ADVERTISEMENT

ರಾಜ್ಯಪಾಲರು ಮಧ್ಯಪ್ರವೇಶಿಸಿ ಸರ್ಕಾರವನ್ನು ವಜಾಗೊಳಿಸಬೇಕು: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 17 ಜೂನ್ 2021, 9:40 IST
Last Updated 17 ಜೂನ್ 2021, 9:40 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬೆಂಗಳೂರು: ‘ರಾಜ್ಯದಲ್ಲಿ ಬಿಜೆಪಿ ನಾಯಕರ ಒಳಜಗಳದಿಂದ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದೆ. ರಾಜ್ಯಪಾಲರು ತಕ್ಷಣ ಮಧ್ಯಪ್ರವೇಶಿಸಿ, ರಾಜ್ದ ಬಿಜೆಪಿ ಸರ್ಕಾರವನ್ನು ವಜಾಗೊಳಿಸಬೇಕು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

‘ಪರಸ್ಪರ ಕಚ್ಚಾಟದಲ್ಲಿ ತೊಡಗಿರುವ ರಾಜ್ಯದ ಬಿಜೆಪಿ ನಾಯಕರಿಗೆ ಕಿವಿ ಹಿಂಡಿ ಬುದ್ದಿ ಹೇಳಬೇಕಾದ ಬಿಜೆಪಿಯ ಹೈಕಮಾಂಡ್ ತಾನೇ ರಾಜ್ಯದ ನಾಯಕರನ್ನು ಪರಸ್ಪರ ಎತ್ತಿಕಟ್ಟಿ ಕಳ್ಳಾಟ ಆಡುತ್ತಿದೆ. ರಾಜ್ಯದ ಹಿತಾಸಕ್ತಿಗೆ ಮಾರಕವಾಗಿರುವ ಈ ಭಿನ್ನಮತವನ್ನು ನಿಯಂತ್ರಿಸಲಿಕ್ಕೆ ಆಗದೆ ನರೇಂದ್ರಮೋದಿ, ತಾವೊಬ್ಬ ದುರ್ಬಲ ನಾಯಕನೆಂದು ಸಾಬೀತುಪಡಿಸಿಕೊಳ್ಳುತ್ತಿದ್ದಾರೆ. 56 ಇಂಚಿನ ಎದೆಯವನು ಎಂದು ಕೊಚ್ಚಿಕೊಳ್ಳುತ್ತಿರುವ ನರೇಂದ್ರಮೋದಿ, ತನ್ನ ಎದೆ ಸುತ್ತಳತೆ ಎಷ್ಟಿದೆ ಎನ್ನುವುದನ್ನಾದರೂ ಸ್ಪಷ್ಟಪಡಿಸಲಿ’ ಎಂದು ಕುಟುಕಿದರು.

‘ಕೊರೊನಾ ನಿಯಂತ್ರಣದ ಮೇಲುಸ್ತುವಾರಿ ನೋಡಿಕೊಳ್ಳಬೇಕಾಗಿರುವ ಸಚಿವರು ತಮ್ಮ ಕಚೇರಿಗೆ ಹೋಗದೆ ಪಕ್ಷದ ಕಚೇರಿಯಲ್ಲಿ ಬೀಡುಬಿಟ್ಟಿದ್ದಾರೆ. ತಮ್ಮ ಸ್ವಂತ ಕ್ಷೇತ್ರದಲ್ಲಿ ಜನರ ನೋವು-ಕಷ್ಟಗಳಿಗೆ ಸ್ಪಂದಿಸಬೇಕಾಗಿರುವ ಬಿಜೆಪಿ ಶಾಸಕರು ಪಕ್ಷದ ಕಚೇರಿ ಸುತ್ತುತ್ತಿದ್ದಾರೆ. ಒಟ್ಟಿನಲ್ಲಿ ರಾಜ್ಯದಲ್ಲಿ ಸರ್ಕಾರವೇ ಇಲ್ಲದ ಅರಾಜಕ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದಿದ್ದಾರೆ.

‘ರಾಜ್ಯದಲ್ಲಿ ಮತ್ತೆ ಕೊರೊನಾ ಸೋಂಕು ಮತ್ತು ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ವ್ಯಾಪಕವಾಗಿ ಹರಡುತ್ತಿರುವ ಸೋಂಕಿನ ನಿಯಂತ್ರಣದ ಬಗ್ಗೆ ನಿಗಾ ವಹಿಸುವವರೇ ಇಲ್ಲವಾಗಿದೆ. ಕೊರೊನಾ ಮೂರನೇ ಅಲೆ ನಿರೀಕ್ಷೆಗಿಂತಲೂ ಬೇಗನೇ ಬಂದು ಅಪ್ಪಳಿಸುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಸುತ್ತಲೇ ಇದ್ದಾರೆ. ಲಸಿಕೆ ಪೂರೈಕೆಯಲ್ಲಿನ ಕೊರತೆ, ಡೋಸ್ ಅವಧಿಯ ಬಗೆಗಿನ ಗೊಂದಲ ಮತ್ತು ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳ ನಡುವಿನ ತಿಕ್ಕಾಟಗಳಿಂದ ಲಸಿಕೆ ನೀಡುವ ಕೆಲಸವೂ ಕುಂಟುತ್ತಾ ಸಾಗಿದೆ’ ಎಂದೂ ಹೇಳಿದ್ದಾರೆ.

‘ಮಳೆಗಾಲವಾಗಿರುವ ಕಾರಣ ಶೀತ-ಜ್ವರದ ಕಾಯಿಲೆಯೂ ಸಾಮಾನ್ಯವಾಗಿರುವ ಕಾರಣ ಕೊರೊನಾ ಸೋಂಕನ್ನು ನಿಖರವಾಗಿ ಪತ್ತೆ ಹಚ್ಚುವುದು ಕೂಡಾ ಸಮಸ್ಯೆಯಾಗಲಿದೆ. ಇನ್ನೊಂದೆಡೆ ಶಾಲಾ ಪರೀಕ್ಷೆ ಮತ್ತು ಬೋಧನಾ ಶುಲ್ಕದ ಗೊಂದಲ ಇನ್ನೂ ಬಗೆಹರಿದಿಲ್ಲ. ಈ ಪರಿಸ್ಥಿತಿಯಲ್ಲಿ ಸಚಿವರೆಲ್ಲರನ್ನೂ ಮುಖ್ಯಮಂತ್ರಿ ವಿಶ್ವಾಸಕ್ಕೆ ಪಡೆದು ಒಗ್ಗಟ್ಟಿನಿಂದ ಆರೋಗ್ಯ ಸಂಬಂಧಿ ತುರ್ತುಪರಿಸ್ಥಿತಿ ಎದುರಿಸಿ ರಾಜ್ಯದ ಜನತೆಯ ಹಿತ ಕಾಪಾಡಲು ಮುಂದಾಗಬೇಕಾಗಿತ್ತು. ಆದರೆ ಮುಖ್ಯಮಂತ್ರಿ, ಸಚಿವರು, ಶಾಸಕರು ಮತ್ತು ಪಕ್ಷದ ಹೈಕಮಾಂಡ್ ನಾಯಕರ ಕೈಕಾಲು ಹಿಡಿದು ತಮ್ಮ ಕುರ್ಚಿ ಉಳಿಸಿಕೊಳ್ಳಲು ಹೆಣಗಾಡುತ್ತಿದ್ದಾರೆ’ ಎಂದೂ ದೂರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.