ADVERTISEMENT

ವಿಶ್ವಾಸ ದ್ರೋಹ ಎಸಗಿದ ಸಿದ್ದರಾಮಯ್ಯ: ಎಚ್‌.ಡಿ.ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2019, 12:14 IST
Last Updated 26 ಸೆಪ್ಟೆಂಬರ್ 2019, 12:14 IST
ಎಚ್‌.ಡಿ.ಕುಮಾರಸ್ವಾಮಿ (ಸಂಗ್ರಹ ಚಿತ್ರ)
ಎಚ್‌.ಡಿ.ಕುಮಾರಸ್ವಾಮಿ (ಸಂಗ್ರಹ ಚಿತ್ರ)   

ಮಂಡ್ಯ:ಸಿದ್ದರಾಮಯ್ಯ ಸಾಲ ಮನ್ನಾ ಮಾಡಿದ್ದು ರೈತರಿಗೆ ಪ್ರಯೋಜನ ಆಯ್ತಂತೆ, ನಾನು ಸಾಲ ಮನ್ನಾ ಮಾಡಿದ್ದು ಪ್ರಯೋಜನ ಆಗಲಿಲ್ಲವಂತೆ. ಹೀಗಂತ ಕೆ.ಆರ್‌.ಪೇಟೆಯ ಮಾಜಿ ಶಾಸಕರೊಬ್ಬರು ಹೇಳಿದ್ದಾರೆ. ಆದರೆ, ಸಿದ್ದರಾಮಯ್ಯ ಮಾಡಿದ ವಿಶ್ವಾಸ ದ್ರೋಹದ ಬಗ್ಗೆ ಜನರು ತೀರ್ಮಾನ ಮಾಡುತ್ತಾರೆ’ ಎಂದು ಜೆಡಿಎಸ್‌ ಮುಖಂಡ ಎಚ್‌.ಡಿ.ಕುಮಾರಸ್ವಾಮಿ ಗುರುವಾರ ಆಕ್ರೋಶ ವ್ಯಕ್ತಪಡಿಸಿದರು.

ಬುಧವಾರ ನಿಧನರಾದ ಜೆಡಿಎಸ್‌ ಕೆ.ಆರ್‌.ಪೇಟೆ ತಾಲ್ಲೂಕು ಘಟಕದ ಅಧ್ಯಕ್ಷ ಆರ್‌.ವೆಂಕಟಸುಬ್ಬೇಗೌಡ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಅವರು ಸುದ್ದಿಗಾರರ ಜೊತೆ ಮಾತನಾಡಿದರು.

‘ಅದೇನೋ ಸ್ವಾಭಿಮಾನವಂತೆ, ಸ್ವಾಭಿಮಾನ ಅಂದರೆ ಏನು ಎಂಬುದನ್ನು ಜನ ತೋರಿಸಿಕೊಟ್ಟಿದ್ದಾರಂತೆ. ಮಾಜಿ ಶಾಸಕ ಆಡಿರುವ ಮಾತುಗಳನ್ನು ಹೇಳಿ ನನ್ನ ಬಾಯಿ ಹೊಲಸು ಮಾಡಿಕೊಳ್ಳುವುದಿಲ್ಲ. ಕೆ.ಆರ್‌.ಪೇಟೆ ತಾಲ್ಲೂಕು ಒಂದಕ್ಕೇ 12 ಸಾವಿರ ರೈತರ ₹ 92 ಕೋಟಿ ಸಾಲ ಮನ್ನಾ ಮಾಡಿದ್ದೇನೆ. ಮತ್ತೆ ಬಂದು ಜನರ ಮುಂದೆ ಎಲ್ಲವನ್ನೂ ಬಿಚ್ಚಿಡುತ್ತೇನೆ. ಈಗ ಸಾವಿನ ಮನೆಯಲ್ಲಿ ರಾಜಕಾರಣ ಮಾಡುವುದಿಲ್ಲ’ ಎಂದರು.

‘ನಾನು ಮುಖ್ಯಮಂತ್ರಿಯಾಗಿ 14 ತಿಂಗಳು ಮಾಡಿರುವ ಸಾಧನೆಗಳನ್ನು ಪುಸ್ತಕ ರೂಪದಲ್ಲಿ ಪ್ರಕಟಿಸಿ ರಾಜ್ಯದ ಎಲ್ಲಾ ತಾಲ್ಲೂಕುಗಳಿಗೂ ಕಳುಹಿಸಿಕೊಡುತ್ತೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.