ಮೈಸೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ ಉಪಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಶನಿವಾರ ಆರೋಪಿಸಿದರು.
ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನರ್ಹ ಶಾಸಕರಿಗೆ ಸಂಬಂಧಿಸಿದಂತೆ ನಿಮಗೆ ನೀಡಿದ್ದ ಎಲ್ಲ ಭರವಸೆ ಈಡೇರಿಸಿದ್ದೇನೆ. ಸಚಿವರನ್ನಾಗಿ ಮಾಡುವೆ, ಶಂಕರ್ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿ ಸಚಿವರನ್ನಾಗಿ ಮಾಡುವೆ ಎಂದು ಹೇಳಿರುವುದು ನೀತಿ ಸಂಹಿತೆಯ ಉಲ್ಲಂಘನೆಯಲ್ಲವೇ ಎಂದು ಪ್ರಶ್ನಿಸಿದರು.
ಮೈಸೂರಿನಲ್ಲಿ ಸಿ.ಪಿ.ಯೋಗೇಶ್ವರ್ ಅವರಿಗೆ ಸಂಬಂಧಿಸಿದ 30 ಸಾವಿರ ಸೀರೆ ಸಿಕ್ಕಿವೆ. ಇದಕ್ಕೆ ಏನು ಹೇಳಬೇಕು. ಸ್ವತಃ ಮುಖ್ಯಮಂತ್ರಿಯೇ ಕಾನೂನು ಉಲ್ಲಂಘಿಸುತ್ತಿದ್ದಾರೆ. ಉಪಚುನಾವಣೆಯಲ್ಲಿ ಗೆಲುವು ಸಾಧಿಸಲಿಕ್ಕಾಗಿ ಇನ್ನೂ ಏನೇನು ಅಕ್ರಮ ಎಸಗುತ್ತಾರೋ ಎಂದು ಹೇಳಿದರು.
15 ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿಯು 8 ಸೀಟುಗಳನ್ನು ಗೆಲ್ಲುವುದಿಲ್ಲ. ಹಾಗಾಗಿ ಚುನಾವಣೆ ಬಳಿಕ ಸಂಕಷ್ಟಕ್ಕೆ ಸಿಲುಕಲಿದೆ. ಅನರ್ಹ ಶಾಸಕರು ರಾಜ್ಯದ ಹಿತದೃಷ್ಟಿಯಿಂದ ರಾಜೀನಾಮೆ ಸಲ್ಲಿಸಿಲ್ಲ. ಬದಲಿಗೆ ಸ್ವಂತ ಹಿತಾಸಕ್ತಿಗಾಗಿ ರಾಜೀನಾಮೆ ನೀಡಿದ್ದಾರೆ ಎಂದು ದೂರಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.