ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಅಭಿವೃದ್ಧಿಗೆ ಹಣದ ಕೊರತೆಯಾಗಿಲ್ಲ. ಬಿಜೆಪಿ ಆಡಳಿತದ ಅವಧಿಯ ಕೊನೆಯಲ್ಲಿ ಹಣ ಇಲ್ಲದಿದ್ದರೂ ಮುಖ್ಯಮಂತ್ರಿ ವಿವೇಚನಾ ಕೋಟಾ ₹1.66 ಲಕ್ಷ ಕೋಟಿ ಸೇರಿ ₹4.36 ಲಕ್ಷ ಕೋಟಿ ಮೊತ್ತದ ಕಾಮಗಾರಿಗಳಿಗೆ ಅನುಮೋದನೆ ನೀಡಿದ್ದೇ ಹೊರೆಯಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.
ವಿಧಾನಸಭೆಯಲ್ಲಿ ‘ಗ್ಯಾರಂಟಿಗಳಿಂದಾಗಿ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆ’ ಎಂಬ ವಿಷಯ ಕುರಿತು ವಿರೋಧ ಪಕ್ಷಗಳ ಸದಸ್ಯರು ನಡೆಸಿದ ಚರ್ಚೆಗೆ ಶುಕ್ರವಾರ ಅವರು ಉತ್ತರ ನೀಡಿದರು.
‘ರಾಜ್ಯದ ಖಜಾನೆಯಲ್ಲಿ ಹಣ ಇಲ್ಲದಿದ್ದರೂ, ಬಜೆಟ್ನಲ್ಲಿ ಘೋಷಣೆ ಮಾಡದಿದ್ದರೂ ಬಿಜೆಪಿ ನೇತೃತ್ವದ ಸರ್ಕಾರ ₹4.36 ಲಕ್ಷ ಕೋಟಿ ಮೊತ್ತದ ವಿವಿಧ ಕಾಮಗಾರಿಗಳಿಗೆ ಟೆಂಡರ್ ಆಹ್ವಾನಿಸಿತ್ತು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ, ಹಿಂದಿನ ಸರ್ಕಾರದ ಬಾಕಿ ತೀರಿಸಲು ಸಾಕಷ್ಟು ಆರ್ಥಿಕ ಸಮಸ್ಯೆ ಎದುರಿಸಿತು’ ಎಂದರು.
‘ಗ್ಯಾರಂಟಿ ಯೋಜನೆಗಳಿಗೆ ಇಲ್ಲಿಯವರೆಗೆ ಸರ್ಕಾರ ಖರ್ಚು ಮಾಡಿರುವುದು ₹96,000 ಕೋಟಿ ಅಷ್ಟೆ. ಗ್ಯಾರಂಟಿಗಳು ಅಭಿವೃದ್ಧಿಯ ಒಂದು ಭಾಗ. ಪ್ರತಿ ಕುಟುಂಬಕ್ಕೂ ವಾರ್ಷಿಕ ₹50,000ದಿಂದ ₹60,000 ಸಿಗುತ್ತದೆ. ಹಾಗಾಗಿಯೇ, ತಲಾ ಆದಾಯದಲ್ಲಿ ರಾಜ್ಯ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. ಎಂತಹ ಪರಿಸ್ಥಿತಿಯಲ್ಲೂ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವುದಿಲ್ಲ’ ಎಂದು ಹೇಳಿದರು.
‘ಕೇಂದ್ರ ಸರ್ಕಾರ ತಾರತಮ್ಯ ಮಾಡದೆ ರಾಜ್ಯಕ್ಕೆ ನ್ಯಾಯಯುತವಾಗಿ ಕೊಡಬೇಕಿದ್ದ ತೆರಿಗೆ ಪಾಲು, ಕೇಂದ್ರ ಪುರಸ್ಕೃತ ಯೋಜನೆಗಳ ಬಾಕಿ ನೀಡಿದರೆ ಸಾಕು ಇನ್ನಷ್ಟು ಅಭಿವೃದ್ಧಿ ಕಾರ್ಯಗಳಿಗೆ ಅವಕಾಶವಾಗುತ್ತಿತ್ತು’ ಎಂದರು.
ಕಾಂಗ್ರೆಸ್, ಬಿಜೆಪಿ ಶಾಸಕರ ಮಧ್ಯೆ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಬೇಡ. ಎಲ್ಲ ಕ್ಷೇತ್ರಗಳಿಗೂ ಸಮಾನವಾಗಿ ಹಣ ನೀಡಬೇಕು. ಸದನದಲ್ಲೇ ಭರವಸೆ ನೀಡಬೇಕು ಎಂದು ಪಟ್ಟು ಹಿಡಿದ ಬಿಜೆಪಿ, ಜೆಡಿಎಸ್ ಸದಸ್ಯರು ಸಭಾಧ್ಯಕ್ಷರ ಪೀಠದ ಮುಂದೆ ಧರಣಿಗೆ ಮುಂದಾದರು.
‘ಮೂಲಸೌಕರ್ಯಗಳ ಅಭಿವೃದ್ಧಿಗಾಗಿ ಮೀಸಲಿಟ್ಟ ₹8,000 ಕೋಟಿಯನ್ನು ಎಲ್ಲ ಶಾಸಕರಿಗೂ ಹಂಚಿಕೆ ಮಾಡಲಾಗುವುದು. ಬಿಜೆಪಿ–ಜೆಡಿಎಸ್ ಶಾಸಕರ ಸಭೆ ಕರೆದು, ಕ್ರಿಯಾ ಯೋಜನೆ ಪಡೆದು ಹಣ ಬಿಡುಗಡೆ ಮಾಡಲಾಗುವುದು’ ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.