ADVERTISEMENT

ಅತಿವೃಷ್ಟಿ ಹಾನಿ ಪರಿಹಾರ: ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ತರಾಟೆ

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2020, 6:18 IST
Last Updated 9 ಆಗಸ್ಟ್ 2020, 6:18 IST
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್‌ ನಾಯಕರು
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್‌ ನಾಯಕರು   

ಬೆಂಗಳೂರು: ಅತಿವೃಷ್ಟಿ ಹಾನಿಗೆ ಪರಿಹಾರ ಕಲ್ಪಿಸುವ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಸರ್ಕಾರವನ್ನು ತೀವ್ರತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು, 'ಕಳೆದ ವರ್ಷದ ಅತಿವೃಷ್ಟಿಯ ಹಾನಿಗೆ ಪರಿಹಾರ ಕಲ್ಪಿಸಲು ವಿಫಲವಾಗಿರುವ ಕಾರಣದಿಂದಾಗಿಯೇ ಈ ಬಾರಿಯ ಅತಿವೃಷ್ಟಿಗೆ ರಾಜ್ಯಸರ್ಕಾರ ಕೈಕಾಲು ಬಿಡುತ್ತಿದೆ. ಕಳೆದ ತಿಂಗಳೇ ಪತ್ರ ಬರೆದು ಎಚ್ಚರಿಸಿದ್ದೆ, ಎಂದಿನಂತೆ ಸರ್ಕಾರದಿಂದ ಉತ್ತರ ಇಲ್ಲ. ಈಗ ಬೆಂಕಿ ಬಿದ್ದ ಮೇಲೆ ಬಾವಿ ತೋಡಲು ಹೊರಟಿದೆ' ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರನ್ನು ಟ್ಯಾಗ್‌ ಮಾಡಿ ಪ್ರಶ್ನಿಸಿರುವ ಅವರು, 'ಕಳೆದ ವರ್ಷದ ಪ್ರವಾಹದಿಂದ ಹಾನಿಗೊಳಗಾದ ರಸ್ತೆ, ಸೇತುವೆ, ಸರ್ಕಾರಿ ಕಟ್ಟಡಗಳೆಷ್ಟು? ಅವುಗಳಲ್ಲಿ ಎಷ್ಟು ಪೂರ್ಣವಾಗಿ ದುರಸ್ತಿಗೊಂಡಿವೆ? ಖರ್ಚಾಗಿರುವ ಹಣ ಎಷ್ಟು? ಬಾಕಿ ಉಳಿದಿರುವ ಕಾಮಗಾರಿಗಳೆಷ್ಟು? ಈಗಲಾದರೂ ಈ ವಿವರ ನೀಡುವಿರಾ ಗೋವಿಂದ್‌ ಕಾರಜೋಳ ಅವರೇ?' ಎಂದು ಟ್ವೀಟ್‌ ಮಾಡಿದ್ದಾರೆ.

ADVERTISEMENT

ಸಚಿವ ವಿ.ಸೋಮಣ್ಣ ಅವರನ್ನು ಪ್ರಶ್ನಿಸಿರುವ ಸಿದ್ದರಾಮಯ್ಯ, 'ಕಳೆದ ವರ್ಷದ ಅತಿವೃಷ್ಟಿಯಿಂದ ಹಾನಿಗೀಡಾದ ಮನೆಗಳಿಗೆ ನೀಡಿದ ಪರಿಹಾರ ಎಷ್ಟು? ಕಟ್ಟಿದ ಹೊಸ ಮನೆಗಳೆಷ್ಟು ಪ್ರತಿಬಾರಿ ನೆರೆ ನೀರಿನಲ್ಲಿ ಮುಳುಗುವ ಮನೆಗಳೆಷ್ಟು? ಎಷ್ಟು ಕುಟುಂಬಗಳು ಶೆಡ್‌ನಲ್ಲಿವೆ? ಎಷ್ಟು ಕುಟುಂಬಗಳು ಬಾಡಿಗೆ ಮನೆಯಲ್ಲಿವೆ? ಈ‌ ಮಾಹಿತಿ ನೀಡುವಿರಾ ವಿ.ಸೋಮಣ್ಣ ಅವರೇ?' ಎಂದು ಟ್ವೀಟಿಸಿದ್ದಾರೆ.

ಸಚಿವೆ ಶಶಿಕಲಾ ಜೊಳ್ಳೆ ಅವರನ್ನು ಪ್ರಶ್ನಿಸಿರುವ ಸಿದ್ದರಾಮಯ್ಯ 'ಕಳೆದ ವರ್ಷದ ಅತಿವೃಷ್ಟಿಯಿಂದ ಹಾನಿಗೀಡಾದ ಅಂಗನವಾಡಿ ಕಟ್ಟಡಗಳೆಷ್ಟು? ಅವುಗಳಲ್ಲಿ ದುರಸ್ತಿವಾಗಿರುವುದೆಷ್ಟು? ಪುನರ್ ನಿರ್ಮಾಣವಾಗಿದ್ದೆಷ್ಟು? ಇವುಗಳ ದುರಸ್ತಿ-ಪುನರ್ ನಿರ್ಮಾಣಕ್ಕೆ ಖರ್ಚಾದ ಹಣ ಎಷ್ಟು? ದಯವಿಟ್ಟು ವಿವರ ನೀಡುವಿರಾ? ಶಶಿಕಲಾ ಜೊಳ್ಳೆ ಅವರೇ? ಎಂದು ಟ್ವೀಟ್‌ ಮಾಡಿದ್ದಾರೆ.

ಕಳೆದ ವರ್ಷದ ಅತಿವೃಷ್ಟಿಯಿಂದ ಹಾನಿಗೀಡಾದ ಸರ್ಕಾರಿ ಶಾಲಾ ಕಟ್ಟಡಗಳೆಷ್ಟು? ಎಷ್ಟು ಕಟ್ಟಡಗಳನ್ನು ದುರಸ್ತಿ ಪಡಿಸಲಾಗಿದೆ ಮತ್ತು ಪುನರ್ ನಿರ್ಮಿಸಿಗೊಳ್ಳಲಾಗಿದೆ? ದುರಸ್ತಿಗೆ ಬಾಕಿ ಉಳಿದಿರುವುದು ಎಷ್ಟು? ಇದಕ್ಕಾಗಿ ಖರ್ಚಾದ ಹಣ ಎಷ್ಟು? ಈಗಲಾದರೂ ವಿವರ ನೀಡಬಹುದೇ' ಎಂದು ಸಚಿವ ಸುರೇಶ್‌ ಕುಮಾರ್‌ ಅವರನ್ನು ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.