಿರುದ್ಧ ಗೆಲುವು ಪಡೆದಿದ್ದರು. ಆ ಬಳಿಕ ಬಹಿರಂಗ ಸಭೆಯಲ್ಲಿ ಜತೆಯಾಗಿ ಕಾಣಿಸಿಕೊಂಡಿರಲಿಲ್ಲ.
ಸನ್ಯಾಸಿಯಾಗಲು ಹುಟ್ಟಿಲ್ಲ: ಕಾರ್ಯಕ್ರಮದಲ್ಲಿ ಮಾತನಾಡಿದ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಪ್ರಧಾನಿ ನರೇಂದ್ರ ಮೋದಿ ಮಾಡಿರುವ ಟೀಕೆಗೆ ತಿರುಗೇಟು ನೀಡಿದರು.
‘ನಾನು ಸನ್ಯಾಸಿಯಾಗಲು ಹುಟ್ಟಿಲ್ಲ. ನಾನೊಬ್ಬ ರೈತನ ಮಗ. ಜೀವನವನ್ನು ರಾಜಕೀಯಕ್ಕೆ ಮುಡುಪಾಗಿಟ್ಟಿದ್ದೇನೆ. ಜೀವನದ ಕೊನೆಯ ಉಸಿರಿನವರೆಗೂ ರಾಜಕೀಯದಲ್ಲಿರುತ್ತೇನೆ. ಮೋದಿ ಮಾಡಿರುವ ಟೀಕೆಗಳಿಗೆ ಎಳೆಎಳೆಯಾಗಿ ಉತ್ತರಿಸುವ ಸಾಮರ್ಥ್ಯ ನನ್ನಲ್ಲಿದೆ’ ಎಂದರು.
ದೇವೇಗೌಡ ಅವರು ಭಾಷಣದ ವೇಳೆ ಮೈಸೂರಿನ ಕಾಂಗ್ರೆಸ್ ಅಭ್ಯರ್ಥಿ ವಿಜಯಶಂಕರ್ ಹೆಸರನ್ನು ವಿಜಯಸಂಕೇಶ್ವರ್ ಎಂದೂ, ಬಿಜೆಪಿ ಅಭ್ಯರ್ಥಿ ಪ್ರತಾಪ ಸಿಂಹ ಅವರ ಹೆಸರನ್ನು ವಿಜಯ ಸಿಂಹ ಎಂದೂ ತಪ್ಪಾಗಿ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.