ADVERTISEMENT

ವಿಡಿಯೊಗೆ ಬಿಜೆಪಿ ನಾಯಕರ ತಡೆ: ಇದೇ ಬಿಜೆಪಿ ಸಂಸ್ಕೃತಿ ಎಂದ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2021, 6:30 IST
Last Updated 2 ಆಗಸ್ಟ್ 2021, 6:30 IST
ಸಿದ್ದರಾಮಯ್ಯ
ಸಿದ್ದರಾಮಯ್ಯ    

ಬೆಂಗಳೂರು: ಬಿಜೆಪಿ ನಾಯಕರು ತಮ್ಮ ವಿರುದ್ಧದ ಮಾನಹಾನಿಕರ ವಿಡಿಯೊ ಪ್ರಸಾರಕ್ಕೆ ತಡೆಯಾಜ್ಞೆ ತರುತ್ತಿರುವುದನ್ನು ಗೇಲಿ ಮಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಇದು ಬಿಜೆಪಿ ಸಂಸ್ಕೃತಿಯ ಅಸಲಿಯತ್ತು ಎಂದಿದ್ದಾರೆ.

ಈ ಕುರಿತು ಸೋಮವಾರ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ, ’ಸುಸಂಸ್ಕೃತರ, ಸಂಭಾವಿತರ ಪಕ್ಷ ಎಂದು ತಮ್ಮನ್ನು ತಾವು ಕರೆದುಕೊಳ್ಳುವ ಬಿಜೆಪಿಯಲ್ಲಿ, ಒಬ್ಬರಾದ ಮೇಲೆ ಒಬ್ಬರು ಮಾನಹಾನಿಯಾಗುವಂತ ವೀಡಿಯೋ ಪ್ರಸಾರ ಮಾಡದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತರುತ್ತಿದ್ದಾರೆ. ಇದು ಬಿಜೆಪಿಯವರ ಸಂಸ್ಕೃತಿಯ ಅಸಲಿಯತ್ತು,‘ ಎಂದು ಕುಹಕವಾಡಿದ್ದಾರೆ.

ADVERTISEMENT

ಕಾಂಗ್ರೆಸ್‌–ಜೆಡಿಎಸ್‌ ಸರ್ಕಾರ ಉರುಳಿಸಿ ಬಿಜೆಪಿ ಸೇರಿದ ಕೆಲ ನಾಯಕರು, ಸದಾನಂದ ಗೌಡ, ಮುರುಗೇಶ ನಿರಾಣಿ, ರೇಣುಕಾಚಾರ್ಯ ಸೇರಿದಂತೆ ಹಲವು ತಮ್ಮ ವಿರುದ್ಧದ ಮಾನಹಾನಿಕರ ವಿಡಿಯೊ ಪ್ರಸಾರಕ್ಕೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ.

ಕೊರೊನಾ ಮೂರನೇ ಅಲೆ ನಮ್ಮ ರಾಜ್ಯಕ್ಕೆ ಬರದಂತೆ ತಡೆಯುವುದು ರಾಜ್ಯ ಬಿಜೆಪಿ ಸರ್ಕಾರದ ಪ್ರಾಥಮಿಕ ಕೆಲಸವಾಗಬೇಕು. ಮಹಾರಾಷ್ಟ್ರ ಹಾಗೂ ಕೇರಳ ಗಡಿಗಳಲ್ಲಿ ಕಟ್ಟುನಿಟ್ಟಾಗಿ ತಪಾಸಣೆ ನಡೆಸಿ, ಕೊವಿಡ್ ನೆಗೆಟಿವ್ ವರದಿ ಬಂದವರನ್ನು ಹಾಗೂ ಎರಡೂ ಡೋಸ್ ಲಸಿಕೆ ಪಡೆದವರನ್ನು ಮಾತ್ರ ಗಡಿ ಒಳಗೆ ಬಿಡಬೇಕು ಎಂದೂ ಅವರು ಅದೇ ಟ್ವೀಟ್‌ನಲ್ಲಿ ಆಗ್ರಹಿಸಿದ್ದಾರೆ.

ರಾಜ್ಯ ಬಿಜೆಪಿ ಶಾಸಕರು ಬೆಂಗಳೂರಿನಲ್ಲಿ ಠಿಕಾಣಿ ಹೂಡಿ, ಮಂತ್ರಿ ಪದವಿಗಾಗಿ ಲಾಬಿ ಮಾಡುತ್ತಿದ್ದಾರೆ. ಒಬ್ಬ ಶಾಸಕನೂ ತನ್ನ ಕ್ಷೇತ್ರಕ್ಕೆ ಹೋಗಿ ಕೆಲಸ ಮಾಡುತ್ತಿಲ್ಲ. ಇವರಿಗೆ ಜನರ ಜೀವಕ್ಕಿಂತ ತಾವು ಮಂತ್ರಿಯಾಗುವುದು ಮುಖ್ಯವಾಗಿದೆ ಎಂದು ಅವರು ಟೀಕಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.