
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಬೆಳಿಗ್ಗೆ ತಮ್ಮ ನಿವಾಸದಿಂದ ದೆಹಲಿಗೆ ಹೊರಡಲು ಮುಂದಾಗುತ್ತಿದ್ದಂತೆ, ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಮಾಜಿ ಸಚಿವ ಕೆ.ಎನ್. ರಾಜಣ್ಣ, ಶಾಸಕರಾದ ಎ.ಎಸ್. ಪೊನ್ನಣ್ಣ, ಬಿ.ಆರ್. ಪಾಟೀಲ, ಅಶೋಕ ಪಟ್ಟಣ, ವಿಜಯಾನಂದ ಕಾಶಪ್ಪನವರ್ ಸೇರಿದಂತೆ ಕೆಲವು ಸಚಿವರು, ಶಾಸಕರು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ಮುಖ್ಯಮಂತ್ರಿ ಜೊತೆ ಚರ್ಚೆ ನಡೆಸಿದ ಶಾಸಕರು, ಸಂಪುಟ ಸೇರುವ ತಮ್ಮ ಬಯಕೆ ವ್ಯಕ್ತಪಡಿಸಿದ್ದಾರೆ. ಸುಮಾರು ಒಂದೂವರೆ ಗಂಟೆ ಮುಖ್ಯಮಂತ್ರಿ ಜೊತೆ ಮಾತುಕತೆ ನಡೆಸಿದ ಕೆ.ಎನ್. ರಾಜಣ್ಣ ಕೂಡಾ ಮತ್ತೊಮ್ಮೆ ಸಂಪುಟದಲ್ಲಿ ಅವಕಾಶ ನೀಡುವಂತೆ ಬೇಡಿಕೆ ಇಟ್ಟಿದ್ದಾರೆಂದು ಗೊತ್ತಾಗಿದೆ.
ಮುಖ್ಯಮಂತ್ರಿ ಜೊತೆ ದೆಹಲಿಗೆ ತೆರಳಲು ಸಚಿವರಾದ ಎಚ್.ಸಿ. ಮಹದೇವಪ್ಪ ಮತ್ತು ಕೃಷ್ಣ ಬೈರೇಗೌಡ ಅವರೂ ಅದೇ ವೇಳೆ ಅಲ್ಲಿಗೆ ಬಂದಿದ್ದರು.
ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಎಚ್.ಸಿ. ಮಹದೇವಪ್ಪ, ‘ಸಚಿವ ಸಂಪುಟ ಪುನರ್ರಚನೆ ವಿಚಾರ ಮುಖ್ಯಮಂತ್ರಿ ಮತ್ತು ಹೈಕಮಾಂಡ್ಗೆ ಬಿಟ್ಟಿದ್ದು’ ಎಂದೂ ಹೇಳಿದರು.
ನಾಯಕತ್ವಕ್ಕೆ ಡಿ.ಕೆ. ಶಿವಕುಮಾರ್ ಪಟ್ಟು ಹಿಡಿದಿರುವ ಬಗ್ಗೆ ಕೇಳಿದಾಗ, ‘ಅವರು ನಮ್ಮ ಪಕ್ಷದ ಅಧ್ಯಕ್ಷರು. ರಾಜ್ಯ ರಾಜಕೀಯದಲ್ಲಿನ ಆಗುಹೋಗುಗಳ ಬಗ್ಗೆ ವರಿಷ್ಠರ ಜೊತೆ ಅವರು ಚರ್ಚಿಸಿರಬಹುದು’ ಎಂದರು.
ವಿಜಯಾನಂದ ಕಾಶಪ್ಪನವರ್ ಮಾತನಾಡಿ, ‘ನಾನು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ. ಹೀಗಾಗಿ ಮುಖ್ಯ ಮಂತ್ರಿ ಅವರನ್ನು ಭೇಟಿ ಮಾಡಿದ್ದೇನೆ. ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವುದಿಲ್ಲ. ನಮ್ಮ ಪಾಲಿಗೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹೈಕಮಾಂಡ್’ ಎಂದರು.
‘ಸಚಿವ ಸ್ಥಾನ ನೀಡುವಂತೆ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ. ವೇಣು ಗೋಪಾಲ್, ಸುರ್ಜೇವಾಲಾ ಅವರಿಗೂ ಮನವಿ ಮಾಡಿದ್ದೇನೆ’ ಎಂದರು.
‘ನಾಯಕತ್ವ ಬದಲಾವಣೆ: ಹೈಕಮಾಂಡ್ ನಿರ್ಧಾರ’
‘ನಾಯಕತ್ವ ಬದಲಾವಣೆ ವಿಷಯವೇ ಅಪ್ರಸ್ತುತ. ಎಲ್ಲವೂ ಹೈಕಮಾಂಡ್ ನಿರ್ಧಾರ’ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಸದ್ಯಕ್ಕೆ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಯೇ ಇಲ್ಲ. ಒಂದು ವೇಳೆ ಸಂಪುಟ ಪುನರ್ರಚನೆ ಅಥವಾ ಯಾವುದೇ ಪ್ರಮುಖ ರಾಜಕೀಯ ನಿರ್ಧಾರ ಕೈಗೊಳ್ಳುವುದಿದ್ದರೆ, ಮುಖ್ಯಮಂತ್ರಿ ಮತ್ತು ವರಿಷ್ಠರು ಸೇರಿ ತೀರ್ಮಾನಿಸುತ್ತಾರೆ’ ಎಂದರು.
ಪಕ್ಷದಲ್ಲಿ ಸಮುದಾಯವಾರು ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿಸುವ ಬೇಡಿಕೆ ಬಗ್ಗೆ ಕೇಳಿದ ಪ್ರಶ್ನೆಗೆ, ‘ಆ ವಿಷಯದ ಬಗ್ಗೆಯೂ ನನಗೆ ಮಾಹಿತಿ ಇಲ್ಲ. ಅದೆಲ್ಲವೂ ಹೈಕಮಾಂಡ್ ಮಟ್ಟದಲ್ಲಿ ತೀರ್ಮಾನವಾಗುವ ವಿಚಾರ’ ಎಂದರು.
‘ಸಂಪುಟ ಪುನರ್ ರಚನೆ ಚರ್ಚೆ ಆಗಿಲ್ಲ’
ತುಮಕೂರು: ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಚರ್ಚೆ ನಡೆದಿಲ್ಲ. ಪುನರ್ ರಚನೆಯಾದರೆ ಖಾತೆ ಬದಲಾವಣೆಯ ಸಂದರ್ಭ ಎದುರಾಗಬಹುದು ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರು ಕೇಳಿದ ‘ನಿಮ್ಮ ಖಾತೆ ಬದಲಾವಣೆಯ ಸಾಧ್ಯತೆ ಇದೆಯಾ’ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ನನಗೆ ಪೊಲೀಸ್ ಇಲಾಖೆ ಮೇಲೆ ಕೋಪ ಇದ್ದರೆ, ಇಲಾಖೆ ಇಷ್ಟ ಇಲ್ಲದಿದ್ದರೆ ಖಾತೆ ಬದಲಾವಣೆಗೆ ಕೇಳಬೇಕು. ಅದು ಯಾವುದೂ ನಡೆದಿಲ್ಲ’ ಎಂದರು. ಸಂಪುಟ ಪುನರ್ ರಚನೆಯ ಕುರಿತು ಯಾವುದೇ ಬೆಳವಣಿಗೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.
ಪೊಲೀಸರು ರಾಷ್ಟ್ರೀಯ, ಅಂತರರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ಪಡೆದರೆ, ಬಡ್ತಿ ಸಮಯದಲ್ಲಿ ಅದನ್ನು ಪರಿಗಣಿಸುತ್ತೇವೆ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.